Siddaramaiah: ಉದ್ಯೋಗ ಮೀಸಲಾತಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ
ಬೆಂಗಳೂರು ಜುಲೈ 17: ಖಾಸಗಿ ಕಂಪನಿಗಳಲ್ಲಿ ಎಲ್ಲಾ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್ಗೆ ಬಂದ ವಿರೋಧದ ನಡುವೆ ಸಿಎಂ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಇದರಿಂದ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಕನ್ನಡ ನಾಡಿನಲ್ಲಿ ಯಾವುದೇ ಕನ್ನಡಿಗರು ಉದ್ಯೋಗದಿಂದ ವಂಚಿತರಾಗಬಾರದು ಮತ್ತು ಅವರು ಶಾಂತಿಯುತ ಜೀವನ ನಡೆಸುವಂತಾಗಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡ ಪರ ಸರ್ಕಾರ ಎಂದು ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದರು. ಆದರೀಗ ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ (ಜುಲೈ 16) ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ತಮ್ಮ ಟ್ವಿಟ್ ಡಿಲೀಟ್ ಮಾಡಿಕೊಂಡಿದ್ದಾರೆ.

ಏನಿದು ಮಸೂದೆ?
ಕರ್ನಾಟಕ ಸರ್ಕಾರ 'ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಡಿಸಲು ಮುಂದಾಗಿದೆ. ಇದರಿಂದ ಉದ್ಯೋಗದಿಂದ ವಂಚಿರಾಗುತ್ತಿದ್ದ ಕನ್ನಡಿಗರಿಗೆ ಅನುಕೂಲ ಆಗಲಿದೆ.
ಈಗಾಗಲೇ ಸಂಪುಟದಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಮಂಡನೆಯಾಗಿ, ರಾಜ್ಯಪಾಲರ ಅಂಕಿತ ಬಿದ್ದರೆ ಮಸೂದೆ ಶೀಘ್ರದಲ್ಲೇ ಕಾನೂನು ಆಗಿ ಜಾರಿಗೆ ಬರಲಿದೆ. ಈ ಮಸೂದೆಗೆ ಉದ್ಯಮಿಗಳ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಸರ್ಕಾರ ಈ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸುತ್ತದೆ ಎಂಬುದು ಕೂಡ ಚರ್ಚೆಯ ವಿಷಯವಾಗಿದೆ.
ಹಾಗಾದರೆ ಮೀಸಲಾತಿ ಮಸೂದೆ ಜಾರಿಯಾದರೆ ಯಾರು ಅರ್ಹರು? ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ-2024ರಲ್ಲಿ ಏನಿದೆ ಎಂಬುದನ್ನು ನೋಡುವುದಾದರೆ, ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.50 ರಿಂದ ಶೇ.75 ರವರೆಗೆ ಮೀಸಲಾತಿ ನೀಡಬೇಕು.
ಮ್ಯಾನೇಜ್ಮೆಂಟ್ ಹುದ್ದೆಗಳಲ್ಲಿ ಶೇ50ರಷ್ಟು, ನಾನ್ ಮ್ಯಾನೇಜ್ಮೆಂಜ್ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಆ ಪೋಸ್ಟ್ ಅನ್ನು ಸಿದ್ದರಾಮಯ್ಯ ಅವರು ಡಿಲೀಟ್ ಮಾಡಿರುವುದು ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ. ಇದಕ್ಕೆ ಉದ್ಯಮಿಗಳ ವಿರೋಧ ಕಾರಣನಾ ಎಂಬ ಅನುಮಾನ ಕೂಡ ಮೂಡಿದೆ.












Click it and Unblock the Notifications