ಒಂದು ರಾಷ್ಟ್ರ, ಒಂದು ಚುನಾವಣೆ, ಕರ್ನಾಟಕ ಅಸೆಂಬ್ಲಿ ವಿಸರ್ಜಿಸುತ್ತಾರಾ: ಸಿದ್ದರಾಮಯ್ಯ
ಇನ್ನೇನು ಲೋಕಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು, 'ಒಂದು ದೇಶ, ಒಂದು ಚುನಾವಣೆ' ವ್ಯವಸ್ಥೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆಯೂ ಆರಂಭವಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಮಾತನಾಡಿದ್ದು, 'ಒಂದು ದೇಶ, ಒಂದು ಚುನಾವಣೆ' ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಷ್ಟಕ್ಕೂ ರಾಜ್ಯಗಳ ವಿಧಾನಸಭೆಗಳು ಹಾಗೂ ಲೋಕಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ 'ಒಂದು ದೇಶ ಒಂದು ಚುನಾವಣೆ'ಗೆ ಕಾಂಗ್ರೆಸ್ ನಾಯಕರು & ವಿರೋಧ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ಹೊತ್ತಲ್ಲಿ ಪಿಎಂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 'ಒಂದು ದೇಶ, ಒಂದು ಚುನಾವಣೆ' ವ್ಯವಸ್ಥೆ ಜಾರಿಗೆ ಸಿದ್ಧತೆ ನಡೆಸುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಒಂದು ರಾಷ್ಟ್ರ , ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಕರ್ನಾಟಕ ಅಸೆಂಬ್ಲಿ ವಿಸರ್ಜಿಸುತ್ತಾರಾ? ಎಂಬ ಸವಾಲು ಎಸೆದಿದ್ದಾರೆ.

ಕರ್ನಾಟಕ ವಿಧಾನಸಭೆ ವಿಸರ್ಜನೆ ಆಗುತ್ತಾ?
ಅಷ್ಟಕ್ಕೂ ಮೈಸೂರಲ್ಲಿ ಇರುವ ಸಿಎಂ ಸಿದ್ದರಾಮಯ್ಯ ಅವರು, ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವಿದೆಯಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕೆಲ ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆ ವಿಸರ್ಜಿಸಲು ಸಾಧ್ಯವಿದೆಯೇ? ಇಲ್ಲ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಆಡಳಿತ ಹೇರಲು ಸಾಧ್ಯವಾ? ಎಂದು ಕೇಂದ್ರ ಸರ್ಕಾರವನ್ನು ಸಿಎಂ ಇಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು...
ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಹಾಗೂ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು. ಈ ಮೂಲಕ ಬಿಜೆಪಿ ನಾಯಕರಿಗೆ ಮತ್ತೆ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಸಿಎಂ ತಿರುಗೇಟು ನೀಡಿದ್ದಾರೆ.
ಬಿಜೆಪಿ ಸೇರಲು ಹೋರಟಿದ್ದರಾ ಸಿದ್ದರಾಮಯ್ಯ?
ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ನಾಯಕರು ನಿನ್ನೆ ಮಾಡಿದ್ದ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಏನು?
ನಿನ್ನೆ ಸಿದ್ದರಾಮಯ್ಯ ವಿರುದ್ಧ & ಕಾಂಗ್ರೆಸ್ ನಾಯಕರ ವಿರುದ್ಧ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದರು. ನಮ್ಮ ನೈತಿಕತೆ ಬಗ್ಗೆ ಮಾತನಾಡುತ್ತೀರಿ. ನಮ್ಮ ಸಿದ್ಧಾಂತದ ಬಗ್ಗೆ ಪ್ರಶ್ನೆ ಮಾಡುತ್ತೀರಿ. ಖರ್ಗೆ ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸತ್ತಿಗೆ ಹೋಗದಿದ್ರೆ ನೀವು ಬಿಜೆಪಿ ಸೇರುತ್ತಿರಲಿಲ್ಲವೆ? ವಿಪಕ್ಷ ನಾಯಕನ ಸ್ಥಾನ ನೀಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಸೇರಲು ನೀವು ಮುಂದಾಗಿದ್ದು ಎಲ್ಲರಿಗೂ ಗೊತ್ತು. ಖರ್ಗೆ ಗೆಲುವಿನಲ್ಲಿ ಜೆಡಿಎಸ್ ಪಾತ್ರವೂ ಇತ್ತು. ಹೀಗಾಗಿ ನಿಮಗೆ ವಿಪಕ್ಷ ನಾಯಕನ ಸ್ಥಾನ ಸಿಕ್ಕಿತು ಎಂದು ಹಾಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು ಮಾಜಿ ಸಿಎಂ ಎಚ್ಡಿಕೆ.
ಮಾಜಿ ಸಿಎಂ ಎಚ್ಡಿಕೆ ಜೊತೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಕೂಡ ವಾಗ್ದಾಳಿ ನಡೆಸಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ, ಕಾಂಗ್ರೆಸ್ನಲ್ಲಿ ವಿಪಕ್ಷ ಸ್ಥಾನ ಸಿಕ್ಕಿಲ್ಲ ಅಂತ ಮುನಿಸಿಕೊಂಡ ಸಿದ್ದರಾಮಯ್ಯ ಬಿಜೆಪಿ ಸೇರಿ ಹಣಕಾಸು ಸಚಿವರಾಗಲು ಹೊರಟಿದ್ದರು ಎಂದು ಆರೋಪಿಸಿದ್ದರು. ಈ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೇ ಒಂದು ದೇಶ, ಒಂದು ಚುನಾವಣೆಯ ಬಗ್ಗೆ ಕೂಡ ಮಾತನಾಡಿದ್ದಾರೆ.












Click it and Unblock the Notifications