ಕಾವೇರಿ ವಿವಾದ : ಜೂ.9ರಂದು ಸರ್ವಪಕ್ಷ ಸಭೆ
ಬೆಂಗಳೂರು, ಜೂ. 6 : ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಲು ಸಿದ್ಧತೆ ನಡೆಸಿದೆ ಎಂಬ ವರದಿಗಳ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.9ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜೂ.10ರಂದು ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಾಗುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಮನವಿಯಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಲು ಹೊರಟಿದೆ. ಕೇಂದ್ರ ಜಲಸಂಪನ್ಮೂಲ ಸಚಿವಾಲಯ, ಕಾವೇರಿ ವಿಚಾರವಾಗಿ ಸಂಪುಟ ಟಿಪ್ಪಣಿಯೊಂದನ್ನು ಸಿದ್ಧಪಡಿಸಿ ಸಂಬಂಧಿಸಿದ ಸಚಿವಾಲಯಗಳಿಗೆ ರವಾನೆ ಮಾಡಿದೆ ಎಂಬ ಸುದ್ದಿ ಹಬ್ಬಿದೆ. [ಕಾವೇರಿ : ಕರೆಂಟು ಕೊಟ್ರೆ ಎನ್ಡಿಎಗೆ 'ಜಯಾ' ಕರದಂಟು]

ಸಂಬಂಧಿಸಿದ ಇಲಾಖೆಗಳು ಸಮ್ಮತಿ ಸೂಚಿಸಿದರೆ ಮುಂದಿನ ವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಟಿಪ್ಪಣಿಯನ್ನು ಮಂಡಿಸಿ ಒಪ್ಪಿಗೆ ಪಡೆದುಕೊಳ್ಳಲಾಗುತ್ತದೆ ಎಂಬ ವರದಿಗಳಿವೆ. ಆದ್ದರಿಂದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.9ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದು, ಕರ್ನಾಟಕ ನಾಲ್ವರು ಕೇಂದ್ರ ಸಚಿವರನ್ನು ಸಭೆಗೆ ಆಹ್ವಾನಿಸಿದ್ದಾರೆ.[ಮೋದಿ ಭೇಟಿ ಮಾಡಿದ ಸಿದ್ದರಾಮಯ್ಯ]
ಶುಕ್ರವಾರ ವಿಧಾನಸೌಧದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ಸಿದ್ಧತೆ ನಡೆಸುತ್ತಿದೆ ಎಂಬ ವರದಿ ಬಂದಿದೆ. ಆದ್ದರಿಂದ ಈ ಕುರಿತು ಎಲ್ಲಾ ಪಕ್ಷಗಳ ಅಭಿಪ್ರಾಯ ಪಡೆಯಲು ಜೂ.9ರಂದ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ನಾಲ್ವರು ಕೇಂದ್ರ ಸಚಿವರ ಜೊತೆ ಮಾತನಾಡಿ ಸಭೆಗೆ ಆಹ್ವಾನಿಸಿದ್ದೇನೆ. ಜೂನ್ 10ರಂದು ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲಾಗುತ್ತದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡದಂತೆ ಒತ್ತಾಯಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಜಯಲಲಿತಾ ಬೇಡಿಕೆ ಏನು ? : ಕಾವೇರಿ ಐತೀರ್ಪಿನ ಅನುಷ್ಠಾನಕ್ಕಾಗಿ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಹಾಗೂ ಮುಲ್ಲಪೆರಿಯಾರ್ ಅಣೆಕಟ್ಟೆ ಎತ್ತರಕ್ಕೆ ಕ್ರಮ ಜರುಗಿಸಬೇಕು ಎಂಬುದು ಜಯಲಲಿತಾ ಅವರ ಬೇಡಿಕೆ. ಈ ಬೇಡಿಕೆಯುಂತೆ ನಿರ್ವಹಣಾ ಮಂಡಳಿ ರಚನೆ ಮಾಡಿದರೆ ಕಾವೇರಿ ವ್ಯಾಪ್ತಿಯಲ್ಲಿರುವ ಆಣೆಕಟ್ಟೆಗಳಿಂದ ನೀರು ಹರಿಸುವ ಕೆಲಸ ನಿರ್ವಹಣಾ ಮಂಡಳಿಗೆ ಕೈಗೆ ಸಿಗಲಿದೆ.
ಸಿದ್ದರಾಮಯ್ಯ ಹೇಳುವುದೇನು : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದಾಗ, ಕಾವೇರಿ ಐತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಅದರ ತೀರ್ಪು ಹೊರಬರುವವರೆಗೂ ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ಮನವಿ ಮಾಡಿದ್ದಾರೆ.












Click it and Unblock the Notifications