CM Siddaramaiah: ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸಲ್ಲ ಎಂದ ಸಿಎಂ ಸಿದ್ದರಾಮಯ್ಯ
ತಮ್ಮ ಸರ್ಕಾರ ಭ್ರಷ್ಟಾಚಾರದ ವಿಚಾರದಲ್ಲಿ ಮೂಕಪ್ರೇಕ್ಷಕರಾಗುವುದಿಲ್ಲ ಮತ್ತು ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ.40 ಕಮಿಷನ್ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರ ಪ್ರಕರಣಗಳು ಕಂಡು ಬಂದರೆ ಸರಕಾರ ಮೂಕಪ್ರೇಕ್ಷಕ ಆಗಿರದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕರ್ತವ್ಯಕ್ಕೆ ಹಾಕಲು ಚಾಲಕರಿಂದ ಲಂಚ ಕೇಳುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಜಾತಿಗಣತಿ ಬಗ್ಗೆ ಹೇಳಿದ್ದೇನು?
ಜಾತಿ ಗಣತಿ ಅವೈಜ್ಞಾನಿಕವಾಗಿದೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಆಯೋಗವು ತನ್ನ ವರದಿಯನ್ನು ಸಲ್ಲಿಸಿಲ್ಲ, ಆದರೆ ಕೆಲವರು ಈಗಾಗಲೇ ವರದಿ ವೈಜ್ಞಾನಿಕವಾಗಿಲ್ಲ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ವರದಿಯಲ್ಲಿನ ಅಂಶ ತಿಳಿಯದೆ ಊಹಾಪೋಹದ ಆಧಾರದಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ವರದಿ ಸಲ್ಲಿಕೆಯಾಗಲಿ ಎಂದರು.
ನಕಲಿ ವಿಡಿಯೋ ಶೇರ್ ಮಾಡಿದ್ದಕ್ಕೆ ಕಿಡಿ
ಇನ್ನು ರಾಜ್ಯ ಬಿಜೆಪಿ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಸಿದ್ದರಾಮಯ್ಯ ಅವರು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಹೇಳಿಕೆ ನೀಡುವ ವಿಡಿಯೋ ಹಂಚಿಕೊಂಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಂಪೂರ್ಣ ವಿಡಿಯೋ ಹಾಕದೆ ಹೇಳಿಕೆ ತಿರುಚಲಾಗಿದೆ ಎಂದು ಬಿಜೆಪಿ ವಿರುದ್ಧ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ಗೌರವಾನ್ವಿತ ಮಾಜಿ ಶಾಸಕರಾದ ಸಿಟಿ ರವಿ ಅವರೇ, ನೀವು ಮತ್ತು ನಿಮ್ಮ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪರದಾಡಬೇಕಾದ ದುಸ್ಥಿತಿಯಲ್ಲಿ ನಿಮ್ಮ ಪಕ್ಷ ಇದೆ. ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ. ಅದಕ್ಕಾಗಿ ಈ ವಿಡಿಯೋ ಪೂರ್ತಿ ನೋಡಿ ಎಂದು ವಿಡಿಯೋ ಹಂಚಿಕೊಂಡಿದ್ದಾರೆ.
ನಾವು ನುಡಿದಂತೆ ನಡೆಯುವವರು, ಹಿಂದೆ 2013 - 18 ರ ಐದು ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರಸರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90 ಭರವಸೆಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸದೆ ಜನ ದ್ರೋಹ ಎಸಗಿತ್ತು.
ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರು 2009ರಲ್ಲಿ ಸಾಲ ಮನ್ನಾ ಮಾಡುವಂತೆ ಸದನದಲ್ಲಿ ಒತ್ತಾಯಿಸಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಏನು ಉತ್ತರ ಕೊಟ್ಟಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ. ರೈತರ ಸಾಲ ಮನ್ನಾ ಮಾಡಲು ನಾವೇನು ನೋಟು ಪ್ರಿಟಿಂಗ್ ಮೆಷಿನ್ ಇಟ್ಟಿದ್ದೇವೆಯೇ? ಎಂದು ಅವರು ಹೇಳಿಲ್ಲವೇ? ಈಗ ಮೊನ್ನೆ ವಿಧಾನಸಭೆಯಲ್ಲಿ ನಾನು ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ನಿಮಗೆ ಬೇಕಾದಷ್ಟೆ ಕಟ್ ಮಾಡಿ ಹಾಕಿ ವಿಕೃತ ಸಂತೋಷ ಪಡುತ್ತಿದ್ದೀರಿ ಎಂದು ಕಿಡಿ ಕಾರಿದ್ದಾರೆ.












Click it and Unblock the Notifications