ವಿವಾದಕ್ಕೆ ಕಾರಣವಾಗಿದ್ದ ಹೊಸ ಶಾಸಕರ ತರಬೇತಿ ಶಿಬಿರ: ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು, ಜೂನ್ 26: 2023 ವಿಧಾನಸಭಾ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರುಗಳಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರನ್ನು ಸ್ಪೀಕರ್ ಯು.ಟಿ ಖಾದರ್ ಹಮ್ಮಿಕೊಂಡಿದ್ದಾರೆ.
ನೂತನವಾಗಿ ಆಯ್ಕೆಯಾದ ಸುಮಾರು 70 ಕ್ಕೂ ಹೆಚ್ಚು ಜನ ಶಾಸಕರಿಗೆ ಶಿಬಿರಕ್ಕೆ ಆಹ್ವಾನ ನೀಡಿದ್ದ ಕೆಲವು ಅತಿಥಿಗಳ ಹೆಸರುಗಳು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದವು. ಆದರೆ ಇದೀಗ ಕೆಲವೊಂದು ಮಾರ್ಪಾಡುಗಳ ಜೊತೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಬಿರವನ್ನು ಉದ್ಘಾಟನೆ ಮಾಡಲಿದ್ದಾರೆ.

ಬೆಂಗಳೂರು ನಗರದ ಹೊಲವಲಯದ ನೆಲಮಂಗಳದಲ್ಲಿ ಹಮ್ಮಿಕೊಳ್ಳಲಾಗಿರುವ ಈ ಶಿಬಿರವನ್ನು 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸ್ಪೀಕರ್ ಯು.ಟಿ ಖಾದರ್ ಅಧ್ಯಕ್ಷತೆ ವಹಿಸಿಕೊಂಡರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್ ಕೆ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.
ಇನ್ನೂ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಈ ತರಬೇತಿ ಶಿಬಿರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷ್ಣ ಬೈರೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಶಾಸಕರು ಸಂವಾದ ನಡೆಸಲಿದ್ದಾರೆ. ಮೂರು ದಿನಗಳ ಕಾಲದ ಶಿಬಿರದಲ್ಲಿ ಆರೋಗ್ಯ ಹಾಗೂ ಬೌದ್ಧಿಕ ತರಬೇತಿ ಜೊತೆಗೆ ಹಲವು ವಿಚಾರಗಳು ಚರ್ಚೆಯಾಗಲಿದೆ.
ಮೂರು ದಿನಗಳ ಕಾಲ ನಡೆಯಲಿರುವ ಈ ಶಿಬಿರಕ್ಕೆ ಧಾರ್ಮಿಕ ಹಾಗೂ ಆಧ್ಯಾತ್ಮಕ ವ್ಯಕ್ತಿಗಳನ್ನು ಪ್ರವಚನ ನೀಡಲು ಆಹ್ವಾನಿಸಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ಜಮಾತೇ ಇಸ್ಲಾಮಿ ಹಿಂದ್ನ ಮುಹಮ್ಮದ್ ಕುಂಞ, ಆರ್ಟ್ ಆಫ್ ಲಿವಿಂಗ್ನ ರವಿಶಂಖರ್ ಗುರೂಜಿ, ಶಿಕ್ಷಣ ತಜ್ಞ ಗುರುರಾಜ್ ಕರ್ಜಗಿ ಅವರನ್ನು ಆಹ್ವಾನ ಮಾಡಲಾಗಿತ್ತು.ಆದರೆ ಇದಕ್ಕೆ ಪ್ರಗತಿಪರರು ವಿರೋಧ ವ್ಯಕ್ತಪಡಿಸಿದ್ದರು. ಶಾಸಕರಿಗೆ ಆಧ್ಯಾತ್ಮಿಕ ಗುರುಗಳ ತರಬೇತಿಯ ಅಗತ್ಯತೆ ಏನಿದೆ ಎಂದು ಪ್ರಶ್ನಿಸಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೂ ಕರೆ ಮಾಡಿ ಕೆಲವು ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ನಡುವೆ ಕಾರ್ಯಕ್ರಮದ ಆಹ್ವಾನಿತರ ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳು ಕಂಡಿವೆ. ರವಿಶಂಕರ್ ಗುರೂಜಿ ಕಾರ್ಯಕ್ರಮಕ್ಕೆ ಬರುವುದು ಅನುಮಾನ ಜೊತೆಗೆ ಗುರುರಾಜ್ ಕರ್ಜಗಿ ಅವರನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ. ಬದಲಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ಸ್ವೀಕರ್ ಖಾದರ್ ಭೇಟಿ ಮಾಡಿ ಕಾರ್ಯಕ್ರಮದ ಬಗ್ಗೆ ವಿವರ ನೀಡಿದ್ದಾರೆ ಹಾಗೂ ಆಹ್ವಾನವನ್ನು ನೀಡಿದ್ದಾರೆ ಎನ್ನಲಾಗಿದೆ.












Click it and Unblock the Notifications