49 ಸಾವಿರ ಕೋಟಿ ಸಾಲ ಮನ್ನಾ: 4 ದಿನಗಳಲ್ಲಿ ಆದೇಶ ಜಾರಿ ಎಂದ ಎಚ್ಡಿಕೆ
Recommended Video
ಬೆಂಗಳೂರು, ಜು.30: ರಾಜ್ಯದಲ್ಲಿ ಸುಮಾರು 49,000 ಕೋಟಿ ರೂ. ಗಳಷ್ಟು ಬೃಹತ್ ಮೊತ್ತದ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ಈ ಕುರಿತು ನಾಲ್ಕೈದು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು.
ಈ ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಇಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಆಡಳಿತ ಯಂತ್ರಕ್ಕೆ ವೇಗ: ಡಿಸಿಗಳ ಜತೆ ಸಭೆ ನಡೆಸಲಿರುವ ಎಚ್ಡಿಕೆ
ಸೋಮವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಸಾಲ ಮನ್ನಾ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಮಹತ್ವದ್ದು ಎಂದು ನುಡಿದರು. ಮಧ್ಯವರ್ತಿಗಳು ಈ ಯೋಜನೆಯ ದುರುಪಯೋಗ ಪಡೆಯದಂತೆ ಎಚ್ಚರಿಕೆ ವಹಿಸಿ ಎಂದು ಅವರು ಕಿವಿ ಮಾತು ಹೇಳಿದರು.
ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಿ. ಪ್ರತಿ ತಿಂಗಳು ತಾಲ್ಲೂಕುಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ; ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಎಂದು ಸಲಹೆ ಮಾಡಿದರು. ಚುನಾವಣೆಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿತ್ತು. ಈಗ ಅಧಿಕಾರಿಗಳು ಚುರುಕಾಗಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಒಳ್ಳೆಯ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ ಎಂದು ಅವರು ನುಡಿದರು.
ದಣಿಯದ ಕುಮಾರಸ್ವಾಮಿ, ಚುರುಕುಗೊಳ್ಳುತ್ತಿರುವ ಆಡಳಿತ ಯಂತ್ರ
ಮಾಧ್ಯಮಗಳಲ್ಲಿ ಸರ್ಕಾರದ ಕುರಿತು ಪ್ರಕಟಿಸುವ ವರದಿಗಳಿಗಿಂತ ಅಭಿವೃದ್ಧಿಗೆ ಆದ್ಯತೆ ನೀಡಿ. ಈ ಸರ್ಕಾರ5 ವರ್ಷ ಯಶಸ್ವಿಯಾಗಿ ಪೂರ್ಣ ಗೊಳಿಸಲಿದೆ ಎಂದು ತಿಳಿಸಿದರು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ ಸ್ಥಳೀಯ ಕಾರ್ಖಾನೆಗಳಲ್ಲಿ ಉದ್ಯೋಗ ಕೊಡಿಸಲು ಅವಕಾಶ ಕಲ್ಪಿಸಬೇಕು. ಜನ ಸಾಮಾನ್ಯರನ್ನು ನೇರವಾಗಿ ಭೇಟಿ ಮಾಡುವಂತೆ ಸೂಚಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ರೈತ ಸಂಘ ಖಂಡನೆ
ಸರ್ಕಾರ ನಡೆಸುವ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ಮೂಲ ಸೌಕರ್ಯ ಆಹಾರ ಗುಣಮಟ್ಟ ಪರಿಶೀಲಿಸಬೇಕು. ಅದರಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಳಿಗೂ ಭೇಟಿ ನೀಡಿ ಆಯಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಪ್ರೇರೇಪಿಸಿ ಎಂದು ಸಲಹೆ ನೀಡಿದರು.
ಶಾಲೆ ಕಾಲೇಜುಗಳಿಗೆ ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೊಠಡಿ, ಶೌಚಾಲಯ, ಪ್ರಯೋಗಾಲಯ ಮತ್ತಿತರ ಸೌಲಭ್ಯ ಒದಗಿಸಲು ಉದ್ದೇಶಿಸಿದೆ. ಅದೇ ರೀತಿ 4 ಸಾವಿರಕ್ಕೂ ಹೆಚ್ಚು ಕಿ.ಮೀ. ಹೆದ್ದಾರಿ ಕಾಮಗಾರಿ ಪೂರ್ಣ ಗೊಳಿಸಲು ಅಗತ್ಯ ಭೂಸ್ವಾಧೀನ ಮತ್ತಿತರ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ವಸತಿ ಯೋಜನೆಗಳಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಸರ್ಕಾರಿ ಜಮೀನು ಗುರುತಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಚುನಾವಣೆಗೂ ಮುನ್ನವೇ ಭಾಷೆ ನೀಡಿದ್ದ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮಾಡುವ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಆದೇಶ ಹೊರಡಿಸುವುದಾಗಿ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಗೆ ಮುನ್ನವೇ ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಕುರಿತಂತೆ ಕುಮಾರಸ್ವಾಮಿ ಘೋಷಣೆ ಮಾಡಿದ್ದರು.
