ಸಂಪುಟ ವಿಸ್ತರಣೆಗೆ ಹೈಕಮಾಂಡ್ನಿಂದ ಒಪ್ಪಿಗೆ : ಸಿದ್ದರಾಮಯ್ಯ
ಬೆಂಗಳೂರು, ಅ.17 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಾಯಕರಿಂದ ಒಪ್ಪಿಗೆ ಪಡೆದಿದ್ದಾರೆ. ಸಂಪುಟದಲ್ಲಿ ಮೂರು ಸ್ಥಾನಗಳ ಖಾಲಿ ಇದ್ದು, ಆ.21ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.
ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಸಂಪುಟ ವಿಸ್ತರಣೆ ಮಾಡಲು ಅನುಮತಿ ಸಿಕ್ಕಿದೆ. ಶೀಘ್ರವೇ ಮೂವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ' ಎಂದರು.

ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ ಅವರ ರಾಜೀನಾಮೆ, ಅಬಕಾರಿ ಸಚಿವರಾಗಿದ್ದ ಎಚ್.ವೈ.ಮೇಟಿ ರಾಜೀನಾಮೆ, ಸಹಕಾರ ಸಚಿವರಾಗಿದ್ದ ಎಚ್.ಎಸ್.ಮಹದೇವಪ್ರಸಾದ್ ಅವರ ನಿಧನದಿಂದಾಗಿ ಸಂಪುಟದಲ್ಲಿ ಮೂರು ಸ್ಥಾನಗಳು ಖಾಲಿ ಇವೆ.
ಬುಧವಾರ ಸಂಜೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕೆಲವು ಸಚಿವರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಸಹ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಹೈಕಮಾಂಡ್ ನಾಯಕರನ್ನು ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.
ವಿಧಾನ ಪರಿಷತ್ತಿನಿಂದ ಒಬ್ಬರು, ಗೀತಾ ಮಹದೇವ ಪ್ರಸಾದ್, ದಲಿತ ನಾಯಕರೊಬ್ಬರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ತಮ್ಮ ಬಳಿ ಇರುವ ಪ್ರಭಾವಿ ಗೃಹ ಖಾತೆಯನ್ನು ಯಾರಿಗೆ ನೀಡುತ್ತಾರೆ? ಎಂಬುದು ಕುತೂಹಲ ಮೂಡಿಸಿರುವ ಪ್ರಶ್ನೆ.












Click it and Unblock the Notifications