Siddaramaiah: ವ್ಹೀಲ್ ಚೇರ್ನಲ್ಲಿ ಬಂದ ಸಿಎಂ ಸಿದ್ದರಾಮಯ್ಯ : ಏನಾಯ್ತು ಗೊತ್ತಾ?
ಬೆಂಗಳೂರು, ಫೆಬ್ರವರಿ 11: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಮಂಗಳವಾರ) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಹೀಲ್ ಚೇರ್ನಲ್ಲಿ ಆಗಮಿಸಿರುವುದು ಆತಂಕ ಮೂಡಿಸಿದೆ.
ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಹೀಲ್ ಚೇರ್ನಲ್ಲಿ ಬಂದಿರುವುದು ಎಲ್ಲಾರ ಗಮನಸೆಳೆದಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಇನ್ನೂ ಮಂಡಿ ನೋವಿನಿಂದ ಬಳಲುತಿದ್ದ ಸಿದ್ದರಾಮಯ್ಯ ಅವರಿಗೆ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಿದ್ಧತೆ ಸಭೆಗಳನ್ನು ಕಾವೇರಿ ನಿವಾಸದಲ್ಲೇ ಮಾಡಿದ್ದಾರೆ. ಕೆಲವು ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆ ಪಡೆದುಕೊಂಡಿದ್ದಾರೆ. ಇದೀಗ ಇನ್ವೆಸ್ಟ್ ಕರ್ನಾಟಕ ಸಮಾವೇಶದ ವೇದಿಕೆಗೆ ವ್ಹೀಲ್ ಚೇರ್ನಲ್ಲೇ ಬಂದು ಆಶ್ಚರ್ಯ ಉಂಟು ಮಾಡಿದ್ದಾರೆ.
ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಂಡಿ ನೋವು ಇರುವುದು ತಿಳಿಯಿತು. ಆದಷ್ಟು ಬೇಗ ಅವರು ಗುಣಮುಖರಾಗಲಿ, ರಾಜಕೀಯದಲ್ಲಿ ಕಾಲು ಗಟ್ಟಿಯಾಗಿರಬೇಕು. ಕೆಲಸ ಕಾರ್ಯಗಳಿಗೆ ಓಡಾಟ ಹೆಚ್ಚಾಗಿರುತ್ತೆ, ಹೀಗಾಗಿ ಸಿಎಂ ಸಿದ್ದರಾಮಯ್ಯ ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.
ಇನ್ನೂ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಡಿಜಿಟಲೀಕರಣಗೊಂಡಿರುವ ನಮ್ಮ ವ್ಯವಸ್ಥೆ, ಸುವ್ಯವಸ್ಥಿತ ಪ್ರಕ್ರಿಯೆಗಳು, ಸದೃಢ ಬೆಂಬಲಿತ ಕಾರ್ಯವಿಧಾನಗಳು ಸರಳೀಕೃತ ವ್ಯವಹಾರವನ್ನು ಖಾತ್ರಿಪಡಿಸುತ್ತವೆ. ಐಟಿ ಉತ್ಪಾದನೆಯಿದ ಹಿಡಿದು, ಡೀಪ್ಟೆಕ್ ನಿಂದ ನವೀಕರಿಸಬಹುದಾದ ಇಂಧನದವರೆಗೆ, ಏರೋಸ್ಪೇಸ್ ನಿಂದ ಆರೋಗ್ಯದವರೆಗೆ, ಕರ್ನಾಟಕ ಯಶಸ್ಸನ್ನು ಪೋಷಿಸಲು ಹಾಗೂ ಈ ದಾರಿಯಲ್ಲಿ ಮುನ್ನಡೆಯಲು ಬದ್ಧವಾಗಿದೆ.
ಇಲ್ಲಿ ನೆರೆದಿರುವ ಜಾಗತಿಕ ಹೂಡಿಕೆದಾರರಿಗೆ, ನಾನು ಹೇಳುವುದೇನೆಂದರೆ, ಕರ್ನಾಟಕದಲ್ಲಿ ಹೂಡಿಕೆ ಮಾಡಲು ಇದು ಸುಸಮಯ. ನಮ್ಮೊಂದಿಗೆ ಪಾಲುದಾರರಾಗಿ, ನಮ್ಮೊಂದಿಗೆ ಬೆಳೆಯಿರಿ. ಯಶಸ್ಸು ಮತ್ತು ಸಮೃದ್ಧಿಯಲ್ಲಿ ನಾವು ಹೊಸ ಅಧ್ಯಾಯವನ್ನು ಬರೆಯೋಣ. ಅವಕಾಶಗಳಿಗೆ ಮಿತಿಯಿಲ್ಲದ, ಉಜ್ವಲ ಭವಿಷ್ಯವುಳ್ಳ ಕರ್ನಾಟಕದ ಬೆಳವಣಿಗೆಯ ಕಥೆಯಲ್ಲಿ ನಿಮ್ಮನ್ನು ಸ್ವಾಗತಿಸಲು ನಾನು ಎದುರುನೋಡುತ್ತಿದ್ದೇನೆ. ಜಾಗತಿಕ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.
ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ ಕರ್ನಾಟಕದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿಯನ್ನು ಹೊಂದಿದೆ.
ಜಾಗತಿಕ ಹೂಡಿಕೆದಾರರ ಸಮಾವೇಶ - ಇನೆವೆಸ್ಟ್ ಕರ್ನಾಟಕ-2025ರಲ್ಲಿ ಆಯೋಜಿಸಿರುವ ನಾವೀನ್ಯತೆಯ ಭವಿಷ್ಯ ಕುರಿತ ವಸ್ತುಪ್ರದರ್ಶನವು ಸುಮಾರು 40ಕ್ಕೂ ಹೆಚ್ಚು ಜಾಗತಿಕ ಕಂಪನಿಗಳು, ಸ್ಟಾರ್ಟ್ ಅಪ್ ಕಂಪನಿಗಳಿಂದ, ಡ್ರೋನ್ ತಂತ್ರಜ್ಞಾನ, ಅಂತರಿಕ್ಷ ತಂತ್ರಜ್ಞಾನ, ಆರೋಗ್ಯ ವಲಯ, ಕೃಷಿ ಹಾಗೂ ಆರೋಗ್ಯ ತಂತ್ರಜ್ಞಾನ ಮತ್ತು ವೈಮಾನಿಕ ಮತ್ತು ರಕ್ಷಣಾ ವಲಯಗಳ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಲಯಗಳ ಕುರಿತು ಸ್ವಾಯತ್ತ ಪರಿಹಾರಗಳನ್ನು ಒದಗಿಸುತ್ತಿರುವುದನ್ನು ಬಿಂಬಿಸಲಿದೆ.












Click it and Unblock the Notifications