ಕೈದಿಗಳಿಗೆ ರಾಜಾತಿಥ್ಯ: ಅಧಿಕಾರಿಗಳು ರಜೆ ಮೇಲೆ ತೆರಳಿದ್ದರು ಎಂದ ಸಿಎಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ಸಿಗುತ್ತಿರುವ ವಿಡಿಯೋಗಳು ಸಂಚಲನವನ್ನೇ ಸೃಷ್ಟಿಸಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು ಎಂದು ಕಾರಣ ನೀಡಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ್ದಾರೆ. ನಾಳೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಆರ್ಎಸ್ಎಸ್ ಬಗ್ಗೆ ಮಾತನಾಡಿ, ಆರ್ಎಸ್ಎಸ್ ಅನ್ನು ಸೀಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಿಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಅಷ್ಟೇ. ಆರ್.ಎಸ್.ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬಿನ ಬೆಲೆ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಜಿ.ಪರಮೇಶ್ವರ್ ಪ್ರತಿಕ್ರಿಯೆ ಏನು?
ಐಎಸ್ಐಎಸ್ ಭಯೋತ್ಪಾದಕ ಮತ್ತು ಸರಣಿ ಅತ್ಯಾಚಾರಿ ಜೈಲಿನಲ್ಲಿ ಸ್ಮಾರ್ಟ್ಫೋನ್ ಬಳಸುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಹಿಂದೆಯೂ ಸಹ ಇಂತಹ ಘಟನೆಗಳು ನಡೆದಾಗ, ನಾವು ಅಧಿಕಾರಿಗಳನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದೇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿಯೂ ಸಹ, ತಪ್ಪಿತಸ್ಥರೆಂದು ಕಂಡುಬಂದವರನ್ನು ಅಮಾನತುಗೊಳಿಸಿ ಕ್ರಮ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.
ನಾವು ಬಿ.ದಯಾನಂದ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಿದ್ದೇವೆ. ಅವರು ನಿನ್ನೆ ರಜೆಯಲ್ಲಿದ್ದರು. ಆದರೆ ನಾನು ಅವರೊಂದಿಗೆ ಮಾತನಾಡಿದ್ದೇನೆ. ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಾನು ಅವರನ್ನು ಕೇಳಿದ್ದೇನೆ. ಇಂತಹ ವಿಷಯಗಳನ್ನು ಸಹಿಸಲು ಸಾಧ್ಯವಿಲ್ಲ. ಇದು ಮುಂದುವರಿದರೆ, ಇನ್ನು ಮುಂದೆ ಜೈಲು ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ. ನಾನು ಪೊಲೀಸ್ ಅಧಿಕಾರಿಗಳ ಸಭೆ ಕರೆದು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ನಾನು ವರದಿ ಕೇಳಿದ್ದೇನೆ. ವರದಿ ತೃಪ್ತಿಕರವಾಗಿಲ್ಲದಿದ್ದರೆ, ನಾನು ಇನ್ನೊಂದು ಸಮಿತಿಯನ್ನು ರಚಿಸುತ್ತೇನೆ. ಪೊಲೀಸ್ ವರದಿ ಸ್ಪಷ್ಟತೆಯನ್ನು ತರಲು ವಿಫಲವಾದರೆ, ನಾವು ಪ್ರತ್ಯೇಕ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಭಯೋತ್ಪಾದಕರಾಗಲಿ ಅಥವಾ ಬೇರೆ ಯಾರೇ ಆಗಲಿ, ಯಾರಿಗೂ ಫೋನ್ ಲಭ್ಯವಿರುವುದಿಲ್ಲ. ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರಿನಲ್ಲಿ ಇಂತಹ ಘಟನೆಗಳು ಏಕೆ ಪದೇ ಪದೇ ನಡೆಯುತ್ತಿವೆ ಎಂಬುದರ ಕುರಿತು ನಾನು ವರದಿಗಳನ್ನು ಕೇಳಿದ್ದೇನೆ. ಪ್ರಸಾರವಾಗುತ್ತಿರುವ ವೀಡಿಯೊ ಹಳೆಯದ್ದೇ ಎಂದು ನನಗೆ ಖಚಿತವಿಲ್ಲ. ಆದರೆ ತನಿಖೆ ನಡೆಸಬೇಕು. ಅದು ಹಳೆಯದಾಗಿದ್ದರೂ ಸಹ ಇಂತಹ ಘಟನೆಗಳು ಎಂದಿಗೂ ಸಂಭವಿಸಬಾರದು. ನಟ ದರ್ಶನ್ ಕೇವಲ ಒಂದು ದಿಂಬಿಗಾಗಿ ನ್ಯಾಯಾಲಯಕ್ಕೆ ಹೋಗಬೇಕಾಗಿತ್ತು, ಆದರೆ ಈ ಜನರಿಗೆ ಫೋನ್ಗಳು ಸುಲಭವಾಗಿ ಸಿಗುತ್ತವೆ ಎಂದಿದ್ದಾರೆ.












Click it and Unblock the Notifications