ಸಿದ್ದು, ಪರಂ ಭೇಟಿ : ನಿಗಮ-ಮಂಡಳಿ ನಿರ್ದೇಶಕರ ಪಟ್ಟಿ ಫೈನಲ್?
ಬೆಂಗಳೂರು, ಜೂ. 17 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮಂಗಳವಾರ ರಾತ್ರಿ ಮೂರು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ದೆಹಲಿಯಿಂದ ಮರಳಿದ ಬಳಿಕ ಉಭಯ ನಾಯಕರು ಮೊದಲ ಬಾರಿಗೆ ಭೇಟಿಯಾಗಿದ್ದಾರೆ.
ಮಂಗಳವಾರ ರಾತ್ರಿ ಖಾಸಗಿ ಹೋಟೆಲ್ನಲ್ಲಿ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರು ಸಭೆ ನಡೆಸಿದ್ದು, 500ಕ್ಕೂ ಹೆಚ್ಚು ನಿಗಮ ಮಂಡಳಿ ನಿರ್ದೇಶಕರ ನೇಮಕದ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ಮೂಲದ ಮಾಹಿತಿಗಳ ಪ್ರಕಾರ ಉಭಯ ನಾಯಕರು ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. [ಸಚಿವ ಸಂಪುಟ ವಿಸ್ತರಣೆ ಭಾಗ್ಯ ಸದ್ಯಕ್ಕಿಲ್ಲ]

ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕವಾಗಿ ಸುಮಾರು 6 ತಿಂಗಳು ಕಳೆದಿವೆ. ಆದರೆ, ನಿರ್ದೇಶಕರ ನೇಮಕಾತಿ ನಡೆದಿಲ್ಲ. ಕಳೆದವಾರ ದೆಹಲಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರು ಬೇಗ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದರು. ಆದ್ದರಿಂದ ಪರಮೇಶ್ವರ ಜೊತೆ ಸಭೆ ನಡೆಸಿದ್ದಾರೆ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ]
ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ : ಉಭಯ ನಾಯಕರು ಭೇಟಿಯ ವೇಳೆ ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 20ರ ನಂತರ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.
ಸಮಾವೇಶದ ಕುರಿತು ಮಾತುಕತೆ : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ಕಾಂಗ್ರೆಸ್ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಜೂನ್ ಅಂತ್ಯಕ್ಕೆ ಈ ಸಮಾವೇಶ ನಡೆಯಲಿದ್ದು, ಇದರ ಬಗ್ಗೆಯೂ ಸಿದ್ದರಾಮಯ್ಯ ಮತ್ತು ಪರಮೇಶ್ವರ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications