ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು, ಜುಲೈ 30: ಇಂದು ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಸರ್ಕಾರದ ಯೋಜನೆಗಳನ್ನು ಅಸಡ್ಡೆ ಮಾಡದೆ ಜನರಿಗೆ ತಲುಪಿಸುವಂತೆ ತಾಕೀತು ಮಾಡಿದರು.

ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬೆಲ್ಲಾ ಚಿಂತನೆಗಳನ್ನು ತಲೆಯಿಂದ ತೆಗೆದು ಹಾಕಿ, ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಉತ್ತಮವಾಗಿ ಕೆಲಸ ಮಾಡಿ ಸರ್ಕಾರಕ್ಕೆ ಉತ್ತಮ ಹೆಸರು ತಂದುಕೊಡುವ ಜವಾಬ್ದಾರಿ ನಿಮ್ಮಮೇಲಿದೆ ಎಂದು ಅವರು ಹೇಳಿದರು.

ವಿವಿಧ ಜಿಲ್ಲೆಗಳ ಮಳೆ, ಬಿತ್ತನೆ ಪ್ರಗತಿ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕ್ರಮಗಳನ್ನು ಎನ್‌ಡಿಆರ್‍ಎಫ್ ಮಾರ್ಗಸೂಚಿಗಳನ್ವಯ ಕೈಗೊಳ್ಳುವಂತೆ ಸೂಚಿಸಿದರು. ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಟ್ಯಾಂಕರ್ ಮೂಲಕ ಪೂರೈಕೆಗೆ ಪರ್ಯಾಯ ಯೋಜನೆಯಿದೆಯೇ ಎಂದು ಪರಿಶೀಲಿಸಿ, ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ರೈತರ ಆತ್ಮಹತ್ಯೆಗೆ ಕಾರಣ ತಿಳಿದುಕೊಳ್ಳಿ

ರೈತರ ಆತ್ಮಹತ್ಯೆಗೆ ಕಾರಣ ತಿಳಿದುಕೊಳ್ಳಿ

ರಾಜ್ಯದಲ್ಲಿ ಮಳೆ ಕೊರತೆ ಆಗಿರುವ 12 ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಅಲ್ಲಿ ಬರ ಪರಿಸ್ಥಿತಿ ಎದುರಾದರೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳಿಗೆ ಯೋಜನೆ ರೂಪಿಸುವಂತೆ ಸೂಚಿಸಿದರು. ರೈತರಿಗೆ ಸರ್ಕಾರ ಇಷ್ಟು ಬೆಂಬಲ ನೀಡುತ್ತಿದ್ದರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕಾರಣ ಏನು? ಎಂಬ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯಮಂತ್ರಿಯವರು ತಿಳಿಸಿದರು.

ರೈತ ಕುಟುಂಬಕ್ಕೆ ಶೀಘ್ರ ಪರಿಹಾರ ಒದಗಿಸಿ

ರೈತ ಕುಟುಂಬಕ್ಕೆ ಶೀಘ್ರ ಪರಿಹಾರ ಒದಗಿಸಿ

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಪರಿಹಾರ ನೀಡುವಾಗ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ವಿಳಂಬವಾಗುತ್ತಿದ್ದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿಗಳ ಮುಖಾಂತರ ಶೀಘ್ರವೇ ವರದಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲು ಅವಕಾಶವಿದೆ. ಆದ್ದರಿಂದ ರೈತರ ಆತ್ಮಹತ್ಯೆ ಕುರಿತು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ತೀರ್ಮಾನ ಕೈಗೊಂಡು, ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಶೀಘ್ರವೇ ವರದಿ ತರಿಸಿಕೊಂಡು ಪರಿಹಾರ ವಿತರಿಸಲು ಸೂಚಿಸಿದರು.

