ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಸೆ. 27: ಎಷ್ಟೇ ದೊಡ್ಡ ಹುದ್ದೆಗೇರಿದರೂ ಅಧ್ಯಯನ ಮಾಡಿದ ಕಾಲೇಜಿನಲ್ಲಿ ಸನ್ಮಾನ ಮಾಡಿಸಿಕೊಳ್ಳುವುದು ಯಾವುದೇ ವಿದ್ಯಾರ್ಥಿಗಾದರೂ ಸಂತಸದ ಸಂಗತಿ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಲ್ಲಿನ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸನ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿ.
ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ತಾವು ಬಿವಿಬಿ ಕಾಲೇಜಿನಲ್ಲಿ ಕಳೆದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಬಿವಿಬಿ ಕಾಲೇಜು ಕಲಿಸಿದ ಪಾಠಗಳನ್ನು ಆಡಳಿತದಲ್ಲಿಯೂ ಅಅಳವಡಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಏನೇನು ನೆನಪುಗಳನ್ನು ಹಂಚಿಕೊಂಡರು? ಮುಂದಿದೆ!
ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು. ಯುವಕರಲ್ಲಿ ವಿದ್ಯೆ, ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ ಹಾಗೂ ಸರ್ಕಾರಗಳ ಜವಾಬ್ದಾರಿಯಾಗಿದೆ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ, ಸಮಾಜಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ ಕೊಡುಗೆಗಳನ್ನು ಮರಳಿ ಕೊಡಬೇಕು. ಕೆಎಲ್ಇ ಸಂಸ್ಥೆಯ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ವಿವಿಧ ಬಹು ಅಧ್ಯಯನ ಶಿಸ್ತುಗಳಲ್ಲಿ ಮಾದರಿಯಾಗಿ ರೂಪುಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ತಾವು ಅಧ್ಯಯನ ಮಾಡಿದ್ದ ಕಾಲೇಜಿನ ಬಗ್ಗೆ ಸಂಸತದಿಂದ ಮಾತನಾಡಿದ್ದಾರೆ.
ಮತ್ತೊಮ್ಮೆ ಪ್ರವೇಶ ಪಡೆಯಲು ಮನಸ್ಸಾಗುತ್ತಿದೆ!
"ಇಂದು ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದೆ. ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶ ಪಡೆಯಲು ಮನಸ್ಸಾಗುತ್ತಿದೆ" ಎಂದು ತಮಗೆ ವಿದ್ಯೆ ನೀಡಿದ ಕಾಲೇಜಿನ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ತಮಗೆ ಕಲಿಸಿದ ಪ್ರಾಧ್ಯಾಪಕರು, ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು, ಪುಸ್ತಕ ಪಡೆದ ಗ್ರಂಥಾಲಯಗಳು, ಹಾಸ್ಟೇಲು, ಕ್ಯಾಂಪಸ್, ಕ್ಯಾಂಟೀನ್ ಎಲ್ಲವನ್ನೂ ಸಿಎಂ ಬಸವರಾಜ ಬೊಮ್ಮಾಯಿ ನೆನಪಿಸಿಕೊಂಡಿದ್ದಾರೆ.
ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ!
"ತಾವು ಮುಖ್ಯಮಂತ್ರಿಯಾಗಿ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಗಳಲ್ಲಿ ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ. ಆಡಳಿತದಲ್ಲಿ ತಾಂತ್ರಿಕತೆ, ವೈಜ್ಞಾನಿಕತೆ ತರಲು ಉತ್ಸುಕನಾಗಿದ್ದೇನೆ. ಪ್ರತಿ ಹಂತದಲ್ಲಿಯೂ ನನ್ನ ಜ್ಞಾನವನ್ನು ಪ್ರಸ್ತುತ ಸಂಶೋಧನೆಗಳೊಂದಿಗೆ ತಾಳೆ ಮಾಡಿ ಪರೀಕ್ಷಿಸಿಕೊಳ್ಳುತ್ತಿರುತ್ತೇನೆ. ಸಾರ್ವಜನಿಕ ಉಪಯೋಗ, ಸಂಕೇತಗಳ ರವಾನೆಗೆ ವೈರ್ಲೆಸ್ ತಂತ್ರಜ್ಞಾನ, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಸಾಫ್ಟವೇರ್ ಕ್ಷೇತ್ರಗಳ ಅತ್ಯಾಧುನಿಕ ವಿದ್ಯೆ, ಸಂಶೋಧನೆಗಳಲ್ಲಿ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಮಹತ್ವದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಡಾ. ನಂಜುಂಡಪ್ಪ ನೆನಪಿಸಿಕೊಂಡ ಸಿಎಂ ಬೊಮ್ಮಾಯಿ!
"ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ. ಡಿ. ಎಂ. ನಂಜುಂಡಪ್ಪ ಅವರ ಕಾಠಿಣ್ಯ, ಶಿಸ್ತು, ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು. ಉತ್ತಮ ಭೂತಕಾಲವಷ್ಟೇ ಅಲ್ಲ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಅಷ್ಟೇ ಮುಖ್ಯ. ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ. ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ. ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು. ಕರ್ತವ್ಯವನ್ನು ನೈತಿಕತೆಯ ತಳಹದಿಯೊಂದಿಗೆ ಗೌರವ ಕಾಯಕದ ರೀತಿಯಲ್ಲಿ ನಿರ್ವಹಿಸಬೇಕು. ದೇಶದ ಬಡತನ, ಆರೋಗ್ಯ, ಶಿಕ್ಷಣ, ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು. ಅದೇ ಜನರ, ಜನಪರ ರಾಜಕೀಯವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ
ಇದೇ ವೇಳೆ ಬಿವಿಬಿ ಕಾಲೇಜಿನ ಮತ್ತೊಬ್ಬ ಮಾಜಿ ವಿದ್ಯಾರ್ಥಿ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಸನ್ಮಾನಿಸಲಾಯಿತು. ಸಚಿವ ನಿರಾಣಿ ಅವರು ಮಾತನಾಡಿ, "ಕಾಲೇಜಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಹಂಚಿಕೊಳ್ಳುತ್ತಿರುವುದು, ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ. ಕೆಎಲ್ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು, ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ. 3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಬೇಕು" ಎಂದರು.