ಭೂಮಿ ಹಸ್ತಾಂತರಿಸಿ, ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಿ: ಬೊಮ್ಮಾಯಿ
ನವದೆಹಲಿ, ನವೆಂಬರ್ 29: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ಕರ್ನಾಟಕಕ್ಕೆ ಹಸ್ತಾಂತರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.
ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿದ್ದ ಅವರು, ಅಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸಿದರು. ಇದೇ ವೇಳೆ ಈ ಎರಡು ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದಿಟ್ಟರು.
ದೀಪಾವಳಿಗೆ ರಾಜಧಾನಿ ಎಕ್ಸ್ಪ್ರೆಸ್ ವಿಶೇಷ ಸೇವೆ, ಎಲ್ಲಿಂದ ಎಲ್ಲಿಗೆ ತಿಳಿಯಿರಿ
ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದೆ. ಇದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೇಳಿಕೊಂಡರು.
ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಸಿಎಂ ಮನವಿ
ರಾಜ್ಯದಲ್ಲಿ ಕರಡಿ ಧಾಮಗಳ ಸುತ್ತಮುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಘೋಷಿಸಬೇಕೆಂದು ಕೇಂದ್ರ ಅರಣ್ಯ ಸಚಿವರತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳ ಹಲವು ವಿಷಯಗಳನ್ನು ಚರ್ಚಿಸಿದರು. ಇದೇ ವೇಳೆ ಗುಡೆಕೋಟೆ ಸ್ಲಾತ್ ಕರಡಿಧಾಮ ಹಾಗೂ ಭೀಮಾಗಡ್ ಅಭಯಾರಣ್ಯಗಳ ಸುತ್ತಮುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವಂತೆ ಮನವಿ ಮಾಡಿದರು.
ಈಗಾಗಲೇ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಶಿಫಾರಸ್ಸು ಮಾಡಿ ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದರು. ಈ ವೇಳೆ ಮುಖ್ಯಮಂತ್ರಿಗಳ ಜೊತೆಗೆ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.