ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ!
ಬೆಂಗಳೂರು, ನ. 04: ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ಬಸವರಾಜ ಬೊಮ್ಮಾಯಿ ಅವರು ನೂರು ದಿನಗಳನ್ನು ಪೂರೈಸಿದ್ದಾರೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಮೊದಲ ಅಗ್ನಿಪರೀಕ್ಷೆಯಲ್ಲಿ ಮಿಶ್ರ ಸಾಧನೆಯನ್ನೂ ಸಿಎಂ ಬೊಮ್ಮಾಯಿ ಮಾಡಿದ್ದಾರೆ. ಎರಡು ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಬಿಜೆಪಿ ಒಂದರಲ್ಲಿ ಗೆದ್ದು, ಮತ್ತೊಂದರಲ್ಲಿ ಸೋತಿದೆ. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಈ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾವನ್ನುಂಟು ಮಾಡುವುದಿಲ್ಲ. ಆದರೂ ಇದು ಒಂದರ್ಥದಲ್ಲಿ ಬೊಮ್ಮಾಯಿ ಅವರಿಗೆ ಆಗಿರುವ ಹಿನ್ನಡೆಯೆಂದೇ ಬಿಜೆಪಿಯಲ್ಲಿ ಚರ್ಚೆಗಳು ನಡೆದಿವೆ.
ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಅದಕ್ಕೆ ಕಾರಣವಾಗಿರುವುದು ಖಾಲಿ ಇರುವ ಸಚಿವಸ್ಥಾನಗಳು. ಎರಡು ಬಾರಿ ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಇನ್ನೂ ನಾಲ್ಕು ಸಚಿವ ಸ್ಥಾನಗಳು ಖಾಲಿಯಿವೆ. ಜೊತೆಗೆ ಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇನ್ನೇನು ಹೆಚ್ಚು ಕಾಲ ಉಳಿದಿಲ್ಲ. ಕೊನೆಯ ಒಂದು ವರ್ಷ ಚುನಾವಣೆ ವರ್ಷವಾಗಿರುತ್ತದೆ.
ಹೀಗಾಗಿ ಮಂತ್ರಿಸ್ಥಾನದ ಆಕಾಂಕ್ಷಿಗಳಿಂದ ಮುಖ್ಯಮಂತ್ರಿಗಳ ಮೇಲೆ ಭಾರಿ ಒತ್ತಡವಿದೆ ಎಂಬ ಮಾಹಿತಿಯಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.
ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ!
ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವ ಭರವಸೆಯನ್ನು ಬಿಜೆಪಿ ಹೈಕಮಾಂಡ್ ಕೊಟ್ಟಿತ್ತು. ಜೊತೆಗೆ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನು 16 ತಿಂಗಳುಗಳು ಉಳಿದಿವೆ. ಆದರೆ ಇನ್ನೂ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿಲ್ಲ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಮೊದಲ ಉಪ ಸಮರದಲ್ಲಿ ಬಿಜೆಪಿ ತೀರಾ ಕಳಪೆ ಸಾಧನೆಯನ್ನೇನು ಮಾಡಿಲ್ಲ. ಆದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಬೇಕಿದೆ. ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಕುರಿತು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ!
ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹುಬ್ಬಳ್ಳಿಯ ನಿವಾಸದಲ್ಲಿ ದೀಪಾವಳಿ ಹಬ್ಬ ಆಚರಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. "ಹೈಕಮಾಂಡ್ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ಅಲ್ಲದೇ ಸಂಪುಟ ವಿಸ್ತರಣೆಯೂ ಸಧ್ಯಕ್ಕಿಲ್ಲ. ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಹೋಗುತ್ತೇನೆ" ಎಂದಿದ್ದಾರೆ.
ಸೆಪ್ಟಂಬರ್ನಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದ ಸಿಎಂ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಕಳೆದ ಸೆಪ್ಟಂಬರ್ನಲ್ಲಿಯೇ ದೆಹಲಿ ಪ್ರವಾಸ ಮಾಡಿದ್ದರು. ಆ ಪ್ರವಾಸ ಮಂತ್ರಿ ಹುದ್ದೆ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರುವಂತೆ ಮಾಡಿತ್ತು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದರೂ, ಉಳಿದಿರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಆಗಲೂ ಯಾವುದೇ ಚರ್ಚೆ ನಡೆದಿರಲಿಲ್ಲ. ಅದಾಗಿ ಎರಡು ತಿಂಗಳುಗಳಾದರೂ ಹೈಕಮಾಂಡ್ ಸಂಪುಟ ವಿಸ್ತರಣೆ ಬಗ್ಗೆ ಬಾಯಿ ಬಿಡುತ್ತಿಲ್ಲ.
ಯಾವ ಕಾರಣಕ್ಕಾಗಿ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ?
ಮುಖ್ಯಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರಲು ಹಲವು ಹಿರಿಯ ಶಾಸಕರು ಪ್ರಯತ್ನ ನಡೆಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಯಾವುದೇ ಚರ್ಚೆ ಅಥವಾ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ. ಇನ್ನು ಕೆಲ ದಿನಗಳ ಕಾಲ ಮಂತ್ರಿ ಸ್ಥಾನಗಳನ್ನು ಭರ್ತಿ ಮಾಡದಿರಲು ಹೈಕಮಾಂಡ್ ತೀರ್ಮಾನ ಮಾಡಿದೆ ಎಂಬ ಮಾಹಿತಿಯಿದೆ. ಯಾವ ಕಾರಣಕ್ಕಾಗಿ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ ಎಂಬ ಗುಟ್ಟನ್ನು ಬಿಜೆಪಿ ಹೈಕಮಾಂಡ್ ಬಿಟ್ಟುಕೊಡುತ್ತಿಲ್ಲ. ಇದು ಸಚಿವಾಕಾಂಕ್ಷಿಗಳಲ್ಲಿ ಆತಂಕ ಸೃಷ್ಟಿಸಿದೆ.