ಅ.29ರಂದು ನರೇಂದ್ರ ಮೋದಿ ಕಾರ್ಯಕ್ರಮಗಳಿಗೆ ಸಿದ್ದರಾಮಯ್ಯ ಗೈರು
ಬೆಂಗಳೂರು, ಅಕ್ಟೋಬರ್ 28: ವಿವಿಧ ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29ರಂದು ಕರ್ನಾಟಕಕ್ಕೆಆಗಮಿಸಲಿದ್ದು. ಮೋದಿ ಅವರ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳುತ್ತಿಲ್ಲ.
ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಬೀದರ್ ನಲ್ಲಿ ಭಾನುವಾರ (ಅ.29) ನರೇಂದ್ರ ಮೋದಿ ಅವರು ಬೀದರ್-ಕಲಬುರಗಿ ರೈಲ್ವೆ ಮಾರ್ಗದಲ್ಲಿ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ತಡವಾಗಿ ಆಹ್ವಾನ ಕೊಟ್ಟಿದ್ದಾರೆ.
ತಮಗೆ ಪೂರ್ವ ನಿಗಧಿತ ಕಾರ್ಯಕ್ರಮ ಇರುವುದರಿಂದ ಪ್ರಧಾನಿಯವರು ಭಾಗವಹಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಪರವಾಗಿ ಸಚಿವ ದೇಶಪಾಂಡೆ ಅವರು ಹೋಗುತ್ತಾರೆ" ಎಂದು ಅವರು ಹೇಳಿದರು.
In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ
ಕಾರ್ಯಕ್ರಮ ಕುರಿತು ನಮ್ಮೊಂದಿಗೆ ಮೊದಲೇ ಚರ್ಚೆ ಮಾಡಬೇಕಿತ್ತು. ಏಕೆಂದರೆ ರಾಜ್ಯದಲ್ಲಿ ಕೈಗೆತ್ತಿಕೊಳ್ಳುವ ರೈಲ್ವೆ ಯೋಜನೆಗಳ ವೆಚ್ಚದಲ್ಲಿ ನಮ್ಮ ಸರ್ಕಾರ ಅರ್ಧ ಭರಿಸುತ್ತದೆ. ಜೊತೆಗೆ ಜಾಗವನ್ನು ಉಚಿತವಾಗಿ ನೀಡುತ್ತದೆ.
ಹೀಗಿರುವಾಗ ಕಾರ್ಯಕ್ರಮದ ರೂಪುರೇಷೆ ಕುರಿತು ಪೂರ್ವಭಾವಿಯಾಗಿ ಚರ್ಚೆ ಮಾಡದೇ ಕೊನೆ ಗಳಿಗೆಯಲ್ಲಿ ಆಹ್ವಾನ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಕಾರ್ಯಕ್ರಮಗಳು
ಅಕ್ಟೋಬರ್ 29ರಂದು ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳ, ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೀದರ್ನಲ್ಲಿ ಬೀದರ್-ಕಲಬುರಗಿ ರೈಲ್ವೆ ಮಾರ್ಗದಲ್ಲಿ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಎಚ್ಡಿಕೆ ಭೇಟಿ ಬಗ್ಗೆ ಗೊತ್ತಿಲ್ಲ ಎಂದ ಸಿಎಂ
ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರನ್ನು ಶುಕ್ರವಾರ ರಾತ್ರಿ ಭೇಟಿಯಾದ ಬಗ್ಗೆ ಗೊತ್ತಿಲ್ಲ. ವಿದ್ಯುತ್ ಖರೀದಿ ಸಂಬಂಧ ಇಂಧನ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ರಚನೆಯಾಗಿರುವ ಸದನ ಸಮಿತಿಯಲ್ಲಿ ಕುಮಾರಸ್ವಾಮಿ ಅವರು ಸದಸ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ಭೇಟಿ ಮಾಡಿ ಚರ್ಚಿಸಿರಬಹುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಬ್ರಾಹ್ಮಣ ಪ್ರಾಧಿಕಾರ ರಚನೆ ಇಲ್ಲ
ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಅಂತಹ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ ಎಂದು ಮುಖ್ಯಮಂತ್ರಿಯವರು ಇದೇ ವೇಳೆ ಸ್ಪಷ್ಟಪಡಿಸಿದರು. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ರಾಜ್ಯ ಸರ್ಕಾರ ಮುಂದಾಗಿ ಎಂಬ ಸುದ್ದಿ ಹರಿದಾಡಿತ್ತು. ಇದಕೆಲ್ಲ ಇದೀಗ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

ಕನ್ನಡಕ್ಕೆ ಪ್ರಥಮ ಸ್ಥಾನ
ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಥಮ ಸ್ಥಾನ ಇರಬೇಕು. ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣ ಸೇರಿದಂತೆ ಎಲ್ಲಿಯೇ ಆದರೂ ಕನ್ನಡ ಇರಲೇಬೇಕು ಎಂದು ಮುಖ್ಯಮಂತ್ರಿಯವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕಾನೂನು ಪರ ಇದ್ದೇನೆ
ನಾನು ಸಹ ಜಾರ್ಜ್ ರಕ್ಷಣೆಗೆ ನಿಂತಿಲ್ಲ. ಆದರೆ, ಕಾನೂನು ಪರ ಇದ್ದೇನೆ. ಸಿಬಿಐಗೆ ತನಿಖೆಗೆ ತೊಂದರೆಯಾಗುತ್ತದೆ. ಹೀಗಾಗಿ ಜಾರ್ಜ್ ಅವರು ರಾಜೀನಾಮೆ ನೀಡಬೇಕು ಎಂಬುದು ತಪ್ಪು. ಸಿಬಿಐ ಕೇಂದ್ರ ಸರ್ಕಾರದ ಅಧಿನದಲ್ಲಿರುವ ಸಂಸ್ಥೆ. ಹೀಗಿರುವಾಗ ತೊಂದರೆಯಾಗಲು ಹೇಗೆ ಸಾಧ್ಯ? ಎಂದು ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.












Click it and Unblock the Notifications