ಕಾಂಗ್ರೆಸ್ ನಾಯಕರಿಗೆ 24 ಗಂಟೆಯ ಗಡುವು ಕೊಟ್ಟ ಕುಮಾರಣ್ಣ!
Recommended Video
ಬೆಂಗಳೂರು, ಜುಲೈ 08 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ 24 ಗಂಟೆಗಳ ಗಡುವು ಕೊಟ್ಟಿದ್ದಾರೆ. ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಕೊನೆ ಕ್ಷಣದ ಕಸರತ್ತನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ನಿವಾಸದಲ್ಲಿ ಸೋಮವಾರ ಬೆಳಗ್ಗೆ ನಡೆದ ಉಪಹಾರಕೂಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಆಗ ಕಾಂಗ್ರೆಸ್ ಹಿರಿಯ ನಾಯಕರಿಗೆ ಅವರು ಗಡುವು ಕೊಟ್ಟಿದ್ದಾರೆ.
ಈಗಾಗಲೇ ಕಾಂಗ್ರೆಸ್ನ 21 ಸಚಿವರು ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ನ ಎಲ್ಲಾ ಸಚಿವರಿಂದ ಕುಮಾರಸ್ವಾಮಿ ಅವರು ರಾಜೀನಾಮೆ ಪಡೆದಿದ್ದು, ಮೈತ್ರಿ ಸರ್ಕಾರದಲ್ಲಿ ಅವರೊಬ್ಬರಿದ್ದಾರೆ. ಮಂಗಳವಾರ ಮುಖ್ಯಮಂತ್ರಿಗಳ ಮುಂದಿನ ನಡೆ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಡಿ.ಕೆ.ಶಿವಕುಮಾರ್ ಅವರು ಸರ್ಕಾರ ಉಳಿಸಿಕೊಳ್ಳಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ಅವರು ಬೆಂಗಳೂರಿನಿಂದ ವಿಮಾನವೇರಿದ್ದು, ದೆಹಲಿ ಅಥವ ಮುಂಬೈಗೆ ಪ್ರಯಾಣ ಬೆಳೆಸಿರುವ ಸಾಧ್ಯತೆ ಇದೆ. ಮಂಗಳವಾರದ ರಾಜಕೀಯ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ....

ಎಚ್.ಡಿ.ಕುಮಾರಸ್ವಾಮಿ ಷರತ್ತು
ರಾಜೀನಾಮೆ ನೀಡಿ ಮುಂಬೈಗೆ ಹೋಗಿರುವ 9 ಕಾಂಗ್ರೆಸ್ ಶಾಸಕರನ್ನು ಕರೆತರಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಷರತ್ತು ಹಾಕಿದ್ದಾರೆ. 24 ಗಂಟೆಗಳ ಗಡುವು ಕೊಟ್ಟಿದ್ದಾರೆ. ಶಾಸಕರು ವಾಪಸ್ ಬರದಿದ್ದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ?
ಒಂದು ವೇಳೆ 24 ಗಂಟೆಯಲ್ಲಿ ಶಾಸಕರು ವಾಪಸ್ ಬರಲಿಲ್ಲ ಎಂದರೆ ರಾಜೀನಾಮೆ ನೀಡುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಸ್ಪಷ್ಟವಾದ ಸಂದೇಶ ರವಾನಿಸಿದ್ದಾರೆ. ಕುಮಾರಸ್ವಾಮಿ ಅವರ ಷರತ್ತು ಕೇಳಿ ಕಾಂಗ್ರೆಸ್ ನಾಯಕರು ದಂಗಾಗಿ ಹೋಗಿದ್ದಾರೆ.

ಕುಮಾರಸ್ವಾಮಿ ಏಕಾಂಗಿ
ಎಚ್.ಡಿ.ಕುಮಾರಸ್ವಾಮಿ ಸಚಿವ ಸಂಪುಟದಲ್ಲಿದ್ದ ಎಲ್ಲಾ ಕಾಂಗ್ರೆಸ್, ಜೆಡಿಎಸ್ ಸಚಿವರು ರಾಜೀನಾಮೆ ನೀಡಿದ್ದಾರೆ. ಮುಂಬೈನಲ್ಲಿರುವ ಶಾಸಕರು ವಾಪಸ್ ಬಂದರೆ ಸಂಪುಟ ಪುನಾರಚನೆ ಮಾಡಿ ಸರ್ಕಾರ ಮುಂದುವರೆಸಲು ತೀರ್ಮಾನಿಸಲಾಗಿದೆ. ಯಾರೂ ಬಾರದಿದ್ದರೆ ಏಕಾಂಗಿಯಾಗಿರುವ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಲಿದ್ದಾರೆ.

ಬಿಜೆಪಿಯಿಂದ ಕಾದು ನೋಡುವ ತಂತ್ರ
ಕರ್ನಾಟಕ ಬಿಜೆಪಿ ಸ್ಪೀಕರ್ ತೀರ್ಮಾನ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಿದೆ. ರಾಜ್ಯ ರಾಜಕೀಯದ ಬೆಳವಣಿಗೆ ಬಗ್ಗೆ ಕಾದು ನೋಡುವ ತಂತ್ರವನ್ನು ಅನುಸರಿಸಲು ಪಕ್ಷ ತೀರ್ಮಾನಿಸಿದೆ. 'ಮಂಗಳವಾರ ಕುಮಾರಸ್ವಾಮಿ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುತ್ತದೆ' ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.












Click it and Unblock the Notifications