ಪಿಂಚಣಿ ಜಮಾವಣೆಗೆ ನೇರ ವ್ಯವಸ್ಥೆ ಮಾಡಿ

ಪಿಂಚಣಿ ಜಮಾವಣೆಗೆ ನೇರ ವ್ಯವಸ್ಥೆ ಮಾಡಿ

ರಾಜ್ಯದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 67 ಲಕ್ಷಕ್ಕೂ ಹೆಚ್ಚು ಜನರು ಪಿಂಚಣಿ ಪಡೆಯುತ್ತಿದ್ದು, ಈ ಎಲ್ಲ ಪಿಂಚಣಿ ಯೋಜನೆಗಳಡಿ ನೇರವಾಗಿ ಫಲಾನುಭವಿಗಳ ಖಾತೆಗೆ ಪಿಂಚಣಿ ಜಮೆ ಮಾಡಲು ಇರುವ ತಾಂತ್ರಿಕ ಅಡಚಣೆಗಳನ್ನು ಕೂಡಲೇ ನಿವಾರಿಸಿ, ಆಧಾರ್ ಲಿಂಕ್ ಮಾಡಿ, 3 ತಿಂಗಳೊಳಗೆ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು. ಇದನ್ನು ಜಿಲ್ಲಾಧಿಕಾರಿಗಳು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

ಎಲ್ಲಾ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಿ

ಎಲ್ಲಾ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಿ

ಪರಿಶಿಷ್ಟ ಜಾತಿ/ ಪಂಗಡದವರಿಗೆ ಎಲ್ಲ ಗ್ರಾಮಗಳಲ್ಲಿ ಆದ್ಯತೆಯ ಮೇರೆಗೆ ಸ್ಮಶಾನ ಸೌಲಭ್ಯ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 94 ಸಿ ಮತ್ತು 94 ಸಿಸಿ ಪ್ರಕರಣಗಳ ಹಕ್ಕು ಪತ್ರಗಳೊಂದಿಗೆ ಖಾತಾವನ್ನೂ ವಿತರಿಸುವುದು ಕಡ್ಡಾಯ. ಮತ್ತೊಮ್ಮೆ ಜನರು ಸರ್ಕಾರಿ ಕಚೇರಿಗಳಿಗೆ ಇದಕ್ಕಾಗಿ ಅಲೆದಾಡುವಂತಾಗಬಾರದು ಎಂದು ನಿರ್ದೇಶನ ನೀಡಿದರು.

ಅರಣ್ಯ ಹಕ್ಕು ಕಾಯ್ದೆಯ ಅರ್ಜಿ ವಿಲೇವಾರಿ

ಅರಣ್ಯ ಹಕ್ಕು ಕಾಯ್ದೆಯ ಅರ್ಜಿ ವಿಲೇವಾರಿ

ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸುವ ನಿಟ್ಟಿನಲ್ಲಿ ಕಾಯಿದೆ ತಿದ್ದುಪಡಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದರು. ಪೋಡಿ ಪ್ರಕರಣಗಳ ವಿಲೇವಾರಿಗೆ ಸರ್ವೇಯರುಗಳ ಕೊರತೆ ಕುರಿತು ಚರ್ಚಿಸಲಾಯಿತು. ಬೆಳೆ ಸಮೀಕ್ಷೆ ಕುರಿತು ಮೊಬೈಲ್ ಆಪ್‍ನಲ್ಲಿ ರೈತರೇ ತಾವು ಬೆಳೆದ ಮಾಹಿತಿಯನ್ನು ಅಪ್‌ಲೋಡ್‌ ಮಾಡುವುದನ್ನು ಪ್ರೋತ್ಸಾಹಿಸುವಂತೆ ಸೂಚಿಸಿದರು.

