ಕಟ್ಟಡ ಕಾರ್ಮಿಕರಿಗಾಗಿ ಸಂಚಾರಿ ಆರೋಗ್ಯ ಘಟಕಗಳ ಲೋಕಾರ್ಪಣೆ: ಏನೆಲ್ಲ ಸೌಲಭ್ಯ?
ಕಟ್ಟಡ ಕಾರ್ಮಿಕರಿಗಾಗಿ ಕರ್ನಾಟಕ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಂಡಿದೆ. ಕಾರ್ಮಿಕ ಇಲಾಖೆಯ ವತಿಯಿಂದಲೇ ಕಟ್ಟಡ ಕಾರ್ಮಿಕರಿಗಾಗಿ ಸಜ್ಜುಗೊಳಿಸಿರುವ 135 "ಸಂಚಾರಿ ಆರೋಗ್ಯ ಘಟಕ"ದ ಆ್ಯಂಬುಲೆನ್ಸ್ ವಾಹನಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಕಾರ್ಮಿಕರು ಇವೆಲ್ಲ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ. ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯ ಆಧಾರದಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದು, ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶದ ನಿರ್ಮಾತೃಗಳು ಎಂದು ಶ್ಲಾಘಿಸಿದ್ದಾರೆ.

ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು. ಎಲ್ಲ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ಧ, ಬಸವ, ಅಂಬೇಡ್ಕರ್ ಆಶಯದ ಸಮಸಮಾಜ ನಿರ್ಮಾಣವಾಗುತ್ತೆ. ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಕಟ್ಟಡ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಈ ವಾಹನಗಳನ್ನು ತಯಾರಿಸಲಾಗಿದ್ದು, ಪ್ರಮುಖವಾಗಿ ಈ ಸಂಚಾರ ಕ್ಲಿನಿಕ್ನಲ್ಲಿ ಇಸಿಜಿ ಪರೀಕ್ಷೆ, ಬಿಪಿ ಪರೀಕ್ಷೆ, ರಕ್ತ ಪರೀಕ್ಷೆ ಸೇರಿದಂತೆ ಹಲವು ಆರೋಗ್ಯ ಸೇವೆಯನ್ನು ನೀಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬಳಿ ಇಂದು ಸಂಚಾರಿ ಆರೋಗ್ಯ ಘಟಕ ವಾಹನಗಳ ಉದ್ಘಾಟನೆಗೂ ಮುನ್ನ ಅವುಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದೆ. ಈ ಸಂದರ್ಭದಲ್ಲಿ ಸಚಿವರಾದ ಸಂತೋಷ್ ಲಾಡ್ ಅವರು ಉಪಸ್ಥಿತರಿದ್ದರು ಎಂದು ಡಿಕೆಶಿ ವಿವರಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, "ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆರಂಭಿಸಿರುವ ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಚಾಲನೆ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸಂಚಾರಿ ಆರೋಗ್ಯ ಘಟಕಗಳಿಗೆ ಹಸಿರು ನಿಶಾನೆ ತೋರಿದ್ದಾರೆ ಎಂದರು.

ಈ ಸಂಚಾರಿ ಆರೋಗ್ಯ ಘಟಕಗಳು ರಾಜ್ಯದ ಕಟ್ಟಡ ಕಾರ್ಮಿಕರ ಪಾಲಿಗೆ ಅಕ್ಷರಶಃ ಸಂಜೀವಿನಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಈ ಸಂಚಾರಿ ಆರೋಗ್ಯ ಘಟಕಗಳು ನೀಡುವ ಸೇವೆಗಳು, ಕಾರ್ಯವ್ಯಾಪ್ತಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ ಅವರಿಗೆ ವಿಶೇಷ ಧನ್ಯವಾದಗಳು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾರ್ಮಿಕ ಇಲಾಖೆ ಹಾಗೂ ಮಂಡಳಿಯ ಹಿರಿಯ ಅಧಿಕಾರಿಗಳು, ಮಂಡಳಿಯ ಸದಸ್ಯರು, ಶ್ರಮಿಕರು ಉಪಸ್ಥಿತರಿದ್ದರು.












Click it and Unblock the Notifications