ಯಶಸ್ವಿನಿ ಆರೋಗ್ಯ ಯೋಜನೆ ಅಬಾಧಿತ: ಸಿಎಂ ಎಚ್ಡಿಕೆ ಪ್ರಕಟ
ಬೆಂಗಳೂರು, ಮೇ 30: ರಾಜ್ಯದ ಸಹಕಾರಿ ಸಂಸ್ಥೆಗಳ ಲಕ್ಷಾಂತರ ಸದಸ್ಯರಿಗಾಗಿ ರೂಪಿಸಲಾಗಿದ್ದ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಯನ್ನು ಮುಂದುವರೆಸಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಬೆಳಗ್ಗೆ ನಡೆದ ರೈತರೊಂದಿಗಿನ ಸಭೆಯಲ್ಲಿ ಈ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ಇನ್ನು ಯೂನಿವರ್ಸಲ್ ಹೆಲ್ತ್ ಸ್ಕೀಮ್, ಕರ್ನಾಟಕ ಆರೋಗ್ಯ ವಿಮಾ ಯೋಜನೆ ಜಾರಿಗಾಗಿ ಹಿಂದಿನ ಕಾಂಗ್ರೆಸ್ ಸರ್ಕಾರ ಉಳಿದೆಲ್ಲಾ ವಿಮೆ ಯೋಜನೆಯನ್ನು ಕರ್ನಾಟಕ ಆರೋಗ್ಯ ವಿಮೆ ಯೋಜನೆಯಲ್ಲಿ ವಿಲೀನಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯಶಸ್ವಿನಿ ಯೋಜನೆ ಮೇ31ಕ್ಕೆ ಅಂತ್ಯಗೊಳ್ಳಲಿದೆ ಎಂದು ಸರ್ಕಾರ ಪ್ರಕಟಿಸಿತ್ತು.
ಈ ಕುರಿತಂತೆ ರೈತರು ಹಾಗೂ ಸಹಕಾರಿ ಸಂಸ್ಥೆಗಳ ಸದಸ್ಯರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮಂಗಳವಾರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ರೈತರ ಸಭೆಯಲ್ಲಿ ಯೂನಿವರ್ಸೆಲ್ ಹೆಲ್ತ್ ಕೇರ್ ಯೋಜನೆ ಇನ್ನೂ ಅನುಷ್ಠಾನಗೊಳ್ಳದ ಹಿನ್ನೆಲೆಯಲ್ಲಿ ಯಶಸ್ವಿನಿ ಯೋಜನೆಯನ್ನು ರದ್ದುಪಡಿಸಿದರೆ ರೈತರು ಹಾಗೂ ಸಹಕಾರಿ ಸಂಸ್ಥೆಗಳ ಸದಸ್ಯರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ರೈತ ಮುಖಂಡರು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರು ಹಾಗೂ ಸಹಕಾರಿ ಸಂಸ್ಥೆಗಳ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಹೊಸ ಯೋಜನೆ ಅನುಷ್ಠಾನಗೊಳ್ಳುವವರೆಗೂ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲಾಗುವುದು.
ಹೊಸ ಯೋಜನೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕವಷ್ಟೇ ಯೋಜನೆಯನ್ನು ವಿಲೀನಗೊಳಿಸುವ ಬಗ್ಗೆ ಯೋಚಿಸಲಾಗುತ್ತದೆ ಅಲ್ಲಿಯವರೆಗೂ ಯಶಸ್ವಿನಿ ಯೋಜನೆ ಮುಂದುವರೆಯಲಿದ್ದು ರೈತರು ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.












Click it and Unblock the Notifications