ಮೇಯರ್ ಚುನಾವಣೆ ಗೆಲುವು, ಮೈತ್ರಿ ಸರ್ಕಾರದ ಗೆಲುವು: ಎಚ್ಡಿಕೆ
ಬೆಂಗಳೂರು, ಸೆಪ್ಟೆಂಬರ್ 28: ನೂತನವಾಗಿ ಆಯ್ಕೆ ಆಗಿರುವ ಮೇಯರ್ ಗಂಗಾಂಬಿಕ ಮಲ್ಲಿಕಾರ್ಜುನ್ ಹಾಗೂ ಉಪಮೇಯರ್ ರಮಿಳಾ ಅವರಿಗೆ ಸಿಎಂ ಕುಮಾರಸ್ವಾಮಿ ಶುಭಕೋರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆಯಿಂದ ಮೇಯರ್ ಸ್ಥಾನ ದೊರೆತಿರುವುದು ಮೈತ್ರಿ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು.
ಮೇಯರ್ ಆಯ್ಕೆ ಚುನಾವಣೆಯಲ್ಲಿ ದೊರೆತ ಗೆಲುವು ಮೈತ್ರಿ ಸರ್ಕಾರಕ್ಕೆ ಸಂದಿರುವ ಗೆಲುವು ಎಂದ ಅವರು, ಮಹಿಳಾ ಸಾರಥ್ಯದಲ್ಲಿ ಬಿಬಿಎಂಪಿಯು ಹಿಂದಿಗಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಇದಕ್ಕೆ ಮುನ್ನಾ ಸಿಎಂ ಅವರು, ಸಂಪುಟ ಸಹೋದ್ಯೋಗಿಗಳ ಜೊತೆ ರಾಜ್ಯ ಪರಿಷತ್ ಸಭೆ ನಡೆಸಿದರು.
ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಉಪ ಹಂಚಿಕೆ ಅಧಿನಿಯಮ 2013ರ ಪ್ರಕಾರ ಈ ಪರಿಷತ್ ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಅಭಿವೃದ್ಧಿಗಾಗಿ ನೀಡಲಾಗಿರುವ 29000 ಕೋಟಿ ಅನುದಾನವನ್ನು ಇದೇ ವರ್ಷದಲ್ಲೇ ಖರ್ಚು ಮಾಡಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಯೋಜನೆಗಳ ಅನುಷ್ಠಾನದಲ್ಲಿರುವ ನ್ಯೂನತೆಗಳನ್ನು ನೀಡಲಾಗಿರುವ ಸೂಚನೆಗಳಿಗೆ ಅನುಸಾರವಾಗಿ ಸರಿಪಡಿಸುವಂತೆ ಅವರು ಸೂಚಿಸಿದರು. ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಸಿದ್ಧಪಡಿಸುವಂತೆ ಸಹ ಸೂಚಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಂಸದ ಧೃವನಾರಾಯಣ, ಶಾಸಕರಾದ ಡಾ.ಕೆ.ಅನ್ನದಾನಿ, ಡಾ.ಜಿ.ಉಮೇಶ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications