ಗೃಹಲಕ್ಷ್ಮೀ ಯೋಜನೆಯ ಮೊದಲ ಕಾಣಿಕೆಯನ್ನು ಚಾಮುಂಡೇಶ್ವರಿಗೆ ಅರ್ಪಿಸಿದ ಸಿಎಂ, ಡಿಸಿಎಂ
ಮೈಸೂರು, ಆಗಸ್ಟ್ 29: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ಹರಕೆ ತೀರಿಸಿದ್ದಾರೆ. ದೇವಿಗೆ ರೇಷ್ಮೆ ಸೀರೆ ನೀಡುವ ಮೂಲಕ ಹರಕೆ ಸಲ್ಲಿಸಿದ್ದು, ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ರೂ. ನೀಡುವ ಮೂಲಕ ಚಾಮುಂಡಿ ದೇವಿಗೆ ಮೊದಲ ಗೃಹಲಕ್ಷ್ಮೀ ಕಾಣಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಜಾರಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿದರು. ಚುನಾವಣೆಗೂ ಮುನ್ನ ಗ್ಯಾರಂಟಿ ಕಾರ್ಡ್ಗೆ ಪೂಜೆ ಸಲ್ಲಿಸಿ ಕಟ್ಟಿಕೊಂಡಿದ್ದ ಹರಕೆಯನ್ನು ಸರ್ಕಾರ ಬಂದು ನೂರು ದಿನಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ತೀರಿಸಲಾಯಿತು.

ಇನ್ನೂ ಚಾಮುಂಡೇಶ್ವರಿ ದರ್ಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ತಿಳಿಸಿದರು.
ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಇದಲ್ಲದೆ ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ ಎಂದರು.
ಮೇ 9 ರಂದು ಚುನಾವಣೆಯ ಹಿಂದಿನ ದಿನ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿದ್ದೆವು. ನಾಳೆ ಐದು ಗ್ಯಾರಂಟಿ ಗಳಲ್ಲಿ ಪ್ರಮುಖ ವಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯುತ್ತಿದೆ. ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಚಾಲನೆ ನೀಡಲಾಗುತ್ತಿದೆ. ನಾಳೆ ನಡೆಯುತ್ತಿರುವುದು ಸರ್ಕಾರಿ ಕಾರ್ಯಕ್ರಮ. ಆ ಮೂಲಕ 1.10 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2000 ರೂ. ಪ್ರತಿ ತಿಂಗಳು ನೀಡಲಾಗುತ್ತದೆ.
ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆಯೇರಿಕೆ ಮತ್ತು ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು ಮತ್ತು ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಒಂದು ಕುಟುಂಬ ಕ್ಕೆ ತಿಂಗಳಿಗೆ ಕನಿಷ್ಠ 4-6 ಸಾವಿರ ರೂಗಳು ದೊರೆಯಲಿವೆ. ಬಡಬರ ಬಳಿ ಹಣವಿದ್ದರೆ ಮಾತ್ರ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದರು.
ಗೃಹಜ್ಯೋತಿ ಅನ್ನಭಾಗ್ಯ, ಶಕ್ತಿ ಯೋಜನೆ ಈಗಾಗಲೇ ಚಾಲನೆಗೆ ಬಂದಿದೆ. ನಾಳೆ ಗೃಹಜ್ಯೋತಿ ಪ್ರಾರಂಭವಾಗಲಿದೆ. ಗೃಹಲಕ್ಷ್ಮಿಯ ರೀತಿ ದೇಶದಲ್ಲಿಯೇ ಒಂದೇ ಯೋಜನೆಗೆ ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಬೇರೆ ಯಾವ ಯೋಜನೆಯೂ ಇಲ್ಲ. 1.10 ಕೋಟಿ ಕಾರ್ಡುಗಳನ್ನು ಹಂಚಿ, ಡಿಬಿಟಿ ಮೂಲಕ ಅವರ ಖಾತೆಗೆ ಹಣವನ್ನು ವರ್ಗಾಯಿಸಲಾಗುವುದು ಎಂದರು.
ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು ನಿವೃತ್ತ ನ್ಯಾ. ಬಿ.ವೀರಪ್ಪ ಅವರು, 40% ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತನಿಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು ನಿವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು ಎಂದು ಹೇಳಿದರು












Click it and Unblock the Notifications