ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು
ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಇಂದು ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
Recommended Video
ಮೊದಲು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ನಂತರ ಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ತಿಳಿದುಬಂದಿದೆ.
ತೀವ್ರ ಜ್ವರದ ನಡುವೆಯೂ ಮಾತ್ರೆ ಸೇವಿಸಿ ಬಿಎಸ್ವೈ ಪ್ರಚಾರ: ಸೋಲಿನ ಭೀತಿಯೇ?
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸಿಎಂ ತುರ್ತು ಸಭೆ ನಡೆಸಿದ್ದರು. ಸಭೆ ನಡೆದ ಕೆಲವೇ ಗಂಟೆಗಳ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ಬೆಳಗಾವಿ ಪ್ರವಾಸದಲ್ಲಿದ್ದ ಯಡಿಯೂರಪ್ಪ ಅವರಲ್ಲಿ ಮಧ್ಯಾಹ್ನದ ಹೊತ್ತಿಗೆ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿ, ವಿಶ್ರಾಂತಿ ಪಡೆದುಕೊಳ್ಳಲು ಸಲಹೆ ನೀಡಿದ್ದರು.
ಅವರಿಗೆ ಈಚೆಗಷ್ಟೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ನೆಗೆಟಿವ್ ಫಲಿತಾಂಶ ಬಂದಿತ್ತು. ಇದೀಗ ಎರಡನೇ ಬಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು, "ಜ್ವರದ ಹಿನ್ನೆಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ" ಎಂದು ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.