Nandini: ಕೆಎಂಎಫ್ ಅಧಿಕಾರಿಗಳ ಜೊತೆ ಸಿಎಂ ಇಂದು ನಿರ್ಣಾಯಕ ಸಭೆ: ಹಾಲಿನ ದರ ಭಾರೀ ಏರಿಕೆ
ಬೆಂಗಳೂರು, ಜುಲೈ 21: ಹಾಲಿನ ದರ ಹೆಚ್ಚಳ, ಹಾಲು ಉತ್ಪಾದಕ ರೈತರ ಸಮಸ್ಯೆಗಳೂ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ (Karnataka Milk Federation) ಹಾಗೂ ಹಾಲು ಒಕ್ಕೂಟಗಳ ಪದಾಧಿಕಾರಿಗಳೊಂದಿಗೆ ಇಂದು (ಶುಕ್ರವಾರ) ಸಂಜೆ 6 ಗಂಟೆಗೆ ಸಭೆ ನಡೆಸಲಿದ್ದಾರೆ.
ಹಾಲಿನ ದರವನ್ನ ಹೆಚ್ಚಳ ಮಾಡುವ ಕುರಿತು ಜುಲೈ 14 ರಂದು ಕೆಎಂಎಫ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ನಿಗದಿಯಾಗಿತ್ತು ಆದರೆ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯವಿದ್ದ ಕಾರಣ ಸಭೆ ಮುಂದೂಡಲಾಗಿದ್ದು, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆ ಸಭೆ ನಡೆಯಲಿದೆ.

ಶುಕ್ರವಾರ ಸಂಜೆ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಇನ್ನೂ ಸಭೆಯಲ್ಲಿ ಹಾಲಿನ ದರ ಹೆಚ್ಚಳ, ಹೊರ ರಾಜ್ಯಗಳಲ್ಲಿ ನಂದಿನಿ ಹಾಲಿನ ಬೇಡಿಕೆ ಮತ್ತು ಹಾಲು ಉತ್ಪಾದಕ ರೈತರ ಸಮಸ್ಯೆಗಳೂ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಇನ್ನೂ ಸಭೆಯ ನಂತರ ಹಾಲಿನ ದರ ಪ್ರತಿ ಲೀಟರ್ಗೆ 5 ರೂ. ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಕೆಎಂಎಫ್ ಮೂಲಗಳು ಮಾಹಿತಿ ನೀಡಿವೆ.
ಇನ್ನೂ ದಿನದಿಂದ ದಿನಕ್ಕೆ ಹೈನೋದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಪಶು ಆಹಾರ, ಮೇವು, ವಿದ್ಯುತ್, ಸಾಗಣಿಕೆ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಖಾಸಗಿ ಸಂಸ್ಥೆಗಳು ರೈತರಿಗೆ ಹೆಚ್ಚಿನ ದರ ಕೊಟ್ಟು ಹಾಲು ಖರೀದಿಸುತ್ತಿವೆ. ಹಾಗಾಗಿ ರೈತರು ಖಾಸಗಿ ಸಂಸ್ಥೆಗಳಿಗೆ ಹಾಲು ಹಾಕುತ್ತಿದ್ದಾರೆ. ಇದರಿಂದ ರಾಜ್ಯದ ಹಾಲು ಒಕ್ಕೂಟಗಳಿಗೆ ಬೇಡಿಕೆಗೆ ತಕ್ಕಂತೆ ಹಾಲು ಸಂಗ್ರಹಣೆ ಆಗುತ್ತಿಲ್ಲ.

ಹಾಲಿನ ದರ ಪ್ರತಿ ಲೀಟರ್ 5 ರ ಹೆಚ್ಚು ಇರ್ಬೇಕು ಎಂಬುದು ಒಕ್ಕೂಟಗಳ ಬೇಡಿಕೆಯಾಗಿದೆ ಹೈನು ರಾಸುಗಳ ನಿರ್ವಹಣಾ ವೆಚ್ಚ ಪಶು ಆಹಾರಗಳ ಬೆಲೆ ಏರಿಕೆಯಿಂದಾಗಿ ಹಾಲು ಉತ್ಪಾದಕರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ 5 ರೂ ಹೆಚ್ಚಿಸಬೇಕು ಇಲ್ಲದಿದ್ದರೆ ಹಾಲು ಉತ್ಪಾದಕರು ಹಾಗೂ ಹೈನು ಉದ್ಯಮದ ಅಭಿವೃದ್ಧಿಗೆ ತೊಂದರೆ ಆಗಲಿದೆ ಎಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್ ಮೇಲೆ ಒತ್ತಡವಿದ್ದು, ಈ ಹಿನ್ನೆಲೆ ಸರ್ಕಾರ ಇಂದಿನ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಿದೆ ಎನ್ನಲಾಗಿದೆ.












Click it and Unblock the Notifications