ದಕ್ಷಿಣ ಭಾರತ VS ದೆಹಲಿ: 1 ಲಕ್ಷ 87 ಸಾವಿರ ಕೋಟಿ ರೂಪಾಯಿ ಕರ್ನಾಟಕಕ್ಕೆ ಮೋಸ ಮಾಡಿತಾ ಕೇಂದ್ರ ಸರ್ಕಾರ?
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ನಡುವೆ ತಿಕ್ಕಾಟ ಈಗ ಬಲು ಜೋರಾಗಿದೆ. ಅದ್ರಲ್ಲೂ ಕನ್ನಡಿಗರ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿದ್ದ ಹಣ ಬರ್ತಿಲ್ಲ ಎಂಬ ಆರೋಪದ ನಡುವೆ ಇದೀಗ, ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧವೇ ತೊಡೆತಟ್ಟಿದ್ದಾರೆ. ಹಾಗೇ ಕನ್ನಡಿಗರಿಗೆ ಬರಬೇಕಿದ್ದ 1 ಲಕ್ಷ 87 ಸಾವಿರ ಕೋಟಿ ರೂಪಾಯಿ ಹಣವನ್ನು ನೀಡದೆ ಮೋಸ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.
ಹೌದು, ಕರ್ನಾಟಕ ರಾಜ್ಯದ ಪಾಲಿನ ಹಣವನ್ನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರಿಯಾಗಿ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಅದರ ಮಾನದಂಡದಂತೆ ಕೂಡ ಕರ್ನಾಟಕಕ್ಕೆ ಹಣವನ್ನು ನೀಡುತ್ತಿಲ್ಲ. ಈ ಹಿನ್ನೆಲೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಹೀಗಾಗಿ ದೆಹಲಿಯ ಜಂತರ್ ಮಂತರ್ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿ.ಕೆ. ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ನಾವು ಈಗ ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇನ್ನು ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಹೋರಾಟ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದರು. ಬರಗಾಲದ ಪರಿಹಾರ ಹಣವನ್ನೂ ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ಮೋದಿ ವಿರುದ್ಧ ಸಿಎಂ ಗರಂ!
ಇನ್ನು ಇದೇ ಜಂಟಿ ಸುದ್ದಿಗೋಷ್ಠಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದರು. ಪ್ರಧಾನಿ ಮೋದಿ ಸುಳ್ಳುಗಳಿಗೆ, ನೀವು ಯಾರು ದಾರಿ ತಪ್ಪಲ್ಲ ಎಂಬುದಾಗಿ ನಂಬಿಕೆ ಇಟ್ಟಿದ್ದೇನೆ. 4,530 ಕೋಟಿ ರೂಪಾಯಿ ಹಣ ಇದೀಗ ಶಕ್ತಿ ಯೋಜನೆಗೆ ಕೊಟ್ಟಿದ್ದೇವೆ ಎಂದರು. 'ತಾಕತ್ ಇದ್ರೆ, ಧಮ್ ಇದ್ರೆ' ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಇವೆಲ್ಲಾ ಮಾಡಲು ದಮ್ಮು, ತಾಕತ್ ಬೇಡ. ರಾಜಕೀಯ ಇಚ್ಛಾ ಶಕ್ತಿ ಇರಬೇಕು. ನಮ್ಮದೇನಿದ್ರೂ ಬಡವರ ಬಗ್ಗೆ ಬದ್ಧತೆ ಅಷ್ಟೇ ಅಂದ್ರು ಸಿಎಂ ಸಿದ್ದರಾಮಯ್ಯ. ಹಾಗೇ ದಮ್ & ತಾಕತ್ ಏನಿದ್ದರೂ ಬಿಜೆಪಿಯವರದ್ದು ಎಂದು ಹೇಳಿ ಕಮಲ ಪಾಳಯಕ್ಕೆ ಈ ವೇಳೆ ತಿರುಗೇಟು ನೀಡಿದರು ಸಿಎಂ ಸಿದ್ದರಾಮಯ್ಯ.
4 ಲಕ್ಷ 30 ಸಾವಿರ ಕೋಟಿ ತೆರಿಗೆ ಸಂಗ್ರಹ!
14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42 ರಷ್ಟು ಹಣ ನೀಡಬೇಕಿದೆ. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಅವರು, ಪ್ರಧಾನಿ ಆದ ಬಳಿಕ ಈ ಆಯೋಗ ರಚನೆ ಆಗಿತ್ತು ಎಂದೂ ಇದೇ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕದಿಂದ 4 ಲಕ್ಷ 30 ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದೆ. ಈ ಮೂಲಕ ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ 12-13ರಷ್ಟು ವಾಪಸ್ ಬರುತ್ತಿದೆ. ಆದರೆ, ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಅಂತಾ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ರು.

ಒಟ್ನಲ್ಲಿ ಈ ಎಲ್ಲಾ ಕಾರಣಗಳಿಂದ ಈಗ ಫೆಬ್ರವರಿ 7ಕ್ಕೆ ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ನಡೆಸಲು ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ. ಹಾಗೆಯೇ ಇದೆಲ್ಲಾ ಎಲ್ಲಿಗೆ ಬಂದು ನಿಲ್ಲುತ್ತೆ? ಕೇಂದ್ರ ಸರ್ಕಾರ & ಕರ್ನಾಟಕ ನಡುವಿನ ತಿಕ್ಕಾಟಕ್ಕೆ ಯಾವಾಗ ಬ್ರೇಕ್ ಬೀಳುತ್ತೆ ಅಂತಾ ಕಾದು ನೋಡಬೇಕಿದೆ.












Click it and Unblock the Notifications