ಕಂಠೀರವ ಕ್ರೀಡಾಂಗಣದಲ್ಲಿ ನೂಕುನುಗ್ಗಲು: ಪೊಲೀಸರಿಂದ ಲಾಠಿ ಚಾರ್ಜ್, ಇಬ್ಬರಿಗೆ ಗಾಯ
ಬೆಂಗಳೂರು, ಮೇ 20: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸಮಾರಂಭಕ್ಕೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದ ಗೇಟ್ ನಂಬರ್ 03ರ ಬಳಿ ನೂಕು ನುಗ್ಗಲು ಏರ್ಪಟ್ಟಿದೆ. ಒಮ್ಮೆಲೆ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನೂಕುನುಗ್ಗಲಿನಲ್ಲಿ ಜನರು ಪೊಲೀಸರ ಮೇಲೆ ಎರಗಿದ್ದು, ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುವನ್ನು ಆಟೋದಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ. ನೂಕು ನುಗ್ಗಲಿನಲ್ಲಿ ಪೊಲೀಸ್ ಸಿಬ್ಬಂದಿಯ ಶರ್ಟ್ ಕೂಡ ಹರಿದು ಹಾಕಲಾಗಿದೆ. ಘಟನೆಯಲ್ಲಿ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಕಂಠೀರವ ಕ್ರೀಡಾಂಗಣದ ಗ್ಯಾಲರಿಯಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎರಡು ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಬೆಳ್ಳಂಬೆಳಗ್ಗೆ ಮೈಸೂರು, ಬಳ್ಳಾರಿ, ದಾವಣಗೆರೆ, ಯಾದಗಿರಿ, ರಾಯಚೂರು ಕಲಬುರ್ಗಿ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ತಂಡೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜೊತೆಗೆ ಡಾ. ಜಿ ಪರಮೇಶ್ವರ್, ಎಂ.ಬಿ ಪಾಟೀಲ್, ಕೆ.ಎಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗ ರೆಡ್ಡಿ, ಜಮೀರ್ ಅಹ್ಮದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications