ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿಗೂ ಕೊರೊನಾ ಸೋಂಕು
ಬೆಂಗಳೂರು, ಆಗಸ್ಟ್ 3: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.
ನಿನ್ನೆಯಷ್ಟೇ ಯಡಿಯೂರಪ್ಪ ಅವರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಪುತ್ರಿಯಲ್ಲೂ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕೊವಿಡ್ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿ ವಾರವೂ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.
ಪುತ್ರ ವಿಜಯೇಂದ್ರ ಅವರಿಗೆ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಒಂದು ವಾರಗಳ ಕಾಲ ಗೃಹಬಂಧನದಲ್ಲಿರಲು ತಿಳಿಸಿದ್ದಾರೆ.

ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ
ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು
ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈದ್ಯರ ಸಲಹೆಗಳ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಯಡಿಯೂರಪ್ಪ ಆರೋಗ್ಯ ಕುರಿತಂತೆ ಇದೀಗ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಬಹಳ ಹತ್ತಿರದಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿರುವ ದೇಶದ ಎರಡನೇ ಸಿಎಂ
ಯಡಿಯೂರಪ್ಪ ಅವರು ಕೊರೊನಾ ಸೋಂಕಿಗೆ ಒಳಗಾದ ದೇಶದ 2ನೇ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪಾಟಿಸಿವ್ ಬಂದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾಗೂ ಕೊರೊನಾ ಸೋಂಕು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಮಿತ್ ಶಾ ಅವರು ಹೇಳಿದ್ದಾರೆ.












Click it and Unblock the Notifications