ಅಕ್ಟೋಬರ್ನಲ್ಲಿ ಸಿದ್ದರಾಮಯ್ಯ ಸಂಪುಟ ಪುನರ್ ರಚನೆ, ಹೈಕಮಾಂಡ್ ಸುಳಿವು!
ಬೆಂಗಳೂರು, ಆಗಸ್ಟ್ 06: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ 2024ರಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಎಐಸಿಸಿ ಸತ್ಯಶೋಧನಾ ಸಮಿತಿ ಹೈಕಮಾಂಡ್ ನಾಯಕರಿಗೆ ವರದಿ ನೀಡಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದರೂ ಸಹ 28 ಕ್ಷೇತ್ರಗಳ ಪೈಕಿ 9 ಸ್ಥಾನಗಳಲ್ಲಿ ಮಾತ್ರ ಗೆಲುವು ಸಿಕ್ಕಿತ್ತು. ಬಿಜೆಪಿ 19 ಮತ್ತು ಜೆಡಿಎಸ್ 2 ಕ್ಷೇತ್ರದಲ್ಲಿ ಜಯಗಳಿಸಿದ್ದವು.
ಲೋಕಸಭಾ ಚುನಾವಣಾ ಫಲಿತಾಂಶದ ಪರಾಮರ್ಶೆ ಕುರಿತು ಸಭೆ ನಡೆದಿತ್ತು. ಎಐಸಿಸಿ ರಚಿಸಿದ್ದ ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಸದಸ್ಯ ಗೌರವ್ ಗೊಗೊಯಿ ಹಾಗೂ ಹಿಬಿ ಹಿಡನ್ ಮುಂದೆ ಸಚಿವರು ತಮ್ಮ ಅಭಿಪ್ರಾಯವನ್ನು ದಾಖಲು ಮಾಡಿದ್ದರು. ಜುಲೈನಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ಸಮಿತಿ ಈಗ ಹೈಕಮಾಂಡ್ಗೆ ವರದಿ ನೀಡಿದೆ.

ಸತ್ಯಶೋಧನಾ ಸಮಿತಿಯ ವರದಿ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರ ಕಿವಿಯನ್ನು ಹೈಕಮಾಂಡ್ ನಾಯಕರು ಹಿಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಸರಿಯಾಗಿ ಕೆಲಸ ಮಾಡಿಲ್ಲ, ಇತ್ತ ಸರ್ಕಾರದಲ್ಲಿಯೂ ಸಕ್ರಿಯರಾಗಿಲ್ಲ ಎಂದು ಸಚಿವರಿಗೆ ಮುಖ್ಯಮಂತ್ರಿಗಳ ಎದುರಲ್ಲೇ ಕ್ಲಾಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಹೈಕಮಾಂಡ್ ನಾಯಕರ ಆಗಮನ: ರಾಜ್ಯದ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದರು.
ಭಾನುವಾರ ಉಭಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಛೇರಿಯಲ್ಲಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಸಚಿವರ ಜೊತೆ ಸಭೆಯನ್ನು ನಡೆಸಿದ್ದರು. ಸಭೆಯ ಬಳಿಕ ಕೆ. ಸಿ. ವೇಣುಗೋಪಾಲ್ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ಟೀಕೆಗಳನ್ನು ಮಾಡಿದ್ದರು, ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಎಲ್ಲವನ್ನು ಎದುರಿಸುತ್ತೇವೆ ಎಂದು ಘೋಷಣೆ ಮಾಡಿದ್ದರು.
ಆದರೆ ಮೂಲಗಳ ಮಾಹಿತಿ ಪ್ರಕಾರ ಸಭೆಯಲ್ಲಿ ನಡೆದಿರುವುದೇ ಬೇರೆ. ಸತ್ಯಶೋಧನಾ ಸಮಿತಿಯ ವರದಿಯನ್ನು ಸಚಿವರ ಮುಂದೆ ಇಡಲಾಗಿದೆ. ಈ ವರದಿಯನ್ನು ಆಧರಿಸಿ ಸರಿಯಾಗಿ ಕೆಲಸ ಮಾಡಿ ಎಂದು ಕೆಲವು ಸಚಿವರಿಗೆ ಖಡಕ್ ಎಚ್ಚರಿಕೆಯನ್ನು ನೀಡಲಾಗಿದೆ. ಅಕ್ಟೋಬರ್ ವೇಳಗೆ ಎಲ್ಲವೂ ಸುಧಾರಿಸದಿದ್ದಲ್ಲಿ ಸಂಪುಟ ಪುನರ್ ರಚನೆ ಅನಿವಾರ್ಯ ಎಂಬ ಸುಳಿವು ಸಹ ನೀಡಲಾಗಿದೆ.
ರಾಜ್ಯದಲ್ಲಿ ಪಕ್ಷದ ಸರ್ಕಾರವಿದೆ. ಒಂದು ವೇಳೆ ಸಚಿವರು ಸರಿಯಾದ ಶ್ರಮ ಹಾಕಿದ್ದರೆ ಲೋಕಸಭೆ ಚುನಾವಣೆಯಲ್ಲಿ 15 ಸ್ಥಾನ ಗೆಲ್ಲಬಹುದಿತ್ತು ಎಂದು ಸಭೆಯಲ್ಲಿ ಕೆ. ಸಿ. ವೇಣುಗೋಪಾಲ್ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿಯೇ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮಾಹಿತಿಗಳ ಪ್ರಕಾರ ಕೆ. ಸಿ. ವೇಣುಗೋಪಾಲ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಸಹಕಾರ ಇಲಾಖೆಯ ಸಚಿವರ ಕಾರ್ಯ ವೈಖರಿ ಕುರಿತು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಇಲಾಖೆಯ ಕೆಲಸ ಸರಿಯಾಗಿ ನಿರ್ವಹಣೆ ಮಾಡದಿರುವುದು, ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡದೇ ಅಭ್ಯರ್ಥಿ ಸೋಲಿಗೆ ಕಾರಣವಾಗಿದ್ದು, ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುವುದು ಸೇರಿದಂತೆ ವಿವಿಧ ವಿಚಾರಗಳಲ್ಲಿ ಹಲವು ಸಚಿವರ ವಿರುದ್ಧ ಹೈಕಮಾಂಡ್ ಅತೃಪ್ತಿ ವ್ಯಕ್ತಪಡಿಸಿದೆ.
ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದರು. ಆಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಹತ್ವದ ಸಭೆಯನ್ನು ನಡೆಸಿದ್ದರು. ಸಂಪುಟ ಪುನರ್ ರಚನೆ ಬಗ್ಗೆ ಇದೇ ಸಭೆಯಲ್ಲಿಯೂ ಚರ್ಚೆ ನಡೆದಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications