ನವೆಂಬರ್ 15 ರೊಳಗೆ ಬರ ಪರಿಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಸಿಎಂ ಆದೇಶ
ಬೆಂಗಳೂರು, ನವೆಂಬರ್ 4: ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸುತ್ತಿರುವ ಬಗ್ಗೆ ವಿಪಕ್ಷ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ ಸರ್ಕಾರವನ್ನು ಟೀಕಿಸಿದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರದಂದು ಎಲ್ಲಾ ಸಚಿವರು ತಮ್ಮ ತಮ್ಮ ಜಿಲ್ಲಾ ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15ರ ಒಳಗಾಗಿ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದಾರೆ.
ಕರ್ನಾಟಕ ಸರ್ಕಾರವು 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಶನಿವಾರ ಹೊರಡಿಸಿರುವ ಆದೇಶದಲ್ಲಿ ಮುಂದಿನ ಎರಡು ವಾರಗಳ ಕಾಲ ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳನ್ನು ಪರಿಶೀಲಿಸಿ ನವೆಂಬರ್ 15 ರ ಮೊದಲು ವರದಿ ಸಲ್ಲಿಸುವಂತೆ ಸಿಎಂ ಎಲ್ಲಾ ಸಚಿವರಿಗೆ ಸೂಚಿಸಿದ್ದಾರೆ.

ನಿವಾಸಿಗಳು ಮತ್ತು ಜಾನುವಾರುಗಳಿಗೆ ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳು, ನೀರಾವರಿಗೆ ನೀರು, ಉದ್ಯೋಗದ ಸ್ಥಿತಿ, ಬೆಳೆ ನಷ್ಟ ಮತ್ತು ಇತರ ಬರ ಪರಿಹಾರ ಕಾಮಗಾರಿಗಳನ್ನು ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುವಂತೆ ಆದೇಶದಲ್ಲಿ ನಿರ್ದೇಶಿಸಲಾಗಿದೆ.
ಈ ಹಿಂದೆ ಬರ ಪರಿಹಾರ ಕಾಮಗಾರಿ ಆರಂಭಿಸುವಂತೆ ಸಚಿವ ಸಂಪುಟ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಬರ ಪರಿಸ್ಥಿತಿಯ ವಾಸ್ತವತೆಯನ್ನು ಅರಿಯಲು ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಯಡಿಯೂರಪ್ಪ ಗುರುವಾರ ಆರೋಪಿಸಿದ್ದರು.
ಕರ್ನಾಟಕ ಎಲ್ಲ ಜಿಲ್ಲೆಗಳಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಿದ್ದು, ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 17,901 ಕೋಟಿ ರೂ. ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಸರ್ಕಾರ, ರಾಜ್ಯಕ್ಕೆ ಅನುದಾನ ನೀಡುವಂತೆ ರಾಜ್ಯ ಬಿಜೆಪಿ ನಾಯಕರನ್ನು ಒತ್ತಾಯಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ 600 ಕೋಟಿ ರೂ.ಗಳನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನವೆಂಬರ್ 9 ರಂದು ನಡೆಯಲಿರುವ ಮುಂದಿನ ಸಭೆಯಲ್ಲಿ ಕರ್ನಾಟಕ ಸಚಿವ ಸಂಪುಟವು ಪರಿಹಾರವನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.












Click it and Unblock the Notifications