ರಾಜ್ಯಕ್ಕೆ ಸಿಹಿ ಸುದ್ದಿ; ಕಳಸಾ ಬಂಡೂರಿ ಯೋಜನೆ ಡಿಪಿಆರ್ ತಯಾರಿಸಲು ಶೀಘ್ರ ಅನುಮತಿ!
ಬೆಂಗಳೂರು, ಆ. 25: ಮೊದಲೇ ತಿಳಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀರಾವರಿ ಯೋಜನೆಗಳ ಕುರಿತು ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ರನ್ನು ಭೇಟಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಮಾನ್ಯತೆ ಹಾಗೂ ಮಹದಾಯಿ ಯೋಜನೆ ಜಾರಿಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಕೆಗೆ ಕೇಂದ್ರ ಸರ್ಕಾರ ಸಹಮತ ವ್ಯಕ್ತಪಡಿಸಿದೆ.
ಬುಧವಾರ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ದೊರೆಯಬೇಕಿರುವ ಅನುಮತಿ ಹಾಗೂ ಅಂತರಾಜ್ಯ ವಿವಾದಗಳನ್ನು ಪರಿಹರಿಸುವ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಮಂತ್ರಿಸ್ಥಾನದ ಆಕಾಂಕ್ಷಿಗಳಿಗೆ ದೆಹಲಿಯಿಂದ ಕಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ!
ಆಂಧ್ರಪ್ರದೇಶ ಹಾಗೂ ತೆಲಂಗಾಣ ತಕರಾರು ಅರ್ಜಿ!
ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ರಾಜ್ಯದ ನೀರಾವರಿ ವಿಚಾರಗಳ ಕುರಿತು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಪರಿಸರ ಇಲಾಖೆ ಅನುಮತಿ ನೀಡುವುದು, ಕೃಷ್ಣಾ ನದಿ ಯೋಜನೆಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ತಕರಾರು ಅರ್ಜಿಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸಲು ಕೇಂದ್ರ ಸರ್ಕಾರದ ಸಹಕಾರ ನೀಡುವುದು, ಭದ್ರಾ ಹಾಗೂ ಎತ್ತಿನಹೊಳೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳುವಂತೆಯೂ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆ!
ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರದ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಕೃಷ್ಣಾ ಮೇಲ್ದಂಡೆ 3 ನೇ ಹಂತದ ಯೋಜನೆ ಬಗ್ಗೆೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಚರ್ಚೆ ಮಾಡಿದ್ದೇವೆ.
ಮೇಕೆದಾಟು ಯೋಜನೆ ಬಗ್ಗೆೆ ಸ್ಪಷ್ಟವಾಗಿ ಹೇಳಿದ್ದೇವೆ. ಅದು ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆಯೂ ಆಗಿದೆ. ಕುಡಿಯುವ ನೀರಿಗಾಗಿ ಸುಪ್ರೀಂ ಕೋರ್ಟ್ ಆದೇಶವೇ ಇದೆ. ಈ ಯೋಜನೆಯ ಡಿಪಿಆರ್ ಸಹ ಸಲ್ಲಿಕೆಯಾಗಿದೆ ಎಂದು ಹೇಳಿದ್ದೇವೆ. ಈ ಬಗ್ಗೆೆ ಚಿಂತೆ ಮಾಡಬೇಡಿ ಮುಂದಿನ ಸಿಡಬ್ಲ್ಯೂಸಿ ಸಭೆಯಲ್ಲಿ ತರುವುದಾಗಿ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ" ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಕಳಸಾ ಬಂಡೂರಿಗೆ ಡಿಪಿಆರ್ ಮಾಡಲು ಅನುಮತಿ!
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಮುಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ಎತ್ತಿನ ಹೊಳೆ ಯೋಜನೆ ಬಗ್ಗೆೆ ಹಲವು ಆಯಾಮಗಳಲ್ಲಿ ಚರ್ಚೆಯಾಗಿದೆ. ಈ ಯೋಜನೆಗೆ ಜಲಜೀವನ್ ಮಿಷನ್ ಅಡಿಯಲ್ಲಿ ಅನುದಾನ ನೀಡಲು ಕೇಳಿದ್ದೇವೆ.
ಕೃಷ್ಣಾ ಮೇಲ್ದಂಡೆ ನೀರು ಹಂಚಿಕೆ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆೆ ಸೀಮಿತಗೊಂಡ ವ್ಯಾಜ್ಯವಿದೆ. ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳನ್ನೂ ತೆಲಂಗಾಣ ಅರ್ಜಿಯಲ್ಲಿ ಸೇರಿಸಿದೆ. ಈ ಬೆಳವಣಿಗೆಯನ್ನು ಕೇಂದ್ರ ಜಲಶಕ್ತಿ ಮಂತ್ರಿಗಳ ಗಮನಕ್ಕೆೆ ತರಲಾಗಿದೆ. ಕಳಸಾ ಬಂಡೂರಿಗೆ ಯೋಜನೆಗೆ ಡಿಪಿಆರ್ ಮಾಡಲು ಅನುಮತಿ ನೀಡುವುದಾಗಿ ಹೇಳಿದ್ದಾರೆ. ತಮಿಳುನಾಡಿನ ವೆಲ್ಲಾರ್ ನದಿ ಜೋಡನೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ಅದು ನ್ಯಾಯಸಮ್ಮತ ಯೋಜನೆ ಅಲ್ಲ ಎಂದು ಹೇಳಿದೆ, ಈ ಬಗ್ಗೆೆ ಲಿಖಿತವಾಗಿ ದೂರು ನೀಡಲು ಕೇಂದ್ರ ಸಚಿವರು ಸೂಚಿಸಿದ್ದಾರೆ ಎಂದರು.
ಹೆಸರು, ಉದ್ದಿಗೆ ಬೆಂಬಲ ಬೆಲೆ ಘೋಷಣೆ!
ಕಾನೂನು ತಂಡದ ಜೊತೆಗೆ ಮಾತನಾಡಿ ಮಹದಾಯಿ, ಮೇಕೆದಾಟು ಯೋಜನೆಗಳ ಬಗ್ಗೆೆ ಕಾನೂನುತ್ಮಕವಾಗಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದಿದ್ದಾರೆ. ಹೆಸರು ಹಾಗೂ ಉದ್ದಿಗೆ ಬೆಂಬಲ ಬೆಲೆ ಘೋಷಣೆಯಾಗಿದೆ, ಆದರೆ ಖರೀದಿಯಾಗಿರಲಿಲ್ಲ. ಹೀಗಾಗಿ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಜೊತೆ ಮಾತನಾಡಿದ್ದೇವೆ. ಈಗ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಸೆಪ್ಟಂಬರ್ 5 ರಂದು ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಚಾಲನೆ ನೀಡಲು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಆಗಮಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
Recommended Video