ಕೇಂದ್ರದಿಂದ ರಾಜ್ಯಗಳ ಮೇಲೆ ಆಕ್ರಮಣ: ಸಿದ್ದರಾಮಯ್ಯ ಟೀಕೆ
ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಕಾನೂನಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ. ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಆಕ್ರಮಣಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಅವರು ತಿಳಿಸಿದರು.
ಬೆಂಗಳೂರು, ಜೂನ್ 8: ಗೋ ಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾನೂನಿನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಬುಧವಾರ (ಜೂನ್ 8), ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧವನ್ನು ಅನೇರವಾಗಿ ಜಾರಿಗೆ ತರಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಸಂತೆಗಳಲ್ಲಿ ಜಾನುವಾರ ಮಾರಾಟಕ್ಕೆ ಹಾಗೂ ಕಸಾಯಿಖಾನೆಗಳಿಗೆ ಗೋವುಗಳ ಮಾರಾಟಕ್ಕೆ ನಿಷೇಧ ಹೇರಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರ, ರಾಜ್ಯ ಸರ್ಕಾರಗಳ ಮೇಲೆ ಅದು ಮಾಡಿರುವ ಆಕ್ರಮಣವಲ್ಲದೆ ಮತ್ತೇನೂ ಅಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಯೊಬ್ಬ ಪ್ರಜೆಗೂ ತಾನು ಉಡುವ ಉಡುಪು ಹಾಗೂ ಆಹಾರಗಳ ಮೇಲೆ ತನ್ನದೇ ಆದ ಸ್ವಾತಂತ್ರ್ಯವಿದೆ. ಅಂಥ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ. ಗೋಹತ್ಯೆ ನಿಷೇಧ ರಾಜ್ಯಗಳ ನಿರ್ಧಾರಕ್ಕೆ ಬಿಟ್ಟ ವಿಷಯ. ಗೋ ಮಾಂಸದ ಮೇಲೆ ನಿರ್ಬಂಧ ವಿಧಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.












Click it and Unblock the Notifications