ನಿಫಾ ವೈರಸ್; ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು, ಸೆ. 08: ಬೆಂಗಳೂರು ನಗರ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಪೂರಕವಾದ ಉಪ ನಗರ (ಸ್ಯಾಟಲೈಟ್) ವರ್ತುಲ ರಸ್ತೆ ಯೋಜನೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಭೂಸಾರಿಗೆ, ರಾಷ್ಟ್ರೀಯ ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಭಾರತ್ಮಾಲಾ ಪರಿಯೋಜನಾ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಬೆಂಗಳೂರು ಸುತ್ತಲಿನ ಸಂಚಾರವನ್ನು ಸುಗಮ ಗೊಳಿಸುವ ಉಪನಗರ ವರ್ತುಲ ರಸ್ತೆ ಯೋಜನೆಯ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಸಚಿವರು ಒಪ್ಪಿರುವುದನ್ನು ಸ್ಮರಿಸಿದರು. ಈ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಸರ್ಕಾರವು ಭೂಸ್ವಾಧೀನ ವೆಚ್ಚ 1560 ಕೋಟಿ ರೂ. ಗಳ ಶೇ. 30ರಷ್ಟನ್ನು ಭರಿಸಲು ಸಮ್ಮತಿ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಭೇಟಿಯ ವೇಳೆ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗೆ 184.85 ಕೋಟಿ ರೂ. ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಿರಾಡಿ ಘಾಟಿಯಲ್ಲಿ ಟನೆಲ್ ಬೈಪಾಸ್ ನಿರ್ಮಾಣ, ವಿಜಯಪುರ ಸಂಕೇಶ್ವರ ಹೆದ್ದಾರಿ ಸುಧಾರಣೆ ಕುರಿತು ಸಹ ಚರ್ಚಿಸಲಾಯಿತು.
ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಡಿಪಿಆರ್ ಸಿದ್ಧ ಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
ನಿಫಾ ವೈರಸ್; ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ:
Recommended Video
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಹಾಗೂ ತಜ್ಞರ ಸಮಿತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕೊರೊನಾ ಮೂರನೇ ಅಲೆಯ ಆತಂಕ ನೆರೆಯ ರಾಜ್ಯ ಕೇರಳದಲ್ಲಿ ಕಂಡು ಬಂದಿತ್ತು. ಹೀಗಾಗಿ ಅಲ್ಲಿಂದ ಬರುವವರ ಮೇಲೆ ನಿರ್ಬಂಧವನ್ನು ಹೇರಲಾಗಿದೆ. ಜೊತೆಗೆ ಈಗ ನಿಫಾ ವೈರಸ್ ಸಂಕಷ್ಟ ಕೂಡ ಕೇರಳ ರಾಜ್ಯಕ್ಕೆ ಎದುರಾಗಿದೆ. ಆದರಿಂದ ಅಲ್ಲಿಂದ ಬರುವವರ ಮೇಲೆ ನಿರ್ಬಂಧ ಹಾಕುವುದೂ ಸೇರಿದಂತೆ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚಿಸಿದೆ.
ಸಾಂಕ್ರಾಮಿಕ ಸೋಂಕುಗಳ ವಿರುದ್ಧ ಹೋರಾಟ ಮಾಡಲು ಹಾಗೂ ಸೋಂಕು ನಿವಾರಿಸಲು ಚೈನ್ ಬ್ರೇಕ್ ಮಾಡುವುದು ಅತಿ ಮುಖ್ಯವಾಗಿರುತ್ತದೆ. ಇದೇ ಹಿನ್ನೆಲೆಯಲ್ಲಿ ತಜ್ಞರ ಸಲಹೆಯಂತೆ ರಾಜ್ಯ ಸರ್ಕಾರ ನಿಯಮಗಳನ್ನು ಜಾರಿಗೆ ತರುತ್ತಿದೆ.
ಕೇರಳದಲ್ಲಿ ಒಂದೆಡೆ ಕೊರೋನಾ ಸೋಂಕು ಜನರನ್ನು ಕಾಡುತ್ತಿದೆ. ಇದರ ನಡುವೆ ಮತ್ತೆ ಕಾಣಿಸಿಕೊಂಡಿರುವ ಮತ್ತೊಂದು ರೋಗ ಜನರಲ್ಲಿ ಮತ್ತೆ ಭೀತಿ ಹುಟ್ಟಿಸಿದೆ. ಈ ಸೋಂಕು ಕೇರಳದಲ್ಲಿ ಅಪಾಯಕಾರಿ ನಿಫಾ ವೈರಸ್ . ಇದು ಪ್ರಾಣಿಗಳಿಂದ, ಹಣ್ಣುಗಳ ಮೂಲಕ ಮನುಸ್ಯರಿಗೆ ಹರಡುತ್ತದೆ.