ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂ.13 : ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ, ಸಚಿವ ಕಾರ್ಯವೈಖರಿ ಬಗ್ಗೆ ಶಾಸಕರ ದೂರು ಮುಂತಾದ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.18ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಎಲ್ಲಾ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಜೂ.23ರಿಂದ ವಿಧಾನಮಂಡಲ ಅಧಿವೇಶನದ ಆರಂಭವಾಗಲಿದೆ. ಅದಕ್ಕೂ ಮೊದಲು ಶಾಸಕರ ಅಸಮಾಧಾನಗಳನ್ನು ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಜೂ.18ರಂದು ಸಭೆ ನಡೆಯಲಿದೆ. ಅಗತ್ಯವಿದ್ದರೆ ಜೂನ್ 19ಕ್ಕೆ ಸಭೆಯನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಶಾಸಕರಿಗೆ ತಮ್ಮ ದೂರು, ದುಮ್ಮಾನ ಹೇಳಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಶಾಸಕರು ಸಚಿವರ ಬಗ್ಗೆ ದೂರು ಹೇಳಿದರೆ ಉತ್ತರ ಕೊಡಲು ಸ್ವತಃ ಸಚಿವರು ಸಭೆಯಲ್ಲಿ ಹಾಜರಿರುತ್ತಾರೆ. ಎಲ್ಲಾ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಿಎಂ ಸೂಚನೆ ಕೊಟ್ಟಿದ್ದಾರೆ. [ವಿಧಾನ ಪರಿಷತ್ ಪ್ರವೇಶಿಸಿದ ಪರಮೇಶ್ವರ್]
ಜೆಡಿಎಸ್ ಪಕ್ಷದ ಶಾಸಕರು ಜೂ.15ರಿಂದ ಶ್ರೀಲಂಕಾ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಂತೆಯೇ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕಾಂಗ ಸಭೆ ಕರೆದಿದ್ದು, ಹಲವಾರು ಕಾರಣಗಳಿಗಾಗಿ ಸಭೆ ಕುತೂಹಲ ಮೂಡಿಸಿದೆ. [ಶ್ರೀಲಂಕಾ ಪ್ರವಾಸದ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆಗಳು]
ಶಾಸಕರು ಈಗಾಗಲೇ ಸಂಪುಟ ವಿಸ್ತರಣೆ, ನಿಮಗ ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ, ಪರಿಷತ್ ನಾಮನಿರ್ದೇಶನ, ಸಚಿವರ ಕಾರ್ಯವೈಖರಿ ಮುಂತಾದ ವಿಚಾರಗಳ ಕುರಿತಾಗಿ ಅಪಸ್ಪರ ಎತ್ತುತ್ತಿದ್ದಾರೆ. ಈ ಸಮಯದಲ್ಲಿಯೇ ಸಿಎಂ ಶಾಸಕಾಂಗ ಸಭೆ ಕರೆದಿದ್ದು, ಸಭೆಯಲ್ಲಿ ಎಲ್ಲಾ ಆರೋಪಗಳಿಗೆ ಉತ್ತರ ದೊರೆಯುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆ ಆಗುತ್ತಾ? : ವಿಧಾನಪರಿಷತ್ತಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುವುದಕ್ಕೂ ಮೊದಲು ಸಂಪುಟ ವಿಸ್ತರಣೆಯನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿದೆ.
ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ವಿಧಾನಮಂಡಲ ಅಧಿವೇಶನ ಎದುರಿಸಲು ಸಿಎಂ ಸಿದ್ದರಾಮಯ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಒಂದುವೇಳೆ ಅಗತ್ಯ ಬಿದ್ದರೆ ಸಭೆಯನ್ನು ಜೂ.19ಕ್ಕೂ ಮುಂದುವರೆಸಲು ಸಿಎಂ ತೀರ್ಮಾನಿಸಿದ್ದಾರೆ.












Click it and Unblock the Notifications