ಪೊಲೀಸರ ವೈಫಲ್ಯವನ್ನು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆ.5 : ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಸಾವಿಗೆ ಹಿರಿಯ ಅಧಿಕಾರಿಗಳ ನಡುವಿನ ಸಮನ್ವಯತೆ ಕೊರತೆಯೇ ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನ ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 'ಐಪಿಎಸ್ ಅಧಿಕಾರಿಗಳ ಮೂರು ದಿನಗಳ ವಾರ್ಷಿಕ ಸಮ್ಮೇಳನ' ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. [ಬಂಡೆಗೆ ಬಿದ್ದ ಗುಂಡು ಯಾರದ್ದು?]
ರಾಜ್ಯದಲ್ಲಿ ನಡೆದ ಕೋಮುಗಲಭೆ ಕದಡುವ ಯತ್ನ, ಗುಲ್ಬರ್ಗ ಶೂಟೌಟ್ ಮುಂತಾದ ಪ್ರಕರಣಗಳನ್ನು ಪ್ರಸ್ತಾಪಿಸಿದ ಸಿಎಂ, ಭೂಗತ ಪಾತಕಿ ವಿರುದ್ಧ ಕಾರ್ಯಾಚರಣೆ ಆರಂಭಿಸುವ ಮುನ್ನ ಪೊಲೀಸ್ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಸಮನ್ವಯತೆ ಕೊರತೆಯಿಂದಾಗಿ ದೊಡ್ಡ ಅನಾಹುತ ನಡೆಯಿತು ಎಂದರು. ಸಮ್ಮೇಳನದಲ್ಲಿ ಸಿಎಂ ಹೇಳಿದ್ದಿಷ್ಟು

ಸಮನ್ವಯತೆ ಕೊರತೆ
ಗುಲ್ಬರ್ಗದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದ ದೊಡ್ಡ ದುರಂತ ಸಂಭವಿಸಿತು. ಭೂಗತ ಪಾತಕಿ ವಿರುದ್ಧ ಕಾರ್ಯಾಚರಣೆ ಆರಂಭಿಸುವ ಮುನ್ನ ಪೊಲೀಸ್ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂದು ಸಿಎಂ ಹೇಳಿದರು.

ಶಹಾಪುರದಲ್ಲಿ ಗಲಭೆ
ಶಹಾಪುರದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಭೆಯನ್ನು ತಡೆಯಲು ಪೊಲೀಸರು ವಿಫಲರಾಗಿದ್ದಾರೆ. ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸುವ ಬಗ್ಗೆ ಮಾಹಿತಿ ಇದ್ದರೂ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಗ್ರಾಮದಲ್ಲಿ ಸಶಸ್ತ್ರ ಮೀಸಲು ಪಡೆಯ ಒಂದು ವ್ಯಾನ್ ನಿಲ್ಲಿಸಿದ್ದರೂ ಅಮಾಯಕ ದಲಿತ ಯುವಕನ ಹತ್ಯೆ ತಪ್ಪಿಸಬಹುದಿತ್ತು.

ಕೋಮು ಸೌಹಾರ್ದತೆ ಕದಡುವ ಯತ್ನ
ಚಿಕ್ಕಮಗಳೂರು, ತುಮಕೂರು, ಮೈಸೂರು, ಬೆಂಗಳೂರು ಹಾಗೂ ಕರಾವಳಿ ಪ್ರದೇಶದಲ್ಲಿ ಕೋಮು ಸೌಹಾರ್ದತೆ ಕದಡುವ ಶಕ್ತಿಗಳನ್ನು ದಮನ ಮಾಡಬೇಕು. ನೈತಿಕ ಪೊಲೀಸ್ಗಿರಿ ನಡೆಸುವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಕೋಮ ಸೌಹಾರ್ದತೆ ಕದಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚನೆ ನೀಡಿದರು.

ಆತ್ಮಹತ್ಯೆ ನಿಗ್ರಹ ದಳ ರಚನೆ
ಅಪರಾಧ ಪ್ರಕರಣಗಳ ಜೊತಗೆ ಆತ್ಮಹತ್ಯೆ ಪಕ್ರಕರಣಗಳ ಬಗ್ಗೆಯೂ ತೀವ್ರ ಆತಂಕ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಆತ್ಮಹತ್ಯೆಗೆ ಮುಂದಾಗುವವರ ನಿಯಂತ್ರಣಕ್ಕೆ ರಾಜ್ಯದಲ್ಲಿ 'ಆತ್ಮಹತ್ಯೆ ನಿಗ್ರಹ ದಳ ರಚನೆ' ಮಾಡುವುದಾಗಿ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಗೊಬ್ಬರು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅವರನ್ನು ಉಸ್ತುವಾರಿಯನ್ನಾಗಿ ನೇಮಕಗೊಳಿಸುವಂತೆ ಸೂಚಿಸಿದರು.

ಬೇಲಿಯೇ ಎದ್ದು ಹೊಲ ಮೇಯ್ದಂತೆ
ಕೆಲವು ದಿನಗಳ ಹಿಂದೆ ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ ಹಾಗೂ ಮೂವರು ಕಾನ್ಸ್ಟೆಬಲ್ ಸುಲಿಗೆ ಪ್ರಕರಣವನ್ನು ಪ್ರಸ್ತಾಪಿಸಿದ ಸಿಎಂ ಜನಸಾಮಾನ್ಯರಿಗೆ ರಕ್ಷಣೆ ನೀಡಬೇಕಾದ ಪೊಲೀಸರೆ ಇಂತಹ ಕೃತ್ಯ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು.











Click it and Unblock the Notifications