Karnataka DA Hike: ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 25; ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಆದರೆ ವಿಮಾನ ಏರುವ ಮೊದಲು ಸಿದ್ದರಾಮಯ್ಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಬರೆದ ಪತ್ರದ ಅನ್ವಯ ದಿನಾಂಕ 1/1/2023ರಿಂದ ಬಾಕಿ ಇರುವ ತುಟ್ಟಿಭತ್ಯೆಯನ್ನು ಏರಿಕೆ ಮಾಡಲು ಸಿದ್ದರಾಮಯ್ಯ ಬುಧವಾರ ಒಪ್ಪಿಗೆ ನೀಡಿದ್ದಾರೆ.

ಸರ್ಕಾರಿ ನೌಕರರು ಬಹುದಿನಗಳಿಂದ ಕಾಯುತ್ತಿದ್ದ ತುಟ್ಟಿಭತ್ಯೆ ಏರಿಕೆಯ ಬಗ್ಗೆ ಗುರುವಾರ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಲಿದೆ. ಈ ಕುರಿತು ಸಿ. ಎಸ್. ಷಡಾಕ್ಷರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಕಳೆದ ವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು ತುಟ್ಟಿಭತ್ಯೆ ಬಿಡುಗಡೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದರು. ಕೇಂದ್ರ ಸರ್ಕಾರದ 3/4/2023ರ ಆದೇಶವನ್ನು ಉಲ್ಲೇಖಿಸಿದ್ದರು.
ಪತ್ರದಲ್ಲಿ ಏನಿತ್ತು?; ಸಿ. ಎಸ್. ಷಡಾಕ್ಷರಿ ಬರೆದ ಪತ್ರದಲ್ಲಿ ಕೇಂದ್ರ ಸರ್ಕಾರವು ತನ್ನ ನೌಕರರಿರಗೆ ದಿನಾಂಕ 01/01/2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ 4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ್ದು, ಅದರಂತೆ ರಾಜ್ಯ ಸರ್ಕಾರಿ ನೌಕರರಿಗೂ ಶೇ 4 ತುಟ್ಟಿಭತ್ಯೆ ಬಿಡುಗಡೆ ಮಾಡಲು ಸಂಘವು ಮನವಿ ಮಾಡಿತ್ತು.
ಸದರಿ ಕಡತವನ್ನು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಪ್ರಯುಕ್ತ ಬಾಕಿ ಇಡಲಾಗಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಚುನಾವಣಾ ಮಾದರಿ ನೀತಿ ಸಂಹಿತೆಯು ಪ್ರಸ್ತುತ ಅಂತ್ಯಗೊಂಡಿರುವುದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01/01/2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಮನವಿ ಮಾಡಿದ್ದರು.
ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿತ್ತು. ಅಲ್ಲದೇ ಮಾದರಿ ನೀತಿ ಸಂಹಿತೆ ತಕ್ಷಣ ಜಾರಿಗೆ ಬಂದಿತ್ತು. ಆಗ ಸಿ. ಎಸ್. ಷಡಾಕ್ಷರಿ ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರಿ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು.
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಮುಖ್ಯ ಕಾರ್ಯದರ್ಶಿಗಳು ತುಟ್ಟಿಭತ್ಯೆ ಹೆಚ್ಚಳದ ಪ್ರಸ್ತಾವನೆಯನ್ನು ರಾಜ್ಯ ಚುನಾವಣಾ ಆಯೋಗದ ಮುಖಾಂತರ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿದ್ದರು. ಆಗ ಚುನಾವಣಾ ಆಯೋಗ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗಳು ಜಾರಿಯಲ್ಲಿರುವುದರಿಂದ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಬಾಕಿ ತುಟ್ಟಿಭತ್ಯೆ ಬಗ್ಗೆ ಕ್ರಮಕೈಗೊಳ್ಳಲು ಸೂಚನೆ ನೀಡಿತ್ತು.
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರ ಶನಿವಾರ ಪ್ರಕಟವಾಗಿದೆ. ಮೇ 14ರಿಂದಲೇ ನೀತಿ ಸಂಹಿತೆಯನ್ನು ವಾಪಸ್ ಪಡೆಯಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸರ್ಕಾರ ರಚನೆ ಮಾಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ.
ಪ್ರತಿ ಬಾರಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬಳಿಕ ಕರ್ನಾಟಕ ರಾಜ್ಯವೂ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡುತ್ತದೆ. ಆದರೆ ಈ ಬಾರಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಎದುರಾಗಿದ್ದ ಕಾರಣ ತುಟ್ಟಿಭತ್ಯೆ ಹೆಚ್ಚಳ ತಡವಾಗಿದೆ. ಸರ್ಕಾರಿ ನೌಕರರು ದಿನಾಂಕ 01/01/2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಲು ಮನವಿ ಮಾಡಿದ್ದಾರೆ. ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.












Click it and Unblock the Notifications