ಕಂದಾಯ ಅದಾಲತ್ ಅರ್ಜಿ ವಿಲೇವಾರಿ ಮಾಡಿ

ಕಂದಾಯ ಅದಾಲತ್ ಅರ್ಜಿ ವಿಲೇವಾರಿ ಮಾಡಿ

ಮಂಡ್ಯ, ರಾಮನಗರ, ಬೆಳಗಾವಿ ಜಿಲ್ಲೆಗಳಲ್ಲಿ ಕಂದಾಯ ಅದಾಲತ್‌ನಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳ ಪೈಕಿ, ವಿಲೇವಾರಿ ಆಗದೆ ಬಾಕಿ ಇರುವ ಅರ್ಜಿ ಸಂಖ್ಯೆ ಹೆಚ್ಚಿದ್ದು, ಒಂದು ತಿಂಗಳೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡಲು ಸೂಚಿಸಿದರು. ಕೊಪ್ಪಳ ಜಿಲ್ಲೆಯಲ್ಲಿ 2 ಬಾರಿ ಪಿಂಚಣಿ ಅದಾಲತ್ ನಡೆಸಿದ್ದರೂ ಯಾವುದೇ ಅರ್ಜಿ ಸ್ವೀಕಾರವಾಗಿರುವುದಿಲ್ಲ ಎಂಬ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಚಾಮರಾಜನಗರ, ಬೆಂಗಳೂರು ನಗರ, ಬೆಳಗಾವಿ ಜಿಲ್ಲೆಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸೂಚಿಸಿದರು.

ವಿದ್ಯಾರ್ಥಿನಿಲಯ ನಿವೇಶನ ಮಂಜೂರಿಗೆ ಭೂಮಿ

ವಿದ್ಯಾರ್ಥಿನಿಲಯ ನಿವೇಶನ ಮಂಜೂರಿಗೆ ಭೂಮಿ

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳ ನಿವೇಶನಗಳ ಮಂಜೂರಾತಿಗೆ ಸಂಬಂಧಿಸಿದಂತೆ, ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಈ ಕೆಲಸವನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ತಿಳಿಸಲಾಯಿತು. ಕಂದಾಯ ಗ್ರಾಮಗಳ ರಚನೆಯ ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು.

14 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ

14 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ

ಕರ್ನಾಟಕ ಭೂ ಸುಧಾರಣೆ ಕಾಯ್ದೆಯ ಕಲಂ 79 ಎ , 79 ಬಿ ಗಳಿಗೆ ಸುಧಾರಣೆ ಅಥವಾ ಬದಲಾಯಿಸುವ ಅಗತ್ಯ ಇದೆ. ಅನೇಕ ಸಂದರ್ಭದಲ್ಲಿ ಇವು ನಿಜವಾದ ಭೂ ಮಾಲೀಕರಿಗೆ ತೊಂದರೆಯುಂಟು ಮಾಡುವ ಸಂಭವವಿದೆ. ಈ ಬಗ್ಗೆ ಚರ್ಚಿಸಿ ತೀರ್ಮಾನಿಸಬಹುದಾಗಿದೆ ಎಂದರು. 14 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು. ಈ ಸಂಬಂಧ ವಿವರಗಳನ್ನು ಪಡೆಯುವಂತೆ ತಿಳಿಸಿದರು.

ಗ್ರಾಮ ವಿಕಾಸ ಯೋಜನೆಗೆ 30.22 ಕೋಟಿ

ಗ್ರಾಮ ವಿಕಾಸ ಯೋಜನೆಗೆ 30.22 ಕೋಟಿ

ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ತ್ವರಿತವಾಗಿ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು. ನಿಗದಿಪಡಿಸಿರುವ ಅನುದಾನದ ಪೈಕಿ 30.22 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ರಾಜ್ಯವು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲು 10 ಜಿಲ್ಲೆಗಳು ಬಾಕಿ ಉಳಿದಿವೆ. ಅಕ್ಟೋಬರ್ 02 ರೊಳಗೆ ಎಲ್ಲ ಜಿಲ್ಲೆಗಳಲ್ಲಿ ನಿಗದಿತ ಶೌಚಾಲಯ ನಿರ್ಮಾಣ ಕಾರ್ಯವನ್ನು ಮುಕ್ತಾಯಗೊಳಿಸಬೇಕೆಂದು ಸೂಚಿಸಿದರು. ಶೌಚಾಲಯಗಳ ಬಳಕೆಗೂ ಉತ್ತೇಜನ ನೀಡಲು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+