ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯರೇ ಅಥವಾ ಖರ್ಗೆಯವರೇ? : ಬಿಜೆಪಿ ಪ್ರಶ್ನೆ
ಬೆಂಗಳೂರು, ಏಪ್ರಿಲ್ 4: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಯಸಿದೆ. ಬಿಜೆಪಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಕಟಿಸಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಸರ್ಕಾರದ ನೇತೃತ್ವ ಯಾರು ವಹಿಸಿಕೊಳ್ಳಲಿದ್ದಾರೆ ಎನ್ನುವುದು ಕಾಂಗ್ರೆಸ್ ಇನ್ನೂ ಬಹಿರಂಗಪಡಿಸಿಲ್ಲ. ಯಾವ ಮುಖಂಡರ ಹೆಸರನ್ನೂ ಕಾಂಗ್ರೆಸ್ ಇದುವರೆಗೂ ಅಧಿಕೃತವಾಗಿ ಪ್ರಕಟಿಸಿಲ್ಲ.
ಕಾಂಗ್ರೆಸ್ ವಿರುದ್ಧ ಕಟು ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಚುನಾವಣೆಗೂ ಮುನ್ನವೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಯಂಘೋಷಿತ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ಎಂದು ತಮ್ಮ ತಂದೆಯ ಹೆಸರನ್ನು ಹೇಳಿಕೊಳ್ಳುತ್ತಿದ್ದಾರೆ ಎಂದು ಸದಾನಂದ ಗೌಡ ಹೇಳಿದ್ದಾರೆ.

"ಖರ್ಗೆ ಅವರ ಮಗ ತಮ್ಮ ತಂದೆಯೇ ಸಿಎಂ ಆಗಲಿದ್ದಾರೆ ಎಂದು ಘೋಷಿಸಿದ್ದಾರೆ, ಸಿದ್ದರಾಮಯ್ಯ ಅವರು ಸ್ವ-ಘೋಷಿತ ಅಭ್ಯರ್ಥಿಯಾಗಿದ್ದಾರೆ. ರಾಹುಲ್ ಗಾಂಧಿ ಇದನ್ನು ಸ್ಪಷ್ಟಪಡಿಸಬೇಕು" ಎಂದು ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮತ್ತು ಮತ ಎಣಿಕೆಯ ದಿನಾಂಕಗಳನ್ನು ಚುನಾವಣಾ ಆಯೋಗ ಇತ್ತೀಚೆಗೆ ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 12 ರಂದು ಚುನಾವಣೆ ನಡೆಯಲಿದೆ. ಮೇ 15ರಂದು ಫಲಿತಾಂಶ ಹೊರಬೀಳಲಿದೆ.
ಮುಖ್ಯಮಂತ್ರಿ ಅಭ್ಯರ್ಥಿ ಬಿ ಜೆ ಪಿ ಘಂಟಾ ಘೋಷವಾಗಿ ಶ್ರೀ ಬಿ ಎಸ ಯೆಡಿಯೂರಪ್ಪ .ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಶ್ರೀ ಪರಮೇಶ್ವರ - ಮೊದಲ ಬಾಗಿಲಲ್ಲಿ ಎಡವಿ ಬಿದ್ದರು
— Sadananda Gowda (@DVSBJP) April 3, 2018
ಶ್ರೀ ಮಲ್ಲಿಕಾರ್ಜುನ ಖರ್ಗೆ - ಮಗನಿಂದ ಘೋಷಣೆ
ಶ್ರೀ ಸಿದ್ದರಾಮೈಯ್ಯ - ಸ್ವಯಂ ಘೋಷಿತ
ನಿಜ ಹೇಳಿ ರಾಹುಲ್ #Nijahelirahul
ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ?
ರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಸಾಮಾನ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವುದಿಲ್ಲ. ಈ ತಂತ್ರಗಾರಿಕೆ ಕೆಲವೊಮ್ಮೆ ಪಕ್ಷಗಳಿಗೆ ನೆರವಾಗಿದ್ದರೂ, ಅನೇಕ ಬಾರಿ ಹಿನ್ನಡೆಗೂ ಕಾರಣವಾಗಿದ್ದಿದೆ. ಬಿಜೆಪಿಯ ಹಾದಿಯನ್ನೇ ತುಳಿಯುವ ಮೂಲಕ, ಸಿದ್ದರಾಮಯ್ಯ ಅಥವಾ ಖರ್ಗೆ ಅವರನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಲಿದೆಯೇ ಎಂಬುದನ್ನು ಕಾದು ನೋಡಬೇಕು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಕಾಂಗ್ರೆಸ್ ಸಿಎಂ ಅಭ್ಯರ್ಥಿಯನ್ನು ಘೋಷಿಸುವಂತೆ ಒತ್ತಾಯಿಸುತ್ತಿರುವ ಬಿಜೆಪಿ ಅದರ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಒಡೆಯಲು ಬಯಸುತ್ತಿದೆ ಎಂದು ಕೆಲವರು ದೂರುತ್ತಾರೆ. "ಪಕ್ಷ ಚುನಾವಣೆಯಲ್ಲಿ ಗೆದ್ದರೆ ಸಿದ್ದರಾಮಯ್ಯ ಅವರೇ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಬಿಜೆಪಿಗೆ ಬೇರೆ ಯಾವುದೇ ವಿಷಯ ಸಿಗದ ಕಾರಣ ಕಾಂಗ್ರೆಸ್ನಲ್ಲಿ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ" ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದರು.












Click it and Unblock the Notifications