ಶಿಕ್ಷಕರಿಗೆ ಹೊಸ ಹೊಣೆಗಾರಿಕೆ ವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಸೆ. 28: ರಾಷ್ಟ್ರೀಯ ಶಿಕ್ಷಣ ನೀತಿಯಡಿ ರೂಪಿಸಲಾಗುವ ಪಠ್ಯಕ್ರಮ, ಬೋಧನಾ ವಿಧಾನಗಳನ್ನು ವಿದ್ಯಾರ್ಥಿ ಕೇಂದ್ರಿತವಾಗಿ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ರೂಪಿಸಲಾದ ಕಾರ್ಯಪಡೆಯ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, "ಮುಗ್ಧತೆ ಮತ್ತು ಕುತೂಹಲಗಳೆಂಬ ಪರಸ್ಪರ ವಿರುದ್ಧ ಗುಣಗಳನ್ನು ಮಕ್ಕಳು ಹೊಂದಿರುತ್ತಾರೆ. ಇದು ಪ್ರಾಯಕ್ಕೆ ಬರುವವರೆಗೂ ಮಕ್ಕಳಲ್ಲಿ ಇರುತ್ತದೆ. ಇದಕ್ಕೆ ಪೂರಕವಾದ ಶಿಕ್ಷಣ ವ್ಯವಸ್ಥೆ ರೂಪಿಸಬೇಕು" ಎಂದು ತಿಳಿಸಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಸಭೆ ಮಹತ್ವ ಪಡೆದುಕೊಂಡಿದೆ. ಇನ್ನೂ ಹಲವು ಸಲಹೆ-ಸೂಚನೆಗಳನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ.
ಕರ್ನಾಟಕದ ಭವಿಷ್ಯವನ್ನು ಬರೆಯುತ್ತಿದ್ದೀರಿ!
ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಮಗೆ ಶಿಕ್ಷಣದ ಬಗ್ಗೆ, ಮಕ್ಕಳ ಬಗ್ಗೆ ಚಿಂತನೆ ನಡೆಸಲು ಅವಕಾಶ ದೊರೆತಿದೆ. ಇದರಡಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಕರ್ನಾಟಕದ ಭವಿಷ್ಯವನ್ನು ಬರೆಯುತ್ತಿವೆ ಎಂಬುದನ್ನು ಮನದಟ್ಟು ಮಾಡಿಕೊಂಡು ಕಾರ್ಯ ನಿರ್ವಹಿಸುವಂತೆ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಾಗುವುದು. ಈ ನೀತಿಯ ಯಶಸ್ವಿ ಅನುಷ್ಠಾನಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಕ್ಕಳ ಸಂವಾದಕ್ಕೆ ಅವಕಾಶ ಕೊಡಿ!
ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಂವಾದಕ್ಕೆ ಅವಕಾಶ ಕಲ್ಪಿಸಬೇಕು. ಕಲಿಕೆ ಸುಲಲಿತವಾಗಿ ಆಗಬೇಕು. ಮಕ್ಕಳು ಆಟವಾಡುತ್ತ ಕಲಿಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳ ಗ್ರಹಣ ಅತಿ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲಿ ನಾವು ಅವರ ಮೇಲೆ ಮಾಹಿತಿಯ ಹೊರೆ ಹೊರಿಸದೆ ಉತ್ತಮ ಆಲೋಚನಾ ವಿಧಾನವನ್ನು ಕಲಿಸಿಕೊಡಬೇಕು ಎಂದು ಟಾಸ್ಕ್ಫೋರ್ಸ್ ಸದಸ್ಯರಿಗೆ ಮುಖ್ಯಮಂತ್ರಿ ಬೊಮ್ಮಾಯಿ ವಿವರಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರೂ ಸಹ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸುವಂತಾಗಬೇಕು ಹಾಗೂ ಶಿಕ್ಷಕರ ಮೌಲ್ಯಮಾಪನಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಶಿಕ್ಷಕರ ಹೊಣೆಗಾರಿಕೆ ನೆನಪಿಸಿದ ಸಿಎಂ ಬೊಮ್ಮಾಯಿ!
ಜೊತೆಗೆ 8 ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ವಿವಿಧ ವೃತ್ತಿಗಳಿಗೆ ಸಿದ್ಧತೆ ಕುರಿತು ಮಾರ್ಗದರ್ಶ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರೂ ಸಹ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸುವಂತಾಗಬೇಕು ಹಾಗೂ ಶಿಕ್ಷಕರ ಮೌಲ್ಯಮಾಪನಕ್ಕೆ ಆದ್ಯತೆ ನೀಡಬೇಕು ಎಂದು ಸಿಎಂ ಬೊಮ್ಮಾಯಿ ಸಲಹೆ ನೀಡಿದ್ದಾರೆ.
ವಿವಿಧ ವಯೋಮಾನದಲ್ಲಿ ಮಕ್ಕಳ ಕಲಿಕೆಯ ಮಟ್ಟ ನಿಗದಿ ಪಡಿಸುವ ಕುರಿತು ಮತ್ತು ಬೋಧನಾ ವಿಧಾನಗಳ ಕುರಿತು ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದರು.
Recommended Video
ಅಂತರ ನಿವಾರಿಸುವ ಮೂಲಕ ಹೊಸ ನೀತಿ
ಇದೇ ವೇಳೆ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, "ರಾಜ್ಯದ ಶಿಕ್ಷಣ ವ್ಯವಸ್ಥೆ ಇತರ ರಾಜ್ಯಗಳಿಗೆ ಹೋಲಿಸಿದರೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳಿಗೆ ಸಮೀಪದಲ್ಲಿದೆ. ಇವೆರಡರ ನಡುವಿನ ಅಂತರ ನಿವಾರಿಸುವ ಮೂಲಕ ಹೊಸ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು" ಎಂದರು.
ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತ ಕಾರ್ಯಪಡೆಯ ಅಧ್ಯಕ್ಷ ಮದನಗೋಪಾಲ್, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ ಮತ್ತಿತರರು ಭಾಗವಹಿಸಿದ್ದರು.