ರೈತರ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್ಗಳಲ್ಲಿರುವ ಎಲ್ಲಾ ಬಗೆಯ ಸಾಲವನ್ನೂ ಮನ್ನಾ ಮಾಡುವುದಾಗಿ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.
ಆದರೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಹೀಗಾಗಿ ಸಾಲಮನ್ನಾ ಘೋಷಣೆ ಮಾಡಿದ್ದಾರೆ ಎಂದು ಕೆಲವರು ಟೀಕಿಸಿದ್ದರು.
ಅದೃಷ್ಟದಿಂದ ಸಿಎಂ ಆದರೂ ಮಾತು ಉಳಿಸಿಕೊಂಡ ಕುಮಾರಸ್ವಾಮಿ
ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ಗಳಿಸಿದ್ದ ಕೇವಲ 39 ಸ್ಥಾನಗಳನ್ನು ಆದರೆ 104 ಸ್ಥಾನ ಗಳಿಸಿದ್ದ ಬಿಜೆಪಿಯನ್ನು ಅಧಕಾರದಿಂದ ದೂರವಿಡಲು ಕಾಂಗ್ರೆಸ್ ಜತೆ ಕೈಸೇರಿಸಿದ್ದರಿಂದ ಅದೃಷ್ಟದ ಕಾರಣಕ್ಕಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಗೇರಿದರು.
ಮುಖ್ಯಮಂತ್ರಿಯಾದ ಕೆಲವೇ ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಭಾರಿ ಒತ್ತಡವೇ ಉಂಟಾಯಿತು. ಆದರೆ ಕುಮಾರಸ್ವಾಮಿಯವರು ರಾಜ್ಯದ ಹಣಕಾಸು ಪರಿಸ್ಥಿತಿ ಅಧ್ಯಯನ ಮಾಡಿ ಸಾಲ ಘೋಷಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದರ ಬಗ್ಗೆ ಹೇಳಿದಾಗ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ 24 ಗಂಟೆಗಳ ಗಡುವು ನೀಡಿದ್ದರು.
ಮೊದಲ ಬಜೆಟ್ನಲ್ಲಿ ರೈತರ ಹೊರೆ ಇಳಿಸಿದ ಸಿಎಂ
ಮಾತಿಗೆ ತಕ್ಕಂತೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಾವು ಮಂಡಿಸಿದ ಮೊದಲ ಬಜೆಟ್ನಲ್ಲೇ ರೈತರ ಸಾಲ ಮನ್ನಾ ಘೋಷಿಸಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 2 ಲಕ್ಷದವರೆಗೆ ಸಾಲ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ ಸಾಲವನ್ನು ಬಜೆಟ್ ದಿನ ಘೋಷಿಸಿದ್ದರು.
ಆದರೆ ಬಜೆಟ್ನಲ್ಲಿ ಘೋಷಿಸಿದ ಸಹಕಾರಿ ಬ್ಯಾಂಕುಗಳ ಚಾಲ್ತಿ ಸಾಲವನ್ನು ಪ್ರತಿಪಕ್ಷ ಶಾಸಕರು ಹಾಗೂ ನಾಯಕರ ಒತ್ತಾಯಕ್ಕೆ ಮಣಿದು ಮನ್ನಾ ಮಾಡುವ ಮೂಲಕ ಒಟ್ಟು 49 ಕೋಟಿ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಬ್ಯಾಂಕರ್ಗಳ ಉಪ ಸಮಿತಿ ರಚನೆ
ಕೊಟ್ಟ ಮಾತಿಗೆ ತಪ್ಪದಂತೆ ನಡೆದುಕೊಳ್ಳಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲವನ್ನೂ ಮನ್ನಾ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳ ಹಿರಿಯ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಳೆದ ಶುಕ್ರವಾರ ವಿಧಾನಸೌಧದಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳ ಸಭೆಯೊಂದನ್ನು ನಡೆಸಿದರು.
ರಾಷ್ಟ್ರೀಕೃತ ಸಾಲಗಳನ್ನು ಮನ್ನಾ ಮಾಡುವ ವೇಳೆ ರಾಜ್ಯ ಸರ್ಕಾರ ನಾಲ್ಕು ವರ್ಷಗಳಲ್ಲಿ ನಾಲ್ಕು ಕಂತುಗಳಲ್ಲಿ ಹಣವನ್ನು ಮರುಪಾವತಿ ಮಾಡುವಂತಾಗಲು ಮಾರ್ಗಸೂಚಿ ರಚಿಸುವ ಸಂಬಂಧ ಉಪಸಮಿತಿಯನ್ನು ರಚಿಸಲಾಗಿದೆ.
ಹಣ ಮರುಪಾವತಿ ಕುರಿತಂತೆ ಯೋಜನೆಯನ್ನು ರೂಪಿಸಲಿದ್ದು ರಾಜ್ಯದಲ್ಲಿ ಸಾಲಮನ್ನಾ ಯೋಜನೆ ಜಾರಿಗೊಳ್ಳಲಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದ ರೈತರು ಸಂಪೂರ್ಣ ಸಾಲ ಮುಕ್ತರನ್ನಾಗಿ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡೆ ಹುಟ್ಟಿಸಿದೆ.