Republic Day: 76ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 26: ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 76ನೇ ಗಣರಾಜ್ಯೋತ್ಸವದ ಕುರಿತು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ನಲ್ಲಿ ಶುಭ ಕೋರಿದ ಅವರು, ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನದ ಪಾಲನೆಯಾಗುತ್ತಿದೆ ಮತ್ತು ಪ್ರಜಾಪ್ರಭುತ್ವ ಸುರಕ್ಷಿತವಾಗಿದೆ ಎಂದು ಅರ್ಥ.

CM Siddaramaiah extends greetings on 76th Republic Day

ಕಟುವಾದ ಸತ್ಯ ಏನೆಂದರೆ ಸರ್ವಾಧಿಕಾರದ ದಂಡದಡಿ ನಮ್ಮ ಕಾರ್ಯಾಂಗ ಕರ್ತವ್ಯಭ್ರಷ್ಟಗೊಳ್ಳುತ್ತಿದೆ, ಶಾಸಕಾಂಗವನ್ನು ಖರೀದಿಸಲಾಗುತ್ತಿದೆ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಒಡ್ಡಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಆಧಾರ ಸ್ಥಂಭಗಳು ದುರ್ಬಲಗೊಂಡು ಶಕ್ತಿಹೀನವಾದಾಗ ಸಂವಿಧಾನವೇ ಅಪ್ರಸ್ತುತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುವ ಸಾಧ್ಯತೆಗಳಿವೆ. ಇಂತಹದ್ದೊಂದು ಅಪಾಯದ ಸ್ಥಿತಿಯಲ್ಲಿ ಭಾರತ ಇಂದು ನಿಂತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ದೊಡ್ಡ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಹೆಗಲ ಮೇಲಿದೆ.

ಜಾತಿ, ಮತ, ಪಂಥ, ಪ್ರದೇಶದ ಭೇದಗಳನ್ನು ಮರೆತು ಇಡೀ ದೇಶ ಒಂದಾಗಿ ಹೊರಗಿನ ಶತ್ರುಗಳನ್ನು ಹೊಡೆದೋಡಿಸಲು ಹೇಗೆ ಸ್ವಾತಂತ್ರ್ಯಹೋರಾಟ ನಡೆಸಲಾಯಿತೋ, ಅಂತಹದ್ದೇ ಒಂದು ಹೋರಾಟವನ್ನು ದೇಶದೊಳಗಿನ ಸಂವಿಧಾನ ವಿರೋಧಿ ಶತ್ರುಗಳ ವಿರುದ್ಧ ನಡೆಸಬೇಕಾಗಿದೆ. ಇದಕ್ಕಾಗಿ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಯದೆ ಹೋದರೆ ಮುಂದಿನ ಪೀಳಿಗೆಗೆ ಬದುಕುಳಿಯಲು ಪ್ರಜಾಪ್ರಭುತ್ವ ಇರುವುದಿಲ್ಲ.

ಇದೊಂದು ಜೀವನ್ಮರಣದ ಪ್ರಶ್ನೆಯಾಗಿದ್ದು, ಗಣರಾಜ್ಯೋತ್ಸವದ ದಿನವಾದ ಇಂದು ನಾವೆಲ್ಲರೂ ಒಗ್ಗೂಡಿ ದೃಢಚಿತ್ತದಿಂದ ಸಂವಿಧಾನವನ್ನು ಉಳಿಸುವ ಸಂಕಲ್ಪ ಮಾಡಬೇಕಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಮೂಲಕ ನಮ್ಮ ಭಾರತವನ್ನು ರಕ್ಷಿಸುವ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಚಿಂತನೆಗಳು.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ನಮ್ಮ ಕಾಂಗ್ರೆಸ್ ಪಕ್ಷ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ. ನಾಡ ಬಾಂಧವರೆಲ್ಲರೂ ಪಕ್ಷ, ಪಂಥ, ಜಾತಿ-ಧರ್ಮಗಳ ಎಲ್ಲೆಯನ್ನು ಮೀರಿ ಈ ಅಭಿಯಾನದಲ್ಲಿ ಕೈ ಜೋಡಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೊಮ್ಮೆ ನಾಡಬಾಂಧವರಿಗೆಲ್ಲ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ದಿನಾಚರಣ ಕುರಿತು ಮೋದಿ ಸಂದೇಶ

ದೇಶದ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ, ನಮ್ಮ ಸಂವಿಧಾನವನ್ನು ರಚಿಸುವ ಮೂಲಕ, ನಮ್ಮ ಅಭಿವೃದ್ಧಿ ಪಯಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯ ಮೇಲೆ ಆಧಾರಿತವಾಗಿದೆ ಎಂದು ಖಚಿತಪಡಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಈ ರಾಷ್ಟ್ರೀಯ ಹಬ್ಬವು ನಮ್ಮ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತದೆ. ಅಲ್ಲದೇ ಬಲಿಷ್ಠ ಮತ್ತು ಸಮೃದ್ಧ ಭಾರತ ರಚಿಸುವ ನಮ್ಮ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+