ಮುಡಾ ನಿವೇಶನ ಹಂಚಿಕೆ ಹಗರಣ ಆರೋಪ: ಈ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ 03: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆಯಾಗಿದ್ದ ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿಟ್ಟು, ತನಿಖೆ ನಡೆಸಲಾಗುತ್ತಿದೆ. ಈ ನಿವೇಶನಗಳನ್ನು ಹಂಚಿಕೆ ಮಾಡಿದ್ದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಆಗ ನಿವೇಶನ ಹಂಚಿಕೆ ಮಾಡಿದ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಹಿರಿಯ ಐಎಎಸ್ ಅಧಿಕಾರಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಮುಡಾ ಅವ್ಯವಹಾರವನ್ನು ಖಂಡಿಸಿ ಬುಧವಾರ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆ ಕುರಿತು ಮಾತನಾಡಿದ ಅವರು, ತನಿಖೆ ಮುಗಿದು ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ಹಂಚಿಕೆಯಾದ ನಿವೇಶನಗಳನ್ನು ಅಮಾನತ್ತಿನಲ್ಲಿ ಇಟ್ಟಿರುವುದರಿಂದ ಸರ್ಕಾರಕ್ಕೆ ಸದ್ಯ ಯಾವ ನಷ್ಟವೂ ಆಗಿಲ್ಲ. ಹಿಂದೆ ನಿವೇಶನ ಹಂಚಿದವರು ಬಿಜೆಪಿಯವರೇ ಆಗಿರುವುದರಿಂದ ಈಗವರು ನನ್ನ ರಾಜೀನಾಮೆ ಕೇಳುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದರು.

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಆರೋಪಿಸಿ, ಸಿಬಿಐ ಗೆ ಹಸ್ತಾಂತರಿಸಲು ಬಿಜೆಪಿ ಪಕ್ಷ ಒತ್ತಾಯಿಸುತ್ತಿದೆ. ಹಿಂದೆ ಅವರೇ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಿದ್ದರು? ಒಂದನ್ನೂ ಕೊಟ್ಟಿಲ್ಲ. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ. ಈಗ ಅವರೇ ಅದನ್ನು ಹಗರಣ ಎನ್ನುತ್ತಿದ್ದಾರೆ.
ಈ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ? ಅವರ ಕಾಲದಲ್ಲಿ ಅಕ್ರಮ - ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್ಐಟಿ ಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಡೆತ್ ನೋಟ್ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ. ಈ ಹಗರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಪತ್ತೆ ಹಚ್ಚುವ ಕಾರಣಕ್ಕಾಗಿಯೇ ಎಸ್ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ.












Click it and Unblock the Notifications