CM ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ?: ಆರ್.ಅಶೋಕ್ ಸಿಟ್ಟಿಗೆ ಇದೇ ಕಾರಣ
ಶ್ರೀರಂಗಪಟ್ಟಣ, ನವೆಂಬರ್ 24: ಉಪ ಚುನಾವಣೆಯಲ್ಲಿನ ಕಾಂಗ್ರೆಸ್ ಗೆದ್ದಿದ್ದು, ಫಲಿತಾಂಶ ಕ್ಲೀನ್ ಚಿಟ್ ಅಲ್ಲ. ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸು ನ್ಯಾಯಾಲಯದಲ್ಲಿದೆ. ತನಿಖೆ ನಡೆಯುತ್ತಿದೆ. ಬಡವರ ಪರ ಎನ್ನುವ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಬಡವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯ ಅವರು ಎಷ್ಟು ಜಲಾಶಯ ನಿರ್ಮಿಸಿದ್ದಾರೆ? ಎಂದು ಖಾರವಾಗಿ ಪ್ರಶ್ನಿಸಿದರು.
ಭಾನುವಾರ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ಮುಡಾ ಅಕ್ರಮ ಸೈಟು ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರ ವಿರುದ್ಧದ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಮಧ್ಯೆ ನಡೆದ ರಾಜ್ಯದ ಮೂರು ಉಪಚುನಾವಣೆಯ ಫಲಿತಾಂಶವೇನು ಕ್ಲೀನ್ ಚಿಟ್ ಅಲ್ಲ ಎಂದು ಅವರು ಪ್ರತಿಪಾದಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ನಾವು ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ? ಮೇಕೆದಾಟು ಎಂದು ಪ್ರತಿಭಟನೆ ಮಾಡಿ, ಅಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮಾಡಿಲ್ಲ. ಒಂದೇ ಒಂದು ಆಸ್ಪತ್ರೆ ಕೂಡ ನಿರ್ಮಿಸಿಲ್ಲ. ಆದರೆ ಆಸ್ಪತ್ರೆಯಲ್ಲಿ ಶುಲ್ಕಗಳನ್ನು ಮಾತ್ರ ಏರಿಸಲಾಗಿದೆ. ಎಲ್ಲವೂ ಉಚಿತ ಎಂದು ಸುಳ್ಳು ಹೇಳಿ ಈಗ ಎಲ್ಲ ದರಗಳನ್ನು ಹೆಚ್ಚಳ ಮಾಡಲಾಗಿದೆ.. ಮಹಿಳೆಯರಿಗೆ 2,000 ರೂ. ನೀಡುತ್ತಿರುವುದಾಗಿ ಹೇಳಿ ಬಡ ಕುಟುಂಬಗಳ ಆರ್ಥಿಕತೆಯನ್ನು ಗುಡಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದು ಪಾಪಿಗಳ ಸರ್ಕಾರ ಎನ್ನುತ್ತೇನೆ
ರಾಜ್ಯದಲ್ಲಿ ಎಲ್ಲಿಯವರೆಗೆ ಬಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಇದು ಪಾಪಿಗಳ ಸರ್ಕಾರ ಎಂದು ಹೇಳುವೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದು ಅವರು ವಿವರಿಸಿದರು.
ಸರ್ಕಾರ ಲಕ್ಷ ಕೋಟಿ ರೂ. ಸಾಲ ಮಾಡಿದೆ
ಚುನಾವಣಾ ಫಲಿತಾಂಶವನ್ನು ಕ್ಲೀನ್ ಚಿಟ್ ಎನ್ನಲಾಗುವುದಿಲ್ಲ. ಕ್ಲೀನ್ ಚಿಟ್ ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅದನ್ನು ಬಡವರಿಗೆ ನೀಡಬೇಕಿತ್ತು. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಆರೋಪಕ್ಕೆ ಸಾಕ್ಷಿ ಇಲ್ಲದೆ ಪ್ರಕರಣ ಬಿದ್ದುಹೋಗಿದೆ. ಇದನ್ನೇ ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಜನರ ಮೇಲೆ ತೆರಿಗೆ ಹೊರೆ ಹೇರಿದ್ದಲ್ಲದೇ 1 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ತಿಳಿಸಿದರು.
ಈ ನಡುವೆ ವಕ್ಫ್ ಮಂಡಳಿಯಿಂದ ಹಿಂದೂ ದೇವಸ್ಥಾನಗಳ ಜಾಗ ಕಬಳಿಕೆಯಾಗಿದೆ. ಲಿಂಗಾಯತರ ಮಠದ ಜಾಗ, ಸ್ಮಶಾನ, ರೈತರ ಜಮೀನನ್ನು ತನ್ನದೇ ಎಂದು ವಕ್ಫ್ ಘೋಷಿಸಿಕೊಂಡಿದೆ. ಶ್ರೀರಂಗಪಟ್ಟಣದ ದೇವಸ್ಥಾನದ ಜಾಗವನ್ನು ಕೂಡ ವಕ್ಫ್ ಕಬಳಿಸಿದೆ ಎಂದು ಅವರು ಆರೋಪಿಸಿದರು.
ಇಲ್ಲಿನ ಎಲ್ಲ ಭೂಮಿ ಮುಸ್ಲಿಮರದ್ದು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ಈಗ ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಏನೂ ಉಳಿಯುವುದಿಲ್ಲ ಎಂದರು.
ಇದು ಹಣದ ಗೆಲುವು ಹೊರತು ಕಾಂಗ್ರೆಸ್ನದ್ದಲ್ಲ
ಕರ್ನಾಟಕ ಉಪಚುನಾವಣೆ 2024 ಹಣದ ಗೆಲುವೇ ಹೊರತು ಕಾಂಗ್ರೆಸ್ ಗೆಲುವಲ್ಲ. ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್ ಅನವಶ್ಯಕವಾಗಿ ಬೀಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋತಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂಬುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಒಪ್ಪುವುದಿಲ್ಲ.
ಕಾಂಗ್ರೆಸ್ಗೆ ಅಭ್ಯರ್ಥಿಯ ಗತಿ ಇಲ್ಲ ಎಂಬ ಕಾರಣಕ್ಕೆ ಬಿಜೆಪಿಯಲ್ಲಿದ್ದವರನ್ನು ಕರೆಸಿಕೊಳ್ಳಲಾಗಿದೆ. ಈ ಸೋಲಿನಿಂದ ಬಿಜೆಪಿಗೆ ಯಾವುದೇ ರೀತಿಯ ಹಿನ್ನಡೆ ಆಗುವುದಿಲ್ಲ. ಇದೇನು ಬಿಜೆಪಿಗೆ ಮಾನದಂಡವೂ ಅಲ್ಲ. ಕಾಂಗ್ರೆಸ್ ಗೆದ್ದ ಮಾತ್ರಕ್ಕೆ ಬಿಜೆಪಿಯು ಸರ್ಕಾರದ ಅಕ್ರಮ, ಭ್ರಷ್ಟಾಚಾರ ವಿರುದ್ಧ ಹೋರಾಟ ಕೈ ಬಿಡದೇ ಮುಂದುವರಿಸುತ್ತದೆ ಎಂದು ಎಚ್ಚರಿಸಿದರು.












Click it and Unblock the Notifications