ಮಕ್ಕಳ ಸಂಸತ್ : ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರು, ನವೆಂಬರ್ 18 : 'ರಾಜ್ಯದಲ್ಲಿ ಶೀಘ್ರದಲ್ಲೇ ಶೂ ಭಾಗ್ಯ ಯೋಜನೆ ಆರಂಭಗೊಳ್ಳಲಿದೆ. ಜನವರಿಯಲ್ಲಿ ಶಾಲಾ ಮಕ್ಕಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಣೆ ಮಾಡಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ 'ಮಕ್ಕಳ ಸಂಸತ್' ಕಾರ್ಯಕ್ರಮದಲ್ಲಿ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, 'ಶೀಘ್ರದಲ್ಲೇ ಶೂ ಭಾಗ್ಯ ಯೋಜನೆ ಆರಂಭಗೊಳ್ಳಲಿದೆ' ಎಂದರು. [ಪಂಚಕ್ಷೇತ್ರದ ಸಾಧಕಿ 'ಪಂಚಮಿ'ಗೆ ಪ್ರಪಂಚವೇ ಬೆರಗು]
'ಮಕ್ಕಳ ಹಸಿವು, ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅಕ್ಷರ ದಾಸೋಹ, ಕ್ಷೀರಭಾಗ್ಯ, ಕಬ್ಬಿಣಾಂಶದ ಮಾತ್ರೆಗಳು, ಹಾಲು, ಮೊಟ್ಟೆ ಮತ್ತು ಶುದ್ಧ ನೀರಿನ ವ್ಯವಸ್ಥೆ ಮಾಡಲಾಗಿದೆ' ಎಂದು ತಿಳಿಸಿದರು. [ವಿದ್ಯಾರ್ಥಿಗಳ ಪರಿಸರ ಕಾಳಜಿಗೆ ನಮ್ಮದೊಂದು ಸಲಾಂ!]
'2018ರೊಳಗೆ ಕರ್ನಾಟಕವನ್ನು ಬಯಲು ಬಹಿರ್ದೆಸೆಮುಕ್ತ ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಗುರಿ. ರಾಜ್ಯದ ಎಲ್ಲ ಶಾಲೆಗಳಲ್ಲಿ ಶೌಚಗೃಹ ಇಲ್ಲದಿರುವುದು ಗಮನಕ್ಕೆ ಬಂದಿದೆ. ಹಂತಹಂತವಾಗಿ ಎಲ್ಲ ಶಾಲೆಗಳಿಗೆ ಶೌಚಗೃಹ ಕಲ್ಪಿಸಲಾಗುತ್ತದೆ' ಎಂದು ಮುಖ್ಯಮಂತ್ರಿಗಳು ಹೇಳಿದರು. ಮಕ್ಕಳು ಮುಖ್ಯಮಂತ್ರಿಗಳಿಗೆ ಕೇಳಿದ ಪ್ರಶ್ನೆಗಳೇನು? ಚಿತ್ರಗಳಲ್ಲಿ ನೋಡಿ....

ಮಕ್ಕಳ ರಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ
ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲಿ ಹಲವಾರು ಯೋಜನೆಗಳಿವೆ. ಮಕ್ಕಳ ಸಹಾಯವಾಣಿ, ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ರಾಜ್ಯಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳು ಕರ್ತವ್ಯ ನಿರ್ವಹಿಸುತ್ತಿವೆ' ಎಂದರು.

ದೌರ್ಜನ್ಯ ತಡೆಗಟ್ಟಲು ಅಗತ್ಯ ಕ್ರಮ
'ರಾಜ್ಯದಲ್ಲಿ ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರ ಪೋಕ್ಸೋ ಕಾಯ್ದೆ ಜಾರಿಗೆ ತಂದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ' ಎಂದರು.

ಮಕ್ಕಳು ಕೇಳಿದ ಪ್ರಶ್ನೆಗಳು
ಪ್ರಶ್ನೆ : ಗುಪ್ತವಾಗಿ ಭ್ರೂಣ ಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್ ಕೇಂದ್ರಗಳು ಇನ್ನೂ ಇವೆ. ಇವುಗಳ ಮೇಲೆ ಸರ್ಕಾರ ಕಠಿಣ ಕ್ರಮ ಏಕೆ ಕೈಗೊಂಡಿಲ್ಲ?
ಸಿದ್ದರಾಮಯ್ಯ : 'ಭ್ರೂಣ ಲಿಂಗ ಪತ್ತೆ ಮಾಡುವ ಕೇಂದ್ರಗಳ ವಿರುದ್ಧ ಕ್ರಮಕೈಗೊಂಡರೂ ಸಾಕ್ಷ್ಯಾಧಾರಗಳ ಕೊರತೆಯಿಂದ ಶಿಕ್ಷೆಯಾಗುತ್ತಿಲ್ಲ. ಈ ಬಗ್ಗೆ ಪಾಲಕರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ'.

ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ
ಪ್ರಶ್ನೆ : ಬೀಡಿ, ಸಿಗರೇಟ್ ತರುವಂತೆ ಪಾಲಕರೇ ಮಕ್ಕಳಿಗೆ ಪ್ರೇರೇಪಿಸುತ್ತಾರೆ. ಅಂಗಡಿಗಳಲ್ಲೂ ಮಕ್ಕಳಿಗೆ ಇಂತಹ ವಸ್ತುಗಳನ್ನು ನೀಡುತ್ತಾರೆ. ಇದಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲವೇ?
ಸಿದ್ದರಾಮಯ್ಯ : ತಂಬಾಕು ಉತ್ಪನ್ನ, ಮದ್ಯ ತರಿಸುವುದು ಮತ್ತು ಮಕ್ಕಳಿಗೆ ಮಾರಾಟ ಮಾಡುವುದು ಎರಡೂ ತಪ್ಪು. ಇಂಥವರ ಮೇಲೆ ಕ್ರಮಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಮಕ್ಕಳು ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ.

ಬಾಲ್ಯ ವಿವಾಹ ಕಡಿಮೆಯಾಗಿದೆ
'ರಾಜ್ಯದಲ್ಲಿ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲಿ ಹಲವಾರು ಯೋಜನೆಗಳಿವೆ. ಮಕ್ಕಳ ಸಹಾಯವಾಣಿ, ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮುಂತಾದವು ಕಾರ್ಯ ನಿರ್ವಹಣೆ ಮಾಡುತ್ತಿವೆ. ಬಾಲ್ಯ ವಿವಾಹ ನಿಷೇದ ಕಾಯ್ದೆಯಿಂದ ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಕಡಿಮೆಯಾಗಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.












Click it and Unblock the Notifications