ಸಮೀಕ್ಷೆ ನಡೆಯುವಾಗ ಮೃತಪಟ್ಟ ಮೂವರು ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ: ಸಿ.ಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಇದರೊಂದಿಗೆ ಸಮೀಕ್ಷೆ ಮಾಡುವಾಗ ಮೃತಪಟ್ಟ ಶಿಕ್ಷಕರಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇಂದು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಕೊಪ್ಪಳದಲ್ಲಿ ಸಮೀಕ್ಷೆ ಕಾರ್ಯ ಶೇ.97 ಪೂರ್ಣವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗವು ಈ ಬಗ್ಗೆ ಚರ್ಚಿಸಿದೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ 6,700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದುದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ ಜಿಬಿಎ ವ್ಯಾಪ್ತಿಯಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಲಾಗಿದೆ. 8 ಕೆಲಸದ ದಿನಗಳ ರಜೆ ವಿಸ್ತರಿಸಲಾಗಿದೆ. ಇದೇ 12ನೇ ತಾರೀಕಿನಿಂದ ದ್ವಿತೀಯ ಪಿ.ಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.












Click it and Unblock the Notifications