Mandya: ಕೆರಗೋಡು ಹನುಮ ಧ್ವಜ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸುವ ಘಟನೆ ಈಗ ವಿವಾದದ ರೂಪ ಪಡೆದುಕೊಂಡಿದೆ. ನಿಯಮ ಬಾಹಿರವಾಗಿ ಧ್ವಜ ಹಾರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪೊಲೀಸರ ಸರ್ಪಗಾವಲಿನಲ್ಲಿ ಹನುಮಧ್ವಜ ಇಳಿಸಲಾಗಿದೆ. ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಸಿಟ್ಟಾಗಿದ್ದು ಗ್ರಾಮವನ್ನು ಬಂದ್ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ಏನೇ ಆದರೂ ಕೂಡ, ಸರ್ಕಾರವೇ ಇದಕ್ಕೆ ನೇರ ಕಾರಣ, ಮಂಡ್ಯದಲ್ಲಿ ಅನುಮತಿ ಪಡೆದು 108 ಅಡಿ ಎತ್ತರದ ಧ್ವಜ ಹಾಕಿದ್ದಾರೆ, ಹನುಮಂತನ ಬಾವುಟ ಕಿತ್ತು ಹಾಕಿರುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರೆ. ಟ್ವೀಟ್ ಮಾಡಿರುವ ಅವರು, "ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು."
ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ.
ಪೂರ್ವನಿಯೋಜಿತ ಕೃತ್ಯ
ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಬಿಜೆಪಿ ನಾಯಕರು ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು.
ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ.
ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.












Click it and Unblock the Notifications