Caste Census: ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೀಗಂದ್ರು
ಬೆಂಗಳೂರು: ದೇಶದ ಮೂಲೆ ಮೂಲೆಯಲ್ಲಿ ಈಗ ಜಾತಿಗಣತಿ ವರದಿ ವಿಚಾರ ಸಂಚಲನ ಸೃಷ್ಟಿಸಿದೆ. ಇದರಲ್ಲಿ ವಿಶೇಷತೆ ಏನು ಅಂದ್ರೆ, ಬಿಹಾರ ಬಳಿಕ ಕರ್ನಾಟಕದ ಜಾತಿಗಣತಿ ವರದಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಕಾರಣಕ್ಕೆ ಇಡೀ ದೇಶದ ಕಣ್ಣು ಈಗ ಬಿಹಾರ ಬಳಿಕ ಕರ್ನಾಟಕದ ಮೇಲೆ ಬಿದ್ದಿದೆ. ಹೀಗಿದ್ದಾಗಲೇ ಸಿಎಂ ಸಿದ್ದರಾಮಯ್ಯ ಕೂಡ ಕರ್ನಾಟಕದ ಜಾತಿಗಣತಿ ವಿಚಾರವಾಗಿ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ 'ಪ್ರೇರಣಾ ಸಮಾರಂಭ' ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಿಡುಗಡೆ ವಿಚಾರವನ್ನೂ ಪ್ರಸ್ತಾಪಿಸಿದ್ದು, ಇದೇ ಸಮಯದಲ್ಲಿ ಜಾತಿಗಣತಿ ವಿಚಾರದಲ್ಲಿ ತಮ್ಮ ಸರ್ಕಾರದ ನಿಲುವು ಏನು? ಅನ್ನೋದನ್ನು ಕೂಡ ಸಿಎಂ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಕರ್ನಾಟಕ ರಾಜ್ಯದ ಜಾತಿಗಣತಿ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ಏನು?

ಪ್ರತಿಭೆ ಒಂದು ಜಾತಿಗೆ ಸೀಮಿತವಲ್ಲ!
'ಪ್ರೇರಣಾ ಸಮಾರಂಭ' ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹುಟ್ಟಿನಿಂದಲು ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದರು. ಹಾಗೇ ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಅವಕಾಶ ಸಿಕ್ಕರೆ ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆ ಹೊರ ಬರುತ್ತೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಸಿಎಂ ಇದೇ ಸಮಯದಲ್ಲಿ ಸಲಹೆ ನೀಡಿದರು. ಅಲ್ಲದೆ ಈ ಸಂದರ್ಭದಲ್ಲೇ ಕರ್ನಾಟಕದ ಜಾತಿಗಣತಿ ವರದಿ ಬಿಡುಗಡೆ ಬಗ್ಗೆಯೂ ಮಾತನಾಡಿದ್ದಾರೆ.
ಅಂಬೇಡ್ಕರ್ ಅವರು ಶೂದ್ರ ಸಮುದಾಯ...
ಸಿಎಂ ಸಿದ್ದರಾಮಯ್ಯ ತಮ್ಮ ಮಾತನ್ನು ಮುಂದುವರಿಸಿ, ನಮಗೆ ಸಹಕರಿಸಿರುವ ಸಮಾಜದ ಪರವಾಗಿ ನಾವು ಶ್ರಮಿಸಬೇಕು. ಶ್ರಮ & ಗುರಿ ಇಲ್ಲದೆ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ ಹಾಗೂ ವಿದ್ಯೆ ನಿಷೇಧಿಸಲಾಗಿತ್ತು. ಮುಂದುವರಿದ ಜಾತಿಗಳ ಹೆಣ್ಣುಮಕ್ಕಳಿಗೂ ಅದಕ್ಕಿಂತ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೂ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎನ್ನುವ ಮೂಲಕ ಸಿಎಂ ಇತಿಹಾಸ ನೆನಪಿಸಿದರು.
ಜಾತಿಗಣತಿ ವರದಿ ಸ್ವೀಕರಿಸುತ್ತೇವೆ!
ಇಡೀ ದೇಶದಲ್ಲಿ ಮೊದಲು ಜಾತಿಗಣತಿ ಮಾಡಿದ್ದು ನಮ್ಮ ಸರ್ಕಾರವಾಗಿದೆ. ನಿಖರವಾಗಿ ಪ್ರತಿ ಜಾತಿಗಳ ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ಆದರೆ ಈ ಹಿಂದೆ ಅಸ್ತಿತ್ವದಲ್ಲಿದ್ದ ನಮ್ಮ ಸರ್ಕಾರದ ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿ ಸ್ವೀಕರಿಸಲಿಲ್ಲ. ಇದೀಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಆ ಜಾತಿಗಣತಿ ವರದಿ ಸ್ವೀಕರಿಸುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮಾತ್ರವಲ್ಲ, ಈಗ ದೇಶದ ಮಟ್ಟದಲ್ಲೂ ಸಂಚಲನ ಸೃಷ್ಟಿಸಿದ್ದಾರೆ.

