Siddaramaiah: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ಸಿದ್ದರಾಮಯ್ಯ ಮಹತ್ವದ ಘೋಷಣೆ
ಬೆಂಗಳೂರು ಏಪ್ರಿಲ್ 07: ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದು ಹೇಳಿದರು.

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು. ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.
ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು. ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ವೇಳೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪ ಅವರು ಮಾತನಾಡಿ, ಬೆಳಗಾವುದರೊಳಗೆ ನಗರದ ಶುಚಿತ್ವವನ್ನು ಕಾಪಾಡುವುದು ಪೌರಕಾರ್ಮಿಕರ ಕೆಲಸವಾಗಿರುತ್ತದೆ. ಇಂತಹ ಕೆಲಸ ಯಾವ ಸಮುದಾಯವು ಮಾಡುವುದಿಲ್ಲ ಈ ಸಮುದಾಯದ ಪೌರ ಕಾರ್ಮಿಕರು ರಸ್ತೆಗಳನ್ನು ಗುಡಿಸುವುದು ಚರಂಡಿಗಳನ್ನು ಶುಭ್ರಗೊಳಿಸಿ ನಗರದ ಆರೋಗ್ಯವನ್ನು ಕಾಪಾಡುವುದು ಈ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಸಮುದಾಯದ ಪೌರ ಕಾರ್ಮಿಕರ ಮಹತ್ವದ ಕೆಲಸ ಮಾಡಿತ್ತಿದ್ದಾರೆ.
ಪೌರಕಾರ್ಮಿಕರ ಈ ಕೆಲಸ ಬಹಳ ಕಷ್ಟಕರವಾದ ಕೆಲಸ ಈ ಸಮುದಾಯದ ಪೌರಕಾರ್ಮಿಕರು ಈ ಕೆಲಸದಲ್ಲಿ ತೊಡಗಿದ್ದಾರೆ. ಇವರ ಕೆಲಸವನ್ನು ಕಾಯಂ ಮಾಡಲು ಒತ್ತಡ ಬಂದಿದ್ದು ನಗರ ಸಭೆ ,ಪುರಸಭೆಯಲ್ಲಿ ಹೆಚ್ಚಿನ ಪೌರಕಾರ್ಮಿಕರು ದುಡಿಯುತ್ತಿದ್ದು ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿ ಗಳು ಕ್ರಮವಹಿಸಲಿದ್ದಾರೆ. ಇವರ ಮಕ್ಕಳಿಗೆ ಉನ್ನತ ವಿಧ್ಯಾಭ್ಯಾಸ ಮಾಡಲು ಉತ್ತಮ ಅವಕಾಶಗಳನ್ನು ಮಾನ್ಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ.
ನಾನು ಕೇಂದ್ರದಲ್ಲಿ ಸಚಿವರಿದ್ದಾಗ ಕೆಜಿಎಫ್,ಕೋಲಾರದಲ್ಲಿ 1500 ಮನೆಗಳನ್ನು ಕೇವಲ ಪೌರಕಾರ್ಮಿಕರಿಗೆ ಕಟ್ಟಿಸಿದ್ದು ,ಈಗ ದೇವನಹಳ್ಳಿಯ ವಿಜಯಪುರದಲ್ಲಿ 51 ನಿವೇಶನ ಮತ್ತು ದೇವನಹಳ್ಳಿ ಯ 100 ಪೌರಕಾರ್ಮಿಕರಿಗೆ ನಿವೇಶನಗಳ ನೀಡುವುದಕ್ಕೆ ಕ್ರಮ ವಹಿಸಲಾಗುತ್ತದೆ , ನಾನು ಈ ರಾಷ್ಟ್ರದ ಉದ್ದಗಲಕ್ಕೂ ಹೋಡಾಡಿದ್ದು ಬಹುಶಃ ಯಾವ ರಾಜ್ಯದಲ್ಲಿಯೂ ಈ ರೀತಿ ಸೌಲಭ್ಯಗಳನ್ನು ಕಲ್ಪಿಸಿಲ್ಲಾ ನಮ್ಮ ರಾಜ್ಯದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ರವರು ಬಡವರ ಪರವಾಗಿದ್ದು ಹೆಚ್ಚಿನ ಕಾಳಜಿಯನ್ನು ಹೊಂದಿದ್ದು ಹಲವಾರು ಬಡವರ ಪರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಕಾರ್ಮಿಕರು ಬಡವರು, ಶೋಷಿತವರ್ಗಗಳು, ಅಲ್ಪಸಂಖ್ಯಾತರ ಹಾಗೂ ರೈತರ ಪರವಾಗಿದ್ದು ಇಂದು ಮಾನ್ಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪೌರಕಾರ್ಮಿಕರಿಗೆ ಬಿಪಿಎಲ್ ಪಡಿತರ ಕಾರ್ಡ್ ನೀಡಲು ಬೇಡಿಕೆ ಇದ್ದು ಅದರ ಕುರಿತು ಪರಿಶೀಲನೆ ನಡೆಸಿ ಮುಂದಿನ ತೀರ್ಮಾಣ ತೆಗೆದುಕೊಳ್ಳುತ್ತೇವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪನವರು ಹೇಳಿದರು.
ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಪೌರ ಕಾರ್ಮಿಕರ ಖಾಯಂ ವಿಚಾರದಲ್ಲಿ ಒಂದಷ್ಟು ಅಧಿಕಾರಿಗಳು ಸಿಂಧುತ್ವ ನೀಡುವುದಕ್ಕೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ದೂರುಗಳು ಬರುತ್ತಿವೆ. ಯಾರೂ ಸಹ ಒಂದೇ ಒಂದು ರೂಪಾಯಿ ಹಣ ನೀಡಬಾರದು. ಹಣ ಕೇಳಿದರೆ ನನಗೆ ಲಿಖಿತವಾಗಿ ದೂರು ನೀಡಬೇಕು. ಸಿಂಧುತ್ವ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಅಂಜದಿರು ಅಳುಕದಿರು, ಕುಂದದಿರು ಕುಸಿಯದಿರು. ಏನೊ ಎಂದು ಚಿಂತಿಸದಿರು, ನಿನ್ನ ಜೊತೆ ನಾನಿರುವೆ ಕೂಡಲಸಂಗಮದೇವಾ ಎಂದು ಬಸವಣ್ಣ ಅವರು ಹೇಳಿದ್ದಾರೆ. ನಮ್ಮ ಸರ್ಕಾರ ಪ್ರತಿ ಹಂತದಲ್ಲೂ ನಿಮ್ಮ ಜೊತೆ ಸದಾ ಇರುತ್ತದೆ ಎಂದು ಭರವಸೆ ನೀಡಿದರು. ಯಾರೂ ಯಾರನ್ನೂ ಕೀಳಾಗಿ ನೋಡಬಾರದು. ಮಾನವಧರ್ಮವೇ ಅಂತಿಮವಾದುದು, ಸಂವಿಧಾನದ ಮೂಲಕ ಸಮಾನತೆಯನ್ನು ಸ್ಥಾಪಿಸಲು ಕಾಂಗ್ರೆಸ್ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿಮ್ಮ ಮಕ್ಕಳು ಡಾಕ್ಟರ್, ಎಂಜಿನಿಯರ್ ಗಳಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬುದು ನಮ್ಮ ಅಭಿಲಾಷೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.












Click it and Unblock the Notifications