ಶಾಲೆಗಳಿಗೆ ಕೇಸರಿ ಬಣ್ಣ ವಿಚಾರದಲ್ಲಿ ರಾಜಕೀಯ ಕೆಳಮಟ್ಟದ್ದು: ಬೊಮ್ಮಾಯಿ
ಬೆಂಗಳೂರು, ನವೆಂಬರ್ 14: ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಕಾಂಗ್ರೆಸ್ಗೆ ಸಿಟ್ಟು?. ಪ್ರತಿ ವಿಷಯದಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದರು.
ಸೋಮವಾರ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಜನ್ಮದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಕಾಂಗ್ರೆಸ್ಗೆ ಸಿಟ್ಟು?. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಒಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಜ್ಞಾನ. ಅದು ಎಲ್ಲರಿಗೆ ಸಿಗಬೇಕು ಎಂದು ಹೇಳಿದರು.

ದೇಶ ಮುನ್ನಡೆಸಿದ ಮೊದಲ ಪ್ರಧಾನಿ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯ ಅರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದರು ನೆಹರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು. ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್ಮೆಂಟ್ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ಮಾಡಿದ ಕೆಲಸ ಅದ್ಭುತವಾದದ್ದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications