Siddaramaiah: ನಿವೃತ್ತಿ ಬಗ್ಗೆ ಸಿದ್ದರಾಮಯ್ಯ ಸ್ಫೋಟಕ ಮಾತು
ಬೆಂಗಳೂರು, ಫೆಬ್ರವರಿ 13: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಪದೇ ಪದೇ ಚರ್ಚೆ ನಡೆಯುತ್ತಿರುತ್ತದೆ. ಕೈ ಪಾಳಯದಲ್ಲಿ ಅಧಿಕಾರ ಹಂಚಿಕೆ ಕುರಿತು ಕೆಲ ದಿನಗಳ ಹಿಂದ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನ ಸೃಷ್ಟಿಸಿತ್ತು. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವಕ್ಕಾಗಿ ಜಟಾಪಟಿ ನಡೆಯುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿ ದಾಖಲೆ ಬರೆಯುವ ಉತ್ಸಾಹದಲ್ಲಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯಲ್ಲಿ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ಸದ್ಯಕ್ಕೆ ಚುನಾವಣೆ ರಾಜಕೀಯಕ್ಕೆ ನಿವೃತ್ತಿಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ. ಚುನಾವಣೆ ರಾಜಕೀಯ ಸ್ವಲ್ಪ ಮಟ್ಟಿಗೆ ಸಾಕು ಎನಿಸುತ್ತಿದೆ. ಆದರೆ, ಜನರ ಪ್ರೀತಿ-ವಿಶ್ವಾಸ ಇರುವುದರಿಂದ ಮುಂದುವರಿಯಬೇಕೋ ಅಥವಾ ಬೇಡವೋ ಎಂಬುದನ್ನು ಜನರ ಅಭಿಪ್ರಾಯ ಪಡೆದು ತೀರ್ಮಾನಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನೂ ನಾನು ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ನಿಲ್ಲಬಾರದು ಅಂತ ಮಾನಸಿಕವಾಗಿ ಸಿದ್ಧನಾಗಿದ್ದೇನೆ. ಆದರೆ, ಜನರು, ಹಿತೈಶಿಗಳು ಮತ್ತು ಸ್ನೇಹಿತರು ರಾಜಕೀಯದಲ್ಲಿ ಮುಂದುವರಿಯಬೇಕು ಅಂತಾ ಒತ್ತಡ ಹಾಕುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಕೂಡ ಜನರು ನಮಗೆ ಅಧಿಕಾರ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಅಧಿಕಾರಕ್ಕೆ ಬರಲು ಜನರ ಆಶೀರ್ವಾದ ಮುಖ್ಯ, ಜನರ ಆಶಿರ್ವಾದ ಇಲ್ಲದೆ ಅಧಿಕಾರ ಸಾಧ್ಯವಿಲ್ಲ. ಇದಾದ ಬಳಿಕ ಮುಖ್ಯಮಂತ್ರಿಯಾಗಬೇಕೆಂದರೆ ಶಾಸಕರ ಹಾಗೂ ಹೈಕಮಾಂಡ್ ಬೆಂಬಲ ಪಡೆಯುವುದು ಕೂಡ ತುಂಬಾ ಮುಖ್ಯ. ಇನ್ನೂ ಎರಡನೇ ಅವಧಿಗೂ ತಾವೇ ಮುಖ್ಯಮಂತ್ರಿ ಆಗಿ ಮುಂದುವರೆದಿರುವುದು ಸಂತಸ ತಂದಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ದೇವರಾಜ ಅರಸು ಅವರ ಮುಖ್ಯಮಂತ್ರಿ ಅವಧಿಯ ದಾಖಲೆ ಕುರಿತ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅರಸು ಅವರು 7 ವರ್ಷ 7 ತಿಂಗಳು ರಾಜ್ಯದ ಸಿಎಂ ಆಗಿದ್ದರು. ನನಗೆ ದಾಖಲೆಗಳಲ್ಲಿ ನಂಬಿಕೆ ಇದೆ ಎಂದು ಒಗಟಿನ ಉತ್ತರ ನೀಡಿದ್ದಾರೆ. ಇನ್ನೂ ಅರಸು ಅವರ ದಾಖಲೆ ಸರಿಗಟ್ಟಲು ಸಿದ್ದರಾಮಯ್ಯ ಅವರು ಡಿಸೆಂಬರ್ ಅಂತ್ಯದವರೆಗೂ ಸಿಎಂ ಆಗಿರಲೇಬೇಕು. ಅಂದರೆ ಎರಡೂವರೆ ವರ್ಷಗಳ ನಂತರವೂ ಮುಖ್ಯಮಂತ್ರಿಯಾಗಿ ಮುಂದುವರಿಯುವ ಇಂಗಿತಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳಲ್ಲಿ ವ್ಯಕ್ತವಾಗಿದೆ ಎನ್ನಲಾಗಿದೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ದಾಖಲೆಗಳ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಮಾಡಿದ್ದೀನಿ. ದಾಖಲೆ ಮಾಡುವ ನಂಬಿಕೆ, ವಿಶ್ವಾಸ ನನಗೆ ಇದೆ. ಮುಡಾ ಕೇಸ್ನಲ್ಲಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದರು. ಬೇಕು ಅಂತಲೇ ರಾಜಕೀಯ ಮಾಡಿದ್ರು. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತೆ ಎಂದು ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications