CM Siddaramaiah: ಬಾಡಿಗೆದಾರರಿಗೂ ಉಚಿತ ವಿದ್ಯುತ್; ಯಾರಿಗೆ ಅನ್ವಯವಲ್ಲ?: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜೂನ್ 06: ಕಾಂಗ್ರೆಸ್ ನ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ವಿದ್ಯುತ್ ಉಚಿತ ಗ್ಯಾರಂಟಿ ಘೋಷಣೆಯಲ್ಲಿ ಹಲವು ಗೊಂದಲಗಳಿಗೆ ಎಡೆಮಾಡಿಕೊಟ್ಟಿದ್ದು, ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡುತ್ತೇವೆ, ಬಾಡಿಗೆದಾರರೂ ಸೇರಿ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೀವಿ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟವಾದ ಬಳಿಕ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಎಂಬ ಗೊಂದಲಗಳು ಹೆಚ್ಚಾಗಿದ್ದು, ಈ ಎಲ್ಲಾ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಈ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾರಾರು ಬಡವರು ಇದ್ದಾರೆ, 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುತ್ತಾರೆ. ಅವರಾರು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ. ಈ ಯೋಜನೆ ಬಾಡಿಗೆದಾರರಿಗೂ ಅನ್ವಯ ಆಗುತ್ತೆ. ಇನ್ನೂ ಈ ಯೋಜನೆ ವಾಣಿಜ್ಯವಾಗಿ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್ ಅನ್ವಯ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೇವರಾಜ ಅರಸು ಸ್ಮರಣಾರ್ಥ ಗಿಡ ನೆಟ್ಟ ಸಿಎಂ
ದೇವರಾಜ್ ಅರಸ್ ಅವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿಗಳು ವಿಧಾನಸೌಧದ ಆವರಣದಲ್ಲಿ ಮಡಗಾಸ್ಕರ್ ದೇಶದ ಗಿಡವನ್ನು ನೆಟ್ಟರು. ಸದಾ ಹಸಿರಾಗಿರುವ, ಸುಮಾರು 40 ಅಡಿ ಎತ್ತರ ಬೆಳೆಯುವ, ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡವನ್ನು ಅರಸು ಅವರ ನೆನಪಿಗೆ ನೆಡಲಾಗಿದೆ ಎಂದರು.
ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು.
ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ರಾಜ್ಯದ ಕಾಂಗ್ರೆಸ್ ಸರಕಾರದ ನೀತಿಯನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಇಂದು ಏರ್ಪಡಿಸಿದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ವಿದ್ಯುತ್ ಬೆಲೆ ಏರಿಕೆಯ ಹೊರೆಯನ್ನು ರಾಜ್ಯದ ಜನರ ಮೇಲೆ ಕಾಂಗ್ರೆಸ್ ಸರಕಾರ ವಿಧಿಸಿದ್ದು, ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರವು ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಖಂಡಿಸಿದರು. ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ಕೇಶವ ಪ್ರಸಾದ್, ವಿನಯ ಬಿದರೆ, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಸಿ.ಕೆ.ರಾಮಮೂರ್ತಿ, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ, ನಗರ ಜಿಲ್ಲಾಧ್ಯಕ್ಷರಾದ ನಾರಾಯಣ, ಮಂಜುನಾಥ್, ಎನ್.ಆರ್.ರಮೇಶ್, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ಗೋಪೂಜೆ ನೆರವೇರಿಸಿದ ಕಾರ್ಯಕರ್ತರು ಮತ್ತು ಪ್ರಮುಖರು ಬಿಜೆಪಿ ಜಾರಿಗೊಳಿಸಿದ ಗೋಹತ್ಯಾ ನಿಷೇಧ ಕಾನೂನನ್ನು ಮುಂದುವರಿಸಬೇಕು ಮತ್ತು ಅದನ್ನು ಹಿಂದಕ್ಕೆ ಪಡೆಯದಂತೆ ಸರಕಾರವನ್ನು ಆಗ್ರಹಿಸಿದರು. ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಯಥಾವತ್ ಮುಂದುವರಿಸುವಂತೆ ಒತ್ತಾಯಿಸಲಾಯಿತು.












Click it and Unblock the Notifications