ವೈದ್ಯಕೀಯ ಶಿಕ್ಷಣದ ಬಗ್ಗೆ ಏನಂದ್ರು?
ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು & ಗ್ರಾಮೀಣ ವಿದ್ಯಾರ್ಥಿಗಳಿಗೂ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜು & ಹಾಸ್ಟೆಲ್ ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಹಾಗೂ ಗ್ರಾಮೀಣ ಮಕ್ಕಳಿಗೂ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ಹೆಚ್ಚಾಗಿದೆ
ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆ ಹೆಚ್ಚಿದ್ದು, ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಹೀಗಾಗಿ ಖಾಲಿ ಇರುವ ಗ್ರಾಮೀಣ ವೈದ್ಯ ಹುದ್ದೆಗಳನ್ನ ಮಾತ್ರ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ, ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಜೀವನವನ್ನ ನೆನೆದ ಸಿಎಂ, ನಾನು ಬಿಎಸ್ಸಿ ಓದುವಾಗ ಹೋಟೆಲ್ನಿಂದಲೆ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂತಹ ಸ್ಥಿತಿಯಲ್ಲೇ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ. ಎಂದು ಸಿಎಂ ತಮ್ಮ ಯೋಜನೆಯ ಬಗ್ಗೆ ನೆನಪು ಮಾಡಿಕೊಂಡರು.
ವೈದ್ಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ & ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಚರ್ಚೆ?
ಒಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆ, ಇದೀಗ ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಜಾತಿಗಣತಿ ಬಗ್ಗೆ ಚರ್ಚೆ ನಡೆಯುವಂತೆ ಮಾಡಿದೆ. ಅದರಲ್ಲೂ ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಬಳಿಕ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರತಿಕ್ರಿಯೆ ನೀಡಿದ್ದರು. ಇದೀಗ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆ ಬಹುತೇಕ ಪಕ್ಕಾ ಆಗಿದೆ. ಹೀಗಾಗಿ ಮುಂದೆ ಈ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡುತ್ತಾರಾ? ಅಂತಾ ಕಾದು ನೋಡಬೇಕಿದೆ.
ಬಿಹಾರದ ಜಾತಿಗಣತಿ ವರದಿ ಹೇಳಿದ್ದೇನು?
ಅಷ್ಟಕ್ಕೂ ಬಿಹಾರದಲ್ಲಿ ಬಿಡುಗಡೆ ಆಗಿದ್ದ ಜಾತಿ ಗಣತಿ ಪ್ರಕಾರ, ಬಿಹಾರದ ಒಟ್ಟು ಜನಸಂಖ್ಯೆ ಪೈಕಿ ಶೇ. 36 ರಷ್ಟು ಅತ್ಯಂತ ಹಿಂದುಳಿದ ಸಮುದಾಯದ ಜನರಿದ್ದಾರೆ ಎನ್ನಲಾಗಿದೆ. ಇನ್ನು ಶೇ. 27ರಷ್ಟು ಹಿಂದುಳಿದ ವರ್ಗದ ಸಮುದಾಯ ಇದೆ. ಶೇ. 19.7 ರಷ್ಟು ಜನರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ್ದು, ಶೇಕಡಾ 1.7ರಷ್ಟು ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಇದ್ದಾರೆ. ಬಿಹಾರದ ಒಟ್ಟು ಜನಸಂಖ್ಯೆ 13.1 ಕೋಟಿಯಾಗಿದ್ದು, ಈ ಪೈಕಿ ಶೇಕಡಾ 15.5 ರಷ್ಟು ಜನ ಸಾಮಾನ್ಯ ವರ್ಗಕ್ಕೆ ಸೇರಿದವರಿದ್ದಾರೆ. ಹೀಗಾಗಿ ಇದೀಗ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಇದರ ಜೊತೆಗೆ ಕರ್ನಾಟಕ ಸರ್ಕಾರ ಕೂಡ ಜಾತಿಗಣತಿ ರಿಲೀಸ್ ಮಾಡಲು ಸಿದ್ಧತೆ ನಡೆಸಿದೆ.












Click it and Unblock the Notifications