BPL Card: ರಾಜ್ಯದ ಜನತೆಗೆ ಬಿಗ್ ಶಾಕ್ : ಈ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರೋ ಅಂತವರ ಬಿಪಿಎಲ್ ಕಾರ್ಡ್ ಅನರ್ಹಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಮಹತ್ವ ಚರ್ಚೆ ನಡೆಸಲಾಗಿದೆ.
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.
ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ತಿಳಿಸಿದರು.
ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು.
ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಯಡಿ ರೂ.900 ಕೋಟಿ ಅನುದಾನ ಬಜೆಟ್ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸುವ ಅಗತ್ಯ ಅನುದಾನ ಹಂಚಿಕೆ ಕುರಿತಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.












Click it and Unblock the Notifications