Government Employees: ಒಪಿಎಸ್ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ, ಹೇಳಿದ್ದೇನು?
ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯಾದ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘವು ಮೈಸೂರಿನಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರಗೆ ಬರತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ. ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಹೇಳಿದ್ದಾರೆ.

ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು. ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳೋಣ. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ.
ವರದಿ ಬಂದ ನಂತರ ಒಪಿಎಸ್ ಜಾರಿ
ಶಿಕ್ಷಕರಾದವರು ಮಕ್ಕಳಲ್ಲಿ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಬೇಕು. ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಅನೇಕ ರಾಜ್ಯ ಸರ್ಕಾರಿ ನೌಕರರು ಇತ್ತೀಚಿನ ದಿನಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನೇ ಮರು ಜಾರಿಗೆ ತರಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಇದಕ್ಕಾಗಿ ಬೀದಿಗಿಳಿದು ಹೋರಾಟ ಕೂಡ ನಡೆಸುತ್ತಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಯಡಿಯಲ್ಲಿ ಹೊಸ ಪಿಂಚಣಿ ಯೋಜನೆಯು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಆದರೂ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಜಾರಿ ಮಾಡುವಂತೆ ಕೇಳುತ್ತಿದ್ದಾರೆ. ಈಗ ಸಿಎಂ ಕೂಡ ಇದರ ಸುಳಿವು ನೀಡಿದ್ದಾರೆ.












Click it and Unblock the Notifications