'ಸಿದ್ದರಾಮಯ್ಯ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ'
ಮಂಗಳೂರು, ಏಪ್ರಿಲ್ 10: ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ. ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು. ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೋದಿಜೀ ಅವರ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು ಎಂದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಅನುದಾನವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಬೆಂಗಳೂರಿನ ಮುಖ್ಯಮಂತ್ರಿಗಳೇ ಅಥವಾ ರಾಜ್ಯದ ಮುಖ್ಯಮಂತ್ರಿಗಳೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದರು. ಬಸವರಾಜ ರಾಯರೆಡ್ಡಿ ಅವರದು ದಿಟ್ಟವಾಗಿ ಮಾತನಾಡುವ ಸ್ವಭಾವ. ಅವರು ಸತ್ಯವನ್ನೇ ಹೇಳಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಬೇರೆಬೇರೆ ಹಗರಣಗಳ ಬಳಿಕ ಅವರು ಕೂಡ ಬೇಸತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು. ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ಸ್ಥಾನಕ್ಕೆ ತಲುಪಿದೆ ಎಂದರೆ ಅದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಆ ಸತ್ಯವನ್ನು ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.
ದಲಿತರಿಗೆ ಅನ್ಯಾಯ ಮಾಡುವವರು ಕಾಂಗ್ರೆಸ್ ಪಕ್ಷದವರು. ಮೊನ್ನೆ ರಾಹುಲ್ ಗಾಂಧಿ ಅವರನ್ನು ನೋಡಿದ್ದೀರಿ. ಗಾಂಧೀಜಿ, ಬಾಬಾಸಾಹೇಬ ಅಂಬೇಡ್ಕರರ ಕುರಿತ ಅವರ ಕಳಕಳಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿಜೆಪಿ, ದಲಿತರ ಪರವಾಗಿ ಯೋಜನೆಗಳನ್ನು ನೀಡುತ್ತಿದೆ. ದಿನಗಳಲ್ಲಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿಗೆ ಇದೆ ಎಂಬ ಸಂದೇಶವನ್ನು 83 ವರ್ಷದ ಮಹಿಳೆ ವತ್ಸಲಾ ಕಾಮತ್ ಅವರು ಸಾಂಕೇತಿಕವಾಗಿ ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.
ಬೂತ್ ಅಧ್ಯಕ್ಷರಾದ ವತ್ಸಲಾ ಕಾಮತ್ ಅವರು ನನಗೆ ಬಿಜೆಪಿಯ ಧ್ವಜವನ್ನು ಕೊಟ್ಟು ನಮ್ಮ ಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ, ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ರಾಜ್ಯದ ಮುಖ್ಯಮಂತ್ರಿಗಳಾಗಿ ನೀವು ಮಾಡುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂಬ ಸಂದೇಶ ಇದಾಗಿದೆ ಎಂದು ಎಚ್ಚರಿಸಿದರು.
ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷವು ಇವತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ನಾನು ಪತ್ರಿಕೆಯಲ್ಲಿ ನೋಡಿದ್ದೇನೆ. ಪ್ರವೀಣ್ ನೆಟ್ಟಾರ್ ಅವರನ್ನು ಕೊಲೆ ಮಾಡಿದ ದೇಶದ್ರೋಹಿಯನ್ನು ನಿನ್ನೆ ಕೋರ್ಟಿಗೆ ಕರೆದುಕೊಂಡು ಬರಲಾಗುತ್ತಿತ್ತು. ಒಬ್ಬ ದೇಶದ್ರೋಹಿ ಬಂದು ಇನ್ನೊಬ್ಬ ದೇಶದ್ರೋಹಿಗೆ ಮುತ್ತಿಕ್ಕಿದ್ದಾನೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಿದ್ದರೆ, ಯಡಿಯೂರಪ್ಪ ಅವರಂಥವರು ಮುಖ್ಯಮಂತ್ರಿಯಾಗಿದ್ದರೆ ಆ ದೇಶದ್ರೋಹಿಯ ಮೇಲೆ ಅಲ್ಲೇ ಗುಂಡು ಹಾರಿಸುವ ಕೆಲಸವನ್ನು ಬಿಜೆಪಿ ಸರಕಾರ ಮಾಡುತ್ತಿತ್ತು ಎಂದರು.
ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತ ಅಲ್ಲಿನ ಆಸ್ಪತ್ರೆ ವ್ಯವಸ್ಥೆ, ಶೌಚಾಲಯ ಸರಿ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದರೆ, ಅವರ ವಿರುದ್ಧ ಕೇಸ್ ಹಾಕಿ ಪೊಲೀಸರ ಮೂಲಕ ದಬ್ಬಾಳಿಕೆ ಮಾಡುವ ಕೆಲಸ ಮಾಡಿದ್ದಾರೆ. ಅವರಿಗೆ ಕೋರ್ಟಿನಲ್ಲಿ ತಡೆಯಾಜ್ಞೆ, ಜಾಮೀನು ಸಿಕ್ಕಿದರೂ ಸಹ ಇವತ್ತು ಆತ್ಮಹತ್ಯೆ ಮಾಡಿಕೊಳ್ಳುವಂಥ ಪುಂಡತನವನ್ನು ಕಾಂಗ್ರೆಸ್ ಸರಕಾರ ತೋರಿಸಿದೆ ಎಂದು ಟೀಕಿಸಿದರು.
ಇಂಥ ಹಿಂದೂ ವಿರೋಧಿ ಸರಕಾರಕ್ಕೆ ನಾವು ತಕ್ಕ ಉತ್ತರ ನೀಡಬೇಕಿದೆ ಎಂದು ಮನವಿ ಮಾಡಿದರು. ರಾಜ್ಯ ಸರಕಾರ ಮತ್ತು ಸಿದ್ದರಾಮಯ್ಯನವರು ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ 4ರಷ್ಟು ಮೀಸಲಾತಿ ನೀಡಿದ್ದಾರೆ ಎಂದರಲ್ಲದೆ, ಯಾಕೆ ಹಿಂದೂಗಳು ಬದುಕಿಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.
ಮುಸಲ್ಮಾನ ಹೆಣ್ಮಕ್ಕಳಿಗೆ ಆತ್ಮರಕ್ಷಣೆಗಾಗಿ ನೂರಾರು ಕೋಟಿ ಕೊಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು ಎಂದು ಟೀಕಿಸಿದರು. ಹಿಂದೂ ಹುಡುಗಿಯರು ಇವತ್ತು ಲವ್ ಜಿಹಾದ್ಗೆ ಬಲಿ ಆಗುತ್ತಿದ್ದಾರೆ. ಅವರ ಆತ್ಮರಕ್ಷಣೆ ತರಬೇತಿಗಾಗಿ ಹಣ ಕೊಡುವ ಬದಲು ಮುಸಲ್ಮಾನರಿಗೆ ಕೊಡುತ್ತಾರಂತೆ. ಮುಸಲ್ಮಾನ ಯುವಜನರು ಹೊರದೇಶಕ್ಕೆ ಉನ್ನತ ಶಿಕ್ಷಣಕ್ಕೆ ಹೋಗುವುದಾದರೆ 20 ಲಕ್ಷ ಕೊಡುತ್ತಿದ್ದು, ಅದನ್ನು 30 ಲಕ್ಷಕ್ಕೆ ಏರಿಸುವುದಾಗಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಂಥ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಪುನರುಚ್ಚರಿಸಿದರು.
ಈ ಪುಣ್ಯಾತ್ಮ ರಾಜ್ಯದ ಮುಖ್ಯಮಂತ್ರಿಯಾದ ಮೇಲೆ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಆಗಿದೆ. ಪೌಷ್ಟಿಕ ಆಹಾರ ಹಾಲಿಗೆ ಇದುವರೆಗೆ 9 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್, ಡೀಸೆಲ್ ದರವನ್ನು ಸಿದ್ದರಾಮಯ್ಯನವರ ಸರಕಾರ ಏಳೂವರೆ ರೂ. ಹೆಚ್ಚಿಸಿದೆ. ಈ ಜನವಿರೋಧಿ ಸರಕಾgದ ಸಚಿವರು ಮಾತೆತ್ತಿದರೆ ಕೇಂದ್ರವನ್ನು ದೂರುತ್ತಾರೆ. ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲ ವರು ಮೊನ್ನೆ ಬಜೆಟ್ ಮಂಡಿಸುವಾಗ ನಮ್ಮ ಪ್ರಧಾನಮಂತ್ರಿ ಮೋದಿಜೀ ಅವರನ್ನು ಶ್ಲಾಘಿಸಿದ್ದಾರೆ. ಜಮ್ಮು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ನೆರವಾದ ಮೋದಿಜೀ ಅವರನ್ನು ಅಭಿನಂದಿಸಿದ್ದಾರೆ ಎಂದು ವಿಜಯೇಂದ್ರ ಅವರು ಹೇಳಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಸಂಸದ ಹಾಗೂ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಎಸ್. ಅಂಗಾರ, ಮಾಜಿ ಸಂಸದ ಎಸ್. ಮುನಿಸ್ವಾಮಿ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಹೆಚ್.ಸಿ. ತಮ್ಮೇಶ್ ಗೌಡ, ಶಾಸಕರಾದ ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಡಿ. ವೇದವ್ಯಾಸ ಕಾಮತ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications