ಪ್ರಧಾನಿ ನರೇಂದ್ರ ಮೋದಿ ತೀರ್ಮಾನ ಸ್ವಾಗತಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!
ಬೆಂಗಳೂರು, ಜೂ. 07: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದಾರೆ. "ಕೇಂದ್ರ ಸರ್ಕಾರವು ದೇಶದಲ್ಲಿ ಉತ್ಪಾದನೆಯಾಗುವ ಶೇ. 75ರಷ್ಟು ಲಸಿಕೆಯನ್ನು ವಿತರಿಸುವುದರಿಂದ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸೇವಾ ಶುಲ್ಕವನ್ನು 150 ರೂ. ಗಳಿಗೆ ನಿಗದಿ ಪಡಿಸಿರುವುದರಿಂದ ಲಸಿಕೆ ಅಭಿಯಾನ ಇನ್ನಷ್ಟು ಸುಗಮವಾಗಿ ಮುಂದುವರಿಯಲಿದೆ. ಈ ಕ್ರಮದಿಂದ ಲಸಿಕೆ ಅಭಿಯಾನವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗುವುದು ಹಾಗೂ ಕೋವಿಡ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಇದೊಂದು ಮಹತ್ವಪೂರ್ಣ ಹೆಜ್ಜೆ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.
ಇದರೊಂದಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಣೆಯನ್ನು ನವೆಂಬರ್ ತಿಂಗಳವರೆಗೆ ವಿಸ್ತರಿಸಿರುವುದನ್ನು ಶ್ಲಾಘಿಸಿರುವ ಸಿಎಂ ಯಡಿಯೂರಪ್ಪ ಅವರು, "ಈ ಕ್ರಮವು ಕೋವಿಡ್ 19ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಡವರನ್ನು ಹಸಿವಿನ ದವಡೆಯಿಂದ ಪಾರು ಮಾಡುವುದು" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಸಂಜೆ (ಜೂ.07) ರಾಷ್ಟ್ರದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ ಅವರು, "ಜೂನ್ 21ರಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಉಚಿತ ಲಸಿಕೆ ಪೂರೈಸಲಿದೆ" ಎಂದು ಹೇಳಿದ್ದರು. ಮುಂದಿನ ಎರಡು ವಾರಗಳ ಬಳಿಕ ಕೇಂದ್ರವೇ ಲಸಿಕೆ ನೀಡಲಿದೆ. ಶೇ.25ರಷ್ಟು ಲಸಿಕೆಗಳನ್ನು ಖಾಸಗಿ ಆಸ್ಪತ್ರೆ ಖರೀಸಬಹುದು, ಹಣವಿದ್ದವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದು. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಲಿದೆ ಎಂದಿದ್ದರು.
ಜೂನ್ 21 ರಿಂದ ಕೊರೊನಾವೈರಸ್ ಲಸಿಕೆಯನ್ನು ಉಚಿತವಾಗಿ ಹಾಕಿಸಲು ಕೇಂದ್ರೀಕೃತ ವಿತರಣೆಯನ್ನು ಮತ್ತೆ ಆರಂಭಿಸುವುದಾಗಿ ದೇಶದ ಜನರಿಗೆ ಮೋದಿ ಅದೇ ಸಂದರ್ಭದಲ್ಲಿ ಭರವಸೆ ಕೊಟ್ಟಿದ್ದರು.












Click it and Unblock the